ದಾವಣಗೆರೆ: ಕರಾಳ ಕೃಷಿ ಕಾಯ್ದೆ ವಿರೋಧಿಸಿ ಜ.26ರಂದು ಗಣರಾಜ್ಯೋತ್ಸವ ಪೆರೇಡ್ ಪರ್ಯಾಯವಾಗಿ ದೆಹಲಿಯಲ್ಲಿ ಅಂದು ರೈತರು ನಡೆಸಲುದ್ದೇಶಿಸಿರುವ ಟ್ರ್ಯಾಕ್ಟರ್ ಪೆರೇಡ್ ಬೆಂಬಲಿಸಿ ಬೆಂಗಳೂರಿನಲ್ಲಿ ಬೃಹತ್ ಟ್ರಾಕ್ಟರ್, ಕಾರು, ಜಿಪ್, ಬೈಕ್ ಪರೇಡ್ ನಡೆಸಲಾಗುವುದು ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಅಂದು ಬೆಂಗಳೂರಿನಲ್ಲಿ ನಡೆಯುವ ಈ ಪೆರೇಡ್ನಲ್ಲಿ ಭಾಗವಹಿಸಲು ಹೆಚ್ಚಿನ ಸಂಖ್ಯೆಯಲ್ಲಿ ರೈತ, ಕಾರ್ಮಿಕರು ಆಗಮಿಸಬೇಕು ಎಂದು ಮನವಿ ಮಾಡಿದರು.
ಕೊರನಾ ಲಾಕ್ಡೌನ್ ಘೋಷಿಸಿ ಕೃಷಿ ಕ್ಷೇತ್ರಕ್ಕೆ ಮಾರಕವಾಗಿರುವ ಕಾನೂನುಗಳನ್ನು ಸುಗ್ರಿವಾಜ್ಞೆಗಳ ಮೂಲಕ ಜಾರಿ ಮಾಡಿ, ಪ್ರಜಾತಂತ್ರ ವ್ಯವಸ್ಥೆಯನ್ನು ಬುಡಮೇಲು ಮಾಡಿದೆ ಎಂದು ಆರೋಪಿಸಿದರು. ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟ ಕೇವಲ ಪಂಜಾಬ್, ಹರಿಯಾಣ ರಾಜ್ಯಗಳ ಹೋರಾಟವಲ್ಲ. ಇದು ಇಡೀ ದೇಶದ ರೈತ ಕುಲದ ಹೋರಾಟವಾಗಿದ್ದು, ರಾಜ್ಯದ ನಾನಾ ರಾಜ್ಯಗಳಿಂದ ದೆಹಲಿಗೆ ತೆರಳಲು ರೈಲು ವ್ಯವಸ್ಥೆ ಇಲ್ಲದಿರುವುದರಿಂದ ದೆಹಲಿ ಸುತ್ತ, ಮುತ್ತ ಇರುವ ರಾಜ್ಯಗಳ ರೈತರು ಮಾತ್ರ ಭಾಗವಹಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಈ ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಾಪಾಸ್ ಪಡೆಯಬೇಕು. ಶಾಸನಬದ್ಧವಾಗಿ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕು. ನಿಗದಿತ ಬೆಲೆಗಿಂತ ಕಡಿಮೆ ದರಕ್ಕೆ ರೈತ ಉತ್ಪನ್ನ ಖರೀದಿಸುವುದು ಅಕ್ಷಮ್ಯ ಅಪರಾಧ ಎಂದು ಪರಿಗಣಿಸಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡರಾದ ತೇಜಸ್ವಿ ಪಟೇಲ್, ಹೊನ್ನೂರು ಮುನಿಯಪ್ಪ, ಹುಚ್ಚವ್ವನಹಳ್ಳಿ ಮಂಜುನಾಥ್, ಬಲ್ಲೂರು ರವಿಕುಮಾರ್, ಆವರಗೆರೆ ಚಂದ್ರು, ಐರಣಿ ಚಂದ್ರು ಮತ್ತಿತರರು ಹಾಜರಿದ್ದರು.



