Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲೆಯಲ್ಲಿ ಬೇಡ ಜಂಗಮ ಹೆಸರಿನಲ್ಲಿ ನಕಲಿ ಪ.ಜಾತಿ ಪ್ರಮಾಣ ಪತ್ರ ವಿತರಣೆ ಆಗಿಲ್ಲ; ಜಿಲ್ಲಾಧಿಕಾರಿ

FB IMG 1663818561523

ದಾವಣಗೆರೆ

ದಾವಣಗೆರೆ: ಜಿಲ್ಲೆಯಲ್ಲಿ ಬೇಡ ಜಂಗಮ ಹೆಸರಿನಲ್ಲಿ ನಕಲಿ ಪ.ಜಾತಿ ಪ್ರಮಾಣ ಪತ್ರ ವಿತರಣೆ ಆಗಿಲ್ಲ; ಜಿಲ್ಲಾಧಿಕಾರಿ

ದಾವಣಗೆರೆ: ಜಿಲ್ಲೆಯಲ್ಲಿ ಬೇಡ ಜಂಗಮ ಹೆಸರಿನಲ್ಲಿ ನಕಲಿ ಪ.ಜಾತಿ ಪ್ರಮಾಣ ಪತ್ರ ವಿತರಣೆ ಆಗಿಲ್ಲ ಎಂದು ಜಿಲ್ಲಾಧಿಕಾರಿ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ವಿತರಣೆಯ ಸಂದರ್ಭದಲ್ಲಿ ದಾಖಲೆಗಳನ್ನು ಪರಿಶೀಲಿಸುವ ಮೂಲಕ ನೈಜ ಪರಿಶಿಷ್ಟ ಜಾತಿಯ ಜನರಿಗೆ ಪ್ರಮಾಣಪತ್ರ ವಿತರಿಸಲಾಗಿದೆ. ಬೇಡ ಜಂಗಮರ ಹೆಸರಿನಲ್ಲಿ ಇದುವರೆಗೂ ಜಿಲ್ಲೆಯಲ್ಲಿ ಯಾವುದೇ ನಕಲಿ ಎಸ್.ಸಿ ಪ್ರಮಾಣ ಪತ್ರ ವಿತರಣೆ ಆಗಿಲ್ಲ, ಒಂದು ವೇಳೆ ಅರ್ಜಿ ಸಲ್ಲಿಸಿದ್ದರೂ ಕೂಡ ಆ ರೀತಿಯ ಅರ್ಜಿಗಳ ದಾಖಲೆಗಳನ್ನು ಖುದ್ದಾಗಿ ತಹಶೀಲ್ದಾರರು ಕೂಲಂಕುಷವಾಗಿ ಪರಿಶೀಲಿಸಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ನಕಲಿ ಎಸ್.ಸಿ ಪ್ರಮಾಣ ಪತ್ರ ಪಡೆದವರ ಮಾಹಿತಿ ದೊರೆತರೆ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಕುಂದುವಾಡ ಮಂಜುನಾಥ್ ಮಾತನಾಡಿ, ದಾವಣಗೆರೆ ತಾಲ್ಲೂಕಿನ ಗ್ರಾಮವೊಂದರಲ್ಲಿ ಯುವಕ, ಯುವತಿಯೊಬ್ಬರಿಗೆ ಮೊಬೈಲ್‍ನಲ್ಲಿ ಮೆಸೇಜ್ ಮಾಡಿದ ಎನ್ನುವ ಕಾರಣಕ್ಕಾಗಿ ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿತ್ತು, ಹಲ್ಲೆ ನಡೆಸಿದವರಲ್ಲಿ ಓರ್ವ ಗ್ರಾಮ ಪಂಚಾಯಿತಿ ಸದಸ್ಯನಾಗಿದ್ದು ಆತನ ಸದಸ್ಯತ್ವ ರದ್ದುಗೊಳಿಸಬೇಕು ಎಂದರು.
ಹಳೇಕುಂದುವಾಡ ಗ್ರಾಮದಲ್ಲಿ ಪರಿಶಿಷ್ಟ ಸಮುದಾಯದ ಜಮೀನು ಇಲ್ಲದ ಕಡೆ ವಿಶೇಷ ಘಟಕ ಯೋಜನೆ ಅನುದಾನದಲ್ಲಿ ಕಾಲುವೆ ಕಾಮಗಾರಿ ನಡೆಸಿ ಅನುದಾನವನ್ನು ಬಳಕೆ ಮಾಡಿಕೊಳ್ಳಲಾಗಿದೆ, ಈ ಕುರಿತು ಕ್ರಮ ಕೈಗೊಳ್ಳಬೇಕು. ಅನೇಕ ವರ್ಷಗಳಿಂದ ನಗರದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿದ್ದ ಡಾ.ಬಿ.ಆರ್ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣ ನೆನೆಗುದಿಗೆ ಬಿದ್ದಿದ್ದು, ನಗರದ ಮಧ್ಯ ಭಾಗದಲ್ಲಿ ಸೂಕ್ತ ಸ್ಥಳ ಗುರುತಿಸಿ ಶೀಘ್ರದಲ್ಲಿಯೇ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನಡೆಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ ಎಸ್‍ಸಿಪಿ ಅನುದಾನ ದುರ್ಬಳಕೆ ಕುರಿತು ಸತ್ಯಾಸತ್ಯತೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಪರಿಹರಿಸಿ ಭವನ ನಿರ್ಮಾಣಕ್ಕೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಮತ್ತೋರ್ವ ಸದಸ್ಯ ನಾಗರಾಜ್ ಮಾತನಾಡಿ, ಜಿಲ್ಲೆಯ ವಸತಿಯುತ ಪ್ರೌಢ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ, ಆದ್ದರಿಂದ ಗುತ್ತಿಗೆ ಆಧಾರ ಅಥವಾ ಪರ್ಯಾಯ ವ್ಯವಸ್ಥೆಯ ಮೂಲಕ ಶಿಕ್ಷಕರನ್ನು ನೇಮಕ ಮಾಡಬೇಕು. ಆಹಾರದ ಗುಣಮಟ್ಟದ ಬಗ್ಗೆಯೂ ದೂರುಗಳಿದ್ದು ಪರಿಶೀಲಿಸಬೇಕು ಎಂದರು.

ಸದಸ್ಯ ಆವರಗೆರೆ ವಾಸು ಮಾತನಾಡಿ, ಆನೆಕೊಂಡದ ಬಳಿ ಇರುವ ಮಟ್ಟಿಕಲ್ಲು ನಗರ ಪ್ರದೇಶದಲ್ಲಿ ಪ.ಜಾತಿ ಮತ್ತು ಪ.ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ, ಅಲ್ಲಿಯ ಜನರಿಗೆ ಸೂಕ್ತ ಮೂಲಭೂತ ಸೌಕರ್ಯಗಳಿಲ್ಲ ಮತ್ತು ಶೌಚಾಲಯ ವ್ಯವಸ್ಥೆ ಇಲ್ಲ, ದಾವಣಗೆರೆ ಮಹಾನಗರ ಪಾಲಿಕೆ ಅವರು ಪ್ರತಿಯೊಂದು ಕುಟುಂಬಗಳಿಗೆ ಶೌಚಾಲಯ ನಿರ್ಮಾಣ ಮಾಡಿಕೊಡಬೇಕೆಂದರು.

ಸಭೆಯಲ್ಲಿ ಉಪಸ್ಥಿತರಿದ್ದ ಪಾಲಿಕೆ ಆಯುಕ್ತ ವಿಶ್ವನಾಥ್.ಪಿ.ಮುದ್ದಜ್ಜಿ ಪ್ರತಿಕ್ರಿಯಿಸಿ, ಶೌಚಾಲಯ ಹಾಗೂ ಇನ್ನಿತರ ಮೂಲಭೂತ ಸೌಲಭ್ಯ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಸದಸ್ಯ ಅರವಿಂದ್ ಮಾತನಾಡಿ, ಜಗಳೂರು ತಾಲ್ಲೂಕಿನ ಮೂಡಲ ಮಾಚಿಕೆರೆ ಗ್ರಾಮಕ್ಕೆ ಬಸ್ ವ್ಯವಸ್ಥೆ ಇಲ್ಲ, ತಕ್ಷಣ ಬಸ್ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಜಿಲ್ಲೆಯಾದ್ಯಂತ ಗ್ರಾಮೀಣ ಪ್ರದೇಶದಲ್ಲಿ ಕಾನೂನು ಜಾಗೃತಿ ಕಾರ್ಯಕ್ರಮ ಮಾಡುವ ಮೂಲಕ ಅಪರಾಧ ಮುಕ್ತ ಗ್ರಾಮಗಳ ಘೋಷಣೆಗೆ ಮುಂದಾಗಬೇಕು ಎಂದರು.

ಸಭೆಯಲ್ಲಿ ಪೆÇಲೀಸ್ ಇಲಾಖೆಯಲ್ಲಿ ದಾಖಲಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ಪ್ರಕರಣಗಳ ಸ್ವರೂಪ, ಬಿ.ರಿಪೋರ್ಟ್ ಆದ ಪ್ರಕರಣಗಳು, ಚಾರ್ಜ್ ಶೀಟ್ ಸಲ್ಲಿಕೆ ಆಗಿರುವ ಪ್ರಕರಣಗಳು ಹಾಗೂ ತನಿಖಾ ಹಂತದಲ್ಲಿರುವ ಪ್ರಕರಣಗಳು, ದೌರ್ಜನ್ಯಕ್ಕೊಳಗಾದವರಿಗೆ ಪರಿಹಾರದ ಕುರಿತು ಚರ್ಚಿಸಲಾಯಿತು.

ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಸಕ್ತ ವರ್ಷದಲ್ಲಿ 47 ಪ್ರಕರಣಗಳು ದಾಖಲಾಗಿದ್ದು ಇದರಲ್ಲಿ 3 ಕ್ಕೆ ಬಿ ರಿಪೋರ್ಟ್ ಹಾಕಲಾಗಿದೆ. 5 ನ್ಯಾಯಾಲಯದ ತಡೆಯಾಜ್ಞೆ ಹಾಗೂ 39 ತನಿಖೆ ಹಂತದಲ್ಲಿವೆ. ಇದರಲ್ಲಿ 24 ಪ್ರಕರಣಗಳಲ್ಲಿ 22 ಕ್ಕೆ ಎಫ್‍ಐಆರ್ ಹಂತದಲ್ಲಿ ಪರಿಹಾರವನ್ನು 28 ಸಂತ್ರಸ್ತರಿಗೆ 7.5 ಲಕ್ಷ ವಿತರಣೆ ಮಾಡಲಾಗಿದೆ.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್, ಉಪವಿಭಾಗಾಧಿಕಾರಿ ದುರ್ಗಾಶ್ರೀ, ಹುಲ್ಲುಮನಿ ತಿಮ್ಮಣ್ಣ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಕೌಸರ್ ರೇಷ್ಮಾ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಮೇಶ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜನಾಯ್ಕ ಸೇರಿದಂತೆ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು, ಪದಾಧಿಕಾರಿಗಳು ಹಾಜರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top