ದಾವಣಗೆರೆ: ಜಿಲ್ಲೆಯಲ್ಲಿ ಈಗಾಗಲೇ ಒಂದು ಗೋಶಾಲೆಗೆ ಸರ್ಕಾರದಿಂದ ಅನುಮೋದನೆ ದೊರತಿದ್ದು ಕಾಮಗಾರಿ ಪ್ರಾರಂಭಿಸಲಾಗಿದೆ. ಇದರೊಂದಿಗೆ ಹೆಚ್ಚುವರಿಯಾಗಿ ದಾವಣಗೆರೆ ಜಿಲ್ಲೆಗೆ ಮುಖ್ಯಮಂತ್ರಿಗಳು ಎರಡು ಗೋ ಶಾಲೆ ಪ್ರಾರಂಭಿಸಲು ಅನುಮೋದನೆ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.
ಬುಧವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಸರ್ಕಾರಿ ಗೋ ಶಾಲೆ ಅನುಷ್ಠಾನ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರ ಈಗಾಗಲೇ ಪ್ರತಿ ಜಿಲ್ಲೆಗೂ ಒಂದು ಗೋಶಾಲೆ ಮಂಜೂರು ಮಾಡಿದ್ದು, ಅದರಂತೆ ದಾವಣಗೆರೆ ತಾಲ್ಲೂಕು ಹೊಸಹಳ್ಳಿ ಸಮೀಪ 7 ಎಕರೆ ಜಾಗ ಗುರುತಿಸಿ ಗೋಶಾಲೆ ಕಾಮಗಾರಿ ಆರಂಭಿಸಲಾಗಿದೆ. ಇದರೊಂದಿಗೆ ಮಾನ್ಯ ಮುಖ್ಯಮಂತ್ರಿಗಳು ಜಿಲ್ಲೆಗೆ 2 ಹೆಚ್ಚುವರಿ ಗೋಶಾಲೆಗಳನ್ನು ಮಂಜೂರು ಮಾಡಿದ್ದು ಗೋಶಾಲೆ ನಿರ್ಮಾಣಕ್ಕಾಗಿ ಜಗಳೂರು ಹಾಗೂ ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕುಗಳಲ್ಲಿ ಗೋಶಾಲೆ ನಿರ್ಮಾಣಕ್ಕೆ ಭೂಮಿ ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮುಖ್ಯಮಂತ್ರಿಗಳು ಗೋಶಾಲೆಗಳಿಗೆ 10 ಎಕರೆ ಜಮೀನು ಮೀಸಲಿರಿಸುವಂತೆ ತಿಳಿಸಿದ್ದಾರೆ ಎಂದರು.
ಸಭೆಯಲ್ಲಿ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕರಾದ ಚಂದ್ರಶೇಖರ್ ಸುಂಕದ್, ಪಾಲಿ ಕ್ಲಿನಿಕ್ ಉಪ ನಿರ್ದೇಶಕರಾದ ವೀರೇಶ್, ತೋಟಗಾರಿಕಾ ಇಲಾಖೆ ಉಪ ನಿರ್ದೇಶಕರಾದ ರಾಘವೇಂದ್ರ, ತಾಲ್ಲೂಕು ಪಂಚಾಯಿತಿ ಇಒ ಆನಂದ್, ರೈಲ್ವೆ ಭೂಸ್ವಾಧೀನಾಧಿಕಾರಿ ರೇಷ್ಮಾ ಹಾನಗಲ್, ನಿರ್ಮಿತಿ ಕೇಂದ್ರದ ರವಿ, ಡಾ.ರಾಮ್ ಪ್ರಸಾದ್ ಕುಲಕರ್ಣಿ, ಡಾ.ಜಗದೀಶ್, ಡಾ.ಶಂಕರಪ್ಪ, ಡಾ.ರವಿಚಂದ್ರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.



