ದಾವಣಗೆರೆ: ತಾಲ್ಲೂಕಿಗೊಂದು ಹೊಸ ಕೆರೆ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿ: ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
4 Min Read

ದಾವಣಗೆರೆ: ಹೂಳೆತ್ತುವ ಕಾಮಗಾರಿಗಳ ಜೊತೆಗೆ ಅವಶ್ಯಕತೆ ಇರುವ ಕಡೆಗಳಲ್ಲಿ ಹೊಸ ಕೆರೆಗಳನ್ನು ನಿರ್ಮಿಸಲು ಆದ್ಯತೆ ನೀಡಿ ಸ್ಥಳ ಪರಿಶೀಲನೆ ನಡೆಸಲು ತಹಶೀಲ್ದಾರ್ ಗಳಿಗೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೆಲ-ಜಲ, ಪರಿಸರ ವೃದ್ಧಿ, ಮಳೆನೀರು ಕೋಯ್ಲು, ಸಸಿ ನಡುವುದು ಮತ್ತು ಜಿಲ್ಲೆಯ ಕೆರೆಗಳ ಸರ್ಮಪಕ ನಿರ್ವಹಣೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಊರಿಗೊಂದು ಕೆರೆ ನಿರ್ಮಿಸಲು ಸಾಧ್ಯವಾಗದಿದ್ದರೂ, ತಾಲೂಕಿಗೊಂದಾದರೂ ಹೊಸ ಕೆರೆಯನ್ನು ನಿರ್ಮಿಸಬೇಕು.‌ಇದಕ್ಕಾಗಿ ತಹಶೀಲ್ದಾರರುಗಳಿಗೆ ಸೂಚನೆ ನೀಡಲಾಗಿದೆ. ಹೊಸ ಕೆರೆಗಳ ನಿರ್ಮಾಣಕ್ಕೆ ಜಾಗದ ಲಭ್ಯತೆಯನ್ನು ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದರು.

ಜಿಲ್ಲೆಯ ವಿವಿಧ ಕೆರೆಗಳ ಪುನಶ್ಚೇತನ ಕಾರ್ಯ ಭರದಿಂದ ಸಾಗುತ್ತಿದ್ದು, ಇದೀಗ ದಾವಣಗೆರೆ ಹೊಸಹಳ್ಳಿ,ಚನ್ನಗಿರಿಯ ಬಸಾಪುರ, ನ್ಯಾಮತಿಯ ಕೊಡಚಗೊಂಡನಹಳ್ಳಿಯ ಮೂರು ಪ್ರಮುಖ ಕೆರೆಗಳ ಅಭಿವೃದ್ಧಿ ಕಾಮಗಾರಿಗಳ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ ಎಂದರು.

ಕೆರೆ ಎಂದು ಇನ್ನೂ ವರ್ಗೀಕರಣಗೊಳ್ಳದೆ, ಆದರೆ ನೀರು ನಿಲ್ಲುತ್ತಿರುವ ಜಾಗಗಳನ್ನು ಗುರುತಿಸಿ, ಅವುಗಳ ವಿಸ್ತೀರ್ಣವನ್ನು ಹೆಚ್ಚಿಸಿ ಕೆರೆ ಎಂದು ದಾಖಲೆಗಳಲ್ಲಿ ಸೇರ್ಪಡೆಗೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಜಿಲ್ಲೆಯ ಇತರೆ ಕೆರೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಮತ್ತು ಕೆರೆಗಳಿಗೆ ಹಳ್ಳ ಹಾಗೂ ನಾಲೆಗಳ ಮೂಲಕ ನೀರು ಬರುವಂತೆ ಚಾನೆಲ್‌ಗಳನ್ನು ವ್ಯವಸ್ಥಿತಗೊಳಿಸಲು ಸೂಚಿಸಿದರು.ರೈತರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಕೆರೆಗಳ ನಿರ್ಮಾಣ ಮತ್ತು ಅಭಿವೃದ್ಧಿ ಕಾರ್ಯಗಳು ಅತ್ಯಂತ ಉಪಯುಕ್ತವಾಗಲಿವೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹೊಸ ಇಂಗು ಕೆರೆಗಳ ನಿರ್ಮಾಣಕ್ಕೆ ವಿಶೇಷ ಒತ್ತು ನೀಡಲಾಗುತ್ತಿದೆ. ಹೊಸ ಇಂಗು ಕೆರೆ ನಿರ್ಮಾಣ ಮಾಡಲು ಈಗಾಗಲೇ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಕಳುಹಿಸಿಕೊಡಲಾಗಿದೆ ಎಂದರು.

ಸಿಸಿ ರಸ್ತೆಗಳಿಗೆ ಕಡ್ಡಾಯವಾಗಿ 200 ಅಡಿಗೆ ಒಂದರಂತೆ ಪೈಪ್ ಹಾಕಿ

ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಸಿಸಿ ರಸ್ತೆಗಳನ್ನು ನಿರ್ಮಿಸುವಾಗ ಅಥವಾ ಪೇವರ್ಸ್ ಅಳವಡಿಸುವಾಗ ದೂರದೃಷ್ಟಿಯನ್ನಿಟ್ಟುಕೊಂಡು ಕಾಮಗಾರಿ ನಡೆಸಲು ಆದೇಶಿಸಲಾಗಿದೆ. ರಸ್ತೆ ನಿರ್ಮಾಣವಾದ ಬಳಿಕ ಯುಟಿಲಿಟಿ (ವಿದ್ಯುತ್, ಇಂಟರ್ನೆಟ್, ನೀರು) ಕೇಬಲ್‌ಗಳ ಅಳವಡಿಕೆಗಾಗಿ ಪದೇ ಪದೇ ರಸ್ತೆಯನ್ನು ಅಗೆಯುವುದನ್ನು ತಪ್ಪಿಸಲು ಒಂದು ಪ್ರಮುಖ ನಿರ್ಧಾರ ಕೈಗೊಳ್ಳಲಾಗಿದೆ. ಅದರಂತೆ, ಇನ್ನು ಮುಂದೆ ನಿರ್ಮಿಸಲಾಗುವ ಸಿಸಿ ರಸ್ತೆಗಳಲ್ಲಿ ಕಡ್ಡಾಯವಾಗಿ ಪ್ರತಿ 200 ಅಡಿಗೆ ಒಂದರಂತೆ ರಸ್ತೆಯ ಅಡ್ಡಲಾಗಿ (Crosswise) ಕನಿಷ್ಠ 2 ಇಂಚಿನ HDPE (High-Density Polyethylene) ಪೈಪ್‌ಗಳನ್ನು ಮೊದಲೇ ಅಳವಡಿಸಲು ಇಲಾಖೆಯ ಡಿಪಿಆರ್ (DPR) ನಲ್ಲೇ ಸೇರಿಸಲು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಇದರಿಂದ ರಸ್ತೆಗಳ ಆಯಸ್ಸು ಹೆಚ್ಚಲಿದ್ದು, ಸಾರ್ವಜನಿಕರ ಹಣ ಪೋಲಾಗುವುದು ತಪ್ಪುತ್ತದೆ ಎಂದು ತಿಳಿಸಿದರು.

ಮರಗಳ ಬುಡದಲ್ಲಿ ಕಾಂಕ್ರೀಟ್ ಹಾಕಬೇಡಿ

ಉದ್ಯಾನವನಗಳು ಮತ್ತು ರಸ್ತೆಗಳ ಬದಿಯಲ್ಲಿ ಗಿಡಗಳನ್ನು ನೆಡುವುದಷ್ಟೇ ಅಲ್ಲದೆ, ಅವುಗಳಿಗೆ ನಿರಂತರವಾಗಿ ನೀರು ಉಣಿಸಿ ಪೋಷಿಸುವುದು ಇಲಾಖೆಗಳ ಜವಾಬ್ದಾರಿಯಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಮರಗಳ ಬುಡದಲ್ಲಿ ಕಾಂಕ್ರೀಟ್ ಹಾಕಿ ಮರಗಳು ಉಸಿರಾಡಲು ತೊಂದರೆಯಾಗದಂತೆ ಎಚ್ಚರಿಕೆ ವಹಿಸಲು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಕಂದಾಯ, ಅರಣ್ಯ, ಮತ್ತು ಮಹಾನಗರ ಪಾಲಿಕೆ ಸೇರಿದಂತೆ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕಾಗಿದೆ ಎಂದರು.

ಪರಿಸರ ಸಮತೋಲನವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ವಿವಿಧ ಸಂಘ-ಸಂಸ್ಥೆಗಳು ಹಾಗೂ ಸ್ವಸಹಾಯ ಸಂಘಗಳ ಸಹಯೋಗದೊಂದಿಗೆ ಸುಮಾರು 1,000 ಸಸಿಗಳನ್ನು ನೆಡಲಾಗಿದೆ. ಕಚೇರಿಗಳ ಆವರಣದಲ್ಲಿ ಈಗಾಗಲೇ ಸಸಿಗಳನ್ನು ನೆಟ್ಟು ಪೋಷಿಸಲಾಗುತ್ತಿದ್ದು, ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಹಸಿರು ವಿಕಾಸಕ್ಕೆ ಕೊಡುಗೆ ನೀಡಬೇಕೆಂದು ತಿಳಿಸಿದರು.

ಚಾನಲ್‌ನ ಹೂಳು ತೆಗೆಯಲು ಮನವಿ

ಚಾನಲ್‌ನಲ್ಲಿ ಬೆಳೆದಿರುವ ಗಿಡ-ಮರಗಳು ಹಾಗೂ ಜೊಂಡು ಹುಲ್ಲುಗಳನ್ನು (ವೀಡ್ಸ್) ತೆರವುಗೊಳಿಸಲು ಅರಣ್ಯ ಇಲಾಖೆಯು ಸಮ್ಮತಿ ಸೂಚಿಸಿದೆ. ರೈತರಿಗೆ ನೀರು ಬಿಟ್ಟಾಗ ಯಾವುದೇ ಸಮಸ್ಯೆಯಾಗದಂತೆ ತಡೆಯಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ, ಯಂತ್ರೋಪಕರಣಗಳ (ಮಿಷನರಿ) ಸಹಾಯದಿಂದ ಚಾನಲ್‌ನ ಹೂಳನ್ನು ಆದಷ್ಟು ಬೇಗ ತೆಗೆಯಲು ಮಾನ್ಯ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಇದಕ್ಕೆ ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದರು.

ಮಳೆನೀರು ಕೊಯ್ಲು ಕಡ್ಡಾಯ: ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು ಸಾರ್ವಜನಿಕರ ಅನುಕೂಲಕ್ಕಾಗಿ ಕಡ್ಡಾಯವಾಗಿ ಮಳೆನೀರು ಕೊಯ್ಲು ವ್ಯವಸ್ಥೆಯನ್ನು ಅಳವಡಿಸಿಕೊಳ್ಳಬೇಕು. ಇದರೊಂದಿಗೆ ಕಚೇರಿಗಳ ಅನಗತ್ಯ ವಿದ್ಯುತ್ ವೆಚ್ಚವನ್ನು ಕಡಿಮೆ ಮಾಡಲು ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ “ಸೋಲಾರ್ ರೂಫ್ ಟಾಪ್” (ಸೌರಶಕ್ತಿ ಫಲಕ) ಅಳವಡಿಸಲು ಪ್ರಕ್ರಿಯೆ ಆರಂಭಿಸಬೇಕು, ಜೆ.ಹೆಚ್. ಪಾಟೇಲ್‌ ಬಡಾವಣೆಯಲ್ಲಿರುವ ಬಾಲಭವನದಲ್ಲಿ ಕಡ್ಡಾಯವಾಗಿ ಮಳೆನೀರು ಕೊಯ್ಲು ಪದ್ಧತಿಯನ್ನು ಜಾರಿಗೆ ತರಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ನಿರ್ದೇಶನ ನೀಡಲಾಗಿದ್ದು, ಈ ಕುರಿತು ಕೈಗೊಂಡ ಕ್ರಮಗಳ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಕರ್ನಾಟಕದ ಇತಿಹಾಸದಲ್ಲಿ ಕೆರೆಗಳ ನಿರ್ಮಾಣಕ್ಕೆ ಅಪಾರ ಕೊಡುಗೆಯಿದೆ. “ಹಿಂದೆ ಕೆಂಪೇಗೌಡರ ತಾಯಿ ಊರಿಗೊಂದು ಕೆರೆ ಕಟ್ಟಿಸಲು ಹೇಳುತ್ತಿದ್ದರು, ಆ ಕಾರಣಕ್ಕಾಗಿಯೇ ನಮ್ಮ ರಾಜ್ಯದಲ್ಲಿ ಇಷ್ಟೊಂದು ಕೆರೆಗಳಿವೆ. ಹೊಸ ಕೆರೆಗಳನ್ನು ನಿರ್ಮಿಸುವುದರಿಂದ ನೂರಾರು ಜನರಿಗೆ ಅನುಕೂಲವಾಗುತ್ತದೆ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್‌, ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್‌ ಕುಮಾರ್, ಹೊನ್ನಾಳಿ ಉಪವಿಭಾಗಾಧಿಕಾರಿ ಹೆಚ್.ಬಿ.ಚನ್ನಪ್ಪ, ಡಿವೈಎಸ್ಪಿ ಶರಣಪ್ಪ,ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್‌, ಜಂಟಿ ಕೃಷಿ ನಿರ್ದೇಶಕ ಜಿಯಾವುಲ್ಲಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಸಾಮಾಜಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ನವೀನ್‌, ರೈತ ಮುಖಂಡ ಬಲ್ಲೂರು ರವಿಕುಮಾರ್‌ ಹಾಗೂ ಇನ್ನಿತರೆ ರೈತ ಮುಖಂಡರುಗಳು, ತಹಶೀಲ್ದಾರುಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *