ದಾವಣಗೆರೆ: ಜಿಲ್ಲೆಯಲ್ಲಿ ಉಷ್ಣಾಂಶ ತಗ್ಗಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ 1 ಕೋಟಿ ಸಸಿ ನೆಡಲು ಕಾರ್ಯಕ್ರಮ ರೂಪಿಸಲಾಗಿದೆ. ಅದರಂತೆ ತಾವೆಲ್ಲರೂ ಪರಿಸರವನ್ನು ಮಾಲಿನ್ಯ ಮಾಡದೇ ನಮ್ಮ ಸುತ್ತಲಿನ ವಾತಾವರಣವನ್ನು ಸ್ವಚ್ಚವಾಗಿಡುವ ಮೂಲಕ ನೈಸರ್ಗಿಕ ಪರಿಸರವುಳ್ಳ್ಳ ಸಮಾಜದ ಕನಸನ್ನು ಭವಿಷ್ಯದ ಪೀಳಿಗೆಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಹೇಳಿದರು.
ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ದಾವಣಗೆರೆ ವಿಶ್ವವಿದ್ಯಾಲಯ ಸಹಯೋಗದಲ್ಲಿ ಆಯೋಜಿಸಲಾದ ವಿಶ್ವಪರಿಸರ ದಿನಾಚರಣೆ (environment day) ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ಸಮಾಜ, ದೇಶ ಬದಲಾವಣೆ ಆಗಬೇಕಾದರೆ ಅದು ಯುವ ಸಮುದಾಯದಿಂದ ಮಾತ್ರ ಸಾಧ್ಯ, ಪ್ರಕೃತಿಗೆ ತದ್ವಿರುದ್ಧವಾದ ವಸ್ತುಗಳನ್ನು ಬಳಸದೇ, ಎಲ್ಲೆಂದರಲ್ಲಿ ಎಸೆಯದೇ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿಯಾಗುವ ನಿರ್ದಿಷ್ಟ ಸ್ಥಳಗಳಲ್ಲಿ ಹಾಕುವುದು ಸೂಕ್ತ. ಅಲ್ಲದೇ ಪರಿಸರಕ್ಕೆ ಪೂರಕವಾದ ವಸ್ತುಗಳನ್ನು ಬಳಸುವುದರಿಂದ ಪರಿಸರ ಮಾಲಿನ್ಯ ಉಂಟಾಗುವುದಿಲ್ಲ. ಆದ್ದರಿಂದ ಯುವಕರು ಈ ನಾಡು-ನುಡಿ, ನಿಸರ್ಗದ ಪ್ರಕೃತಿಯ ಕುರಿತು ಧನಾತ್ಮಕ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು.
ತಮ್ಮ ಮನೆಯ ಸುತ್ತಲಿನ ಪ್ರದೇಶವನ್ನು ಸ್ವಚ್ಚವಾಗಿಡುವ ಮೂಲಕ ಉತ್ತಮ ಪರಿಸರ, ವಾತಾವರಣ ನಿರ್ಮಾಣ ಮಾಡಬೇಕು. ಇದೆಲ್ಲವೂ ಮೊದಲು ನಮ್ಮಿಂದಲೇ ಸುಧಾರಣೆಯಾಗಬೇಕು. ಆಗ ಮಾತ್ರ ದೇಶ ಪ್ರಗತಿಯತ್ತ ಸಾಗಲು ಸಾಧ್ಯ, ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಯನ್ನು ಮನಗಂಡು ಪೋಷಕರ ನಂಬಿಕೆ ಹುಸಿಗೊಳಿಸದೇ ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ಬಾಳಬೇಕು ಎಂದು ಕಿವಿ ಮಾತು ಹೇಳಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಜಿ.ಗೋಪ್ಯಾ ನಾಯ್ಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ವೇಳೆ ವಿಶ್ವವಿದ್ಯಾಲಯ ಆವರಣದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಡಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅಧಿಕೃತವಾಗಿ ಚಾಲನೆ ನೀಡುವ ಮೂಲಕ ಪರಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ದಾವಣಗೆರೆ ವಿಶ್ವವಿದ್ಯಾಲಯದ ಕುಲಸಚಿವ ಡಾ.ಜಿ.ಬಿ. ಗಂಟಿ, ಹಣಕಾಸು ಅಧಿಕಾರಿ ದ್ಯಾಮನಗೌಡ ಮುದ್ದನಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್, ಜೈನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಸಲಹೆಗಾರ ಡಾ.ಎಸ್.ಮಂಜಪ್ಪ, ಹಿರಿಯ ಪರಿಸರ ಅಧಿಕಾರಿ ರಮೇಶ್ ಡಿ. ನಾಯಕ್, ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕ ಮಹಾಂತೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.