ದಾವಣಗೆರೆ: ಮಂದಿನ ತಿಂಗಳು ಮಾರ್ಚ್ 19 ಮತ್ತು 20ರಂದು ನಡೆಯುವ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರಾ ಮಹೋತ್ಸವ ಅಂಗವಾಗಿ ದೇವಸ್ಥಾನ ಆವರಣದಲ್ಲಿ ಇಂದು (ಫೆ.13) ಹಂದರಗಂಬ ಪೂಜೆ ನೆರವೇರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಈ ವೇಳೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಡಾ. ಪ್ರಭಾ ಮಲ್ಲಿಕಾರ್ಜುನ್ ಹಾಗೂ ಭಕ್ತರು ಹಂದರಗಂಬ ಪೂಜೆ ನೆರವೇರಿಸಿದರು. ಪೂಜೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿ ಜಿಲ್ಲಾ ಉಸ್ತುವಾರಿ ಸಚಿವರು, ಜಾತ್ರಾ ಮಹೋತ್ಸವ ಅಂಗವಾಗಿ ಎಲ್ಲಾ ವಾರ್ಡ್ ಗಳಲ್ಲಿಯೂ ಸ್ವಚ್ಚತೆ ಕಾಪಾಡುವಂತೆ ಪಾಲಿಕೆ ಸದಸ್ಯರು, ಆಯುಕ್ತರು, ಮೇಯರ್ ಹಾಗೂ ಉಪಮೇಯರ್ ಗೆ ಸೂಚನೆ ನೀಡಲಾಗಿದೆ ತಿಳಿಸಿದರು.
ಮಾ.19, 20 ಜಾತ್ರೆ ಅದ್ಧೂರಿಯಾಗಿ ನಡೆಯಲಿದೆ. ಇಲ್ಲದೆ ಮೂರು ದಿನ ಕುಸ್ತಿ ಪಂದ್ಯ, ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಜಾತ್ರೆಯು ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುತ್ತದೆ. ಈ ಜಾತ್ರಗೆ ಹಂದರಗಂಬ ಪೂಜೆ ನೆರವೇರಿಸಿ ಚಾಲನೆ ಕೊಡಲಾಗಿದೆ. ಜಾತ್ರೆಯು ಯಶಸ್ವಿಯಾಗಲು, ಸುಗಮ ಹಾಗೂ ಯಾವುದೇ ತೊಂದರೆ ಇಲ್ಲದೇ ನಡೆಯುವಂತಾಗಲು ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ವತಿಯಿಂದ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಹಾಗೂ ಸೂಕ್ತ ಸೌಲಭ್ಯಗಳನ್ನು ಒದಗಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.



