ಬೆಂಗಳೂರು: ದಾವಣಗೆರೆ ಜಿಲ್ಲಾ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿ (ಡಿಸಿಸಿ ಬ್ಯಾಂಕ್) ಎಂಟು ವಾರಗಳಲ್ಲಿ ಚುನಾವಣೆ ನಡೆಸುವಂತೆ ರಾಜ್ಯ ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಈ ವಿಚಾರವಾಗಿ ಡಿಸಿಸಿ ಬ್ಯಾಂಕ್ಗಳು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ.
ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ ಹಾಗೂ ದಾವಣಗೆರೆ ಜಿಲ್ಲಾ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿಗೆ ಎಂಟು ವಾರಗಳಲ್ಲಿ ಚುನಾವಣೆ ನಡೆಸಬೇಕು. ಅದಕ್ಕಾಗಿ ಸರ್ಕಾರ ಸೇರಿದಂತೆ ಸಂಬಂಧಪಟ್ಟ ಎಲ್ಲ ಭಾಗಿದಾರರು, ಪ್ರಾಧಿಕಾರಗಳು ತಕ್ಷಣ ಕಾನೂನು ರೀತಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆದೇಶದಲ್ಲಿ ನ್ಯಾಯಪೀಠ ತಿಳಿಸಿದೆ.
ಮೈಸೂರು-ಚಾಮರಾಜನಗರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿಗೆ 2023ರ ನ.11ಕ್ಕೆ ಆಡಳಿತ ಮಂಡಳಿಯ ಐದು ವರ್ಷದ ಕಾಲಾವಧಿ ಮುಗಿದಿತ್ತು. 2023ರ ಅ.27ರಿಂದ ನ.4ರವರೆಗೆ ಚುನಾವಣೆ ನಡೆಸಲು 2023ರ ಸೆ.1ರಂದು ಚುನಾವಣಾಧಿಕಾರಿ ಅಧಿಸೂಚನೆ ಹೊರಡಿಸಿದ್ದರು. ಈ ಮಧ್ಯೆ ಮತದಾರರ
ಪಟ್ಟಿಯಲ್ಲಿನ ಗೊಂದಲಗಳ ಹಿನ್ನೆಲೆಯಲ್ಲಿ ಸೆ.2ರಂದು ಚುನಾವಣಾವೇಳಾಪಟ್ಟಿಯನ್ನು
ಹಿಂಪಡೆಯಲಾಗಿತ್ತು. ಇದನ್ನು ಪ್ರಶ್ನಿಸಿ ಬ್ಯಾಂಕ್ನ ಕೆಲ ನಿರ್ದೇಶಕರು ಹೈಕೋರ್ಟ್ಗೆ
ಅರ್ಜಿ ಸಲ್ಲಿಸಿದ್ದರು. ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ವಿಷಯವೂ ಒಂದೇ ಆಗಿದ್ದರಿಂದ ಆ ಅರ್ಜಿಯನ್ನೂ ಸೇರಿಸಿ ಏಕಸದಸ್ಯ ನ್ಯಾಯಪೀಠ, ಎಂಟು ವಾರಗಳಲ್ಲಿ ಚುನಾವಣೆ ನಡೆಸುವಂತೆ ರಾಜ್ಯ ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದೆ.



