ದಾವಣಗೆರೆ : ದಿನನಿತ್ಯದ ಕರ್ತವ್ಯಗಳು ಮತ್ತು ಒತ್ತಡದಿಂದ ಬಿಡುವು ಮಾಡಿಕೊಂಡು ಎಲ್ಲರೂ ಕೂಡಿ ಆಟ ಆಡಿ, ಸಾಂಸ್ಕಂತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮನ್ನು ತಾವು ಪುನಶ್ಚೇತನಗೊಳಿಸಿಕೊಳ್ಳಲು ಕ್ರೀಡಾಕೂಟ ಸಹಕಾರಿ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರಿಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದೊಂದಿಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 2020-21ನೇ ಸಾಲಿನ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕಂತಿ ಸ್ಪರ್ಧೆಯ ಉದ್ಘಾಟನಾ ಸಮಾರಂಭಕ್ಕೆ ಗುಂಡು ಎಸೆಯುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ವರ್ಷಪೂರ್ತಿ ಒತ್ತಡದಿಂದ ಕೆಲಸ ಮಾಡುವ ನೌಕರರಿಗೆ ಕ್ರೀಡಾಕೂಟ ಒಂದು ಪುನಶ್ಚೇತನ ಕಾರ್ಯಕ್ರದಂತಿದ್ದು ಎಲ್ಲರೂ ಕ್ರೀಡಾ ಮನೋಭಾವದಿಂದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕು. ಕ್ರೀಡೆಗಳಲ್ಲಿ ಗೆಲ್ಲುವುದು ಮುಖ್ಯವಲ್ಲ. ಭಾಗವಹಿಸಿ ಖುಷಿಯಿಂದ ಆಟವಾಡುವುದು ಮುಖ್ಯ. ಹಾಗೆಯೇ ಸಾಂಸ್ಕಂತಿಕ ಕಾರ್ಯಕ್ರಮಗಳಲ್ಲಿಯೂ ಹುರುಪಿನಿಂದ ಪಾಲ್ಗೊಂಡು ತಮ್ಮ ತಮ್ಮ ಇಲಾಖೆಗಳಿಗೆ ಹೆಸರು ತರುವಂತೆ ಹಾರೈಸಿದ ಅವರು ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಿ ಆಟ ಆಡುವಂತೆ ತಿಳಿಸಿದರು.
ಮಹಾನಗರಪಾಲಿಕೆ ಮಹಾಪೌರರಾದ ಬಿ.ಜಿ.ಅಜಯಕುಮಾರ್ ಮಾತನಾಡಿ, ಇಂದಿನ ಕ್ರೀಡಾ ಕೂಟದಲ್ಲಿ ಸಾವಿರಕ್ಕೂ ಮೀರಿ ನೌಕರರು ಕ್ರೀಡೆಯಲ್ಲಿ ಭಾಗವಹಿಸಲು ನೋಂದಾಯಿಸಿರುವುದು ಉತ್ತಮ ಬೆಳವಣಿಗೆ ಮತ್ತು ಸಂತಸದ ವಿಚಾರ. ಕಾರ್ಯಾಂಗ ಉತ್ತಮವಾಗಿದ್ದರೆ ಆಡಳಿತ ಸುಗಮವಾಗಿ ನಡೆಯುತ್ತದೆ. ಕಾರ್ಯಾಂಗವನ್ನು ಪ್ರತಿನಿಧಿಸುವ ಸರ್ಕಾರಿ ನೌಕರರು ಚಟುವಟಿಕೆಯಿಂದ ಇದ್ದರೆ ಒಂದೆರಡು ತಾಸು ಹೆಚ್ಚು ಕೆಲಸ ಮಾಡುತ್ತಾರೆ. ಈ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಅವಶ್ಯಕವಾಗಿದ್ದು ಎಲ್ಲರೂ ಹೀಗೆಯೇ ಉತ್ಸಾಹದಿಂದ ಪಾಲ್ಗೊಂಡು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಳ್ಳುವಂತೆ ಶುಭ ಕೋರಿದರು.
ದಾವಣಗೆರೆ ತಹಶೀಲ್ದಾರ್ ಬಿ.ಎನ್.ಗಿರೀಶ್ ಮಾತನಾಡಿ, ಕ್ರೀಡಾಂಗಣದಲ್ಲಿ ಇಂದು ಹಬ್ಬದ ವಾತಾವರಣ ಏರ್ಪಟ್ಟಿದೆ. ಜಿಲ್ಲೆಯ ಎಲ್ಲ ತಾಲ್ಲೂಕುಗಳಿಂದ ನೌಕರರು ಇಲ್ಲಿ ಸೇರಿ ಹಬ್ಬದಂತೆ ಸಂಭ್ರಮಿಸುತ್ತಿದ್ದಾರೆ. ಹೀಗೆ ಒಟ್ಟಿಗೆ ಸೇರುವುದೇ ಹಬ್ಬವಾಗಿದ್ದು ಎಲ್ಲರೂ ಕ್ರೀಡೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಇಂದು ಸಂಜೆ ಏರ್ಪಡಿಸಲಾಗಿರುವ ಸಂಗೀತ ಸಂಜೆ ಕಾರ್ಯಕ್ರಮಕ್ಕೂ ಹಾಜರಾಗಬೇಕು. ರಾಜ್ಯದ ಉತ್ತಮ ಯುವ ಗಾಯಕರು ಹಾಗೂ ಸಿನೆಯಾ ನಾಯಕ ನಟ ಮತ್ತು ತಂಡದವರನ್ನು ಕರೆಯಿಸಿ ಸಂಗೀತ ಮತ್ತು ನೃತ್ಯ ಕಾರ್ಯಕ್ರಮವನ್ನು ಇದೇ ವೇದಿಕೆಯಲ್ಲಿ ಏರ್ಪಡಿಸಿದ್ದು ಎಲ್ಲರೂ ಕುಟುಂಬದೊಂದಿಗೆ ಬಂದು ಈ ರಸದೌತಣವನ್ನು ಸವಿಯಬೇಕೆಂದು ಹೇಳಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಪಾಲಾಕ್ಷಿ ಪ್ರಾಸ್ತಾವಿಕವಾಗಿ ಮಾತನಾಡಿ, ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಸ್ವಾಸ್ಥ್ಯಕ್ಕೆ ಕ್ರೀಡೆ ಬಹಳ ಸಹಕಾರಿಯಾಗಿದೆ. ಕೊರೊನಾ ಸಂದರ್ಭದಲ್ಲೂ ಒತ್ತಡದಿಂದ ಕರ್ತವ್ಯ ನಿರ್ವಹಿಸಿದ್ದ ಸರ್ಕಾರಿ ನೌಕರರಿಗೆ ಈ ಕ್ರೀಡಾಕೂಟ ಶಕ್ತಿವರ್ಧಕವಿದ್ದಂತೆ. ಕ್ರೀಡೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು.
1035 ನೌಕರರು ವಿವಿಧ ಕ್ರೀಡೆಗಳಿಗೆ ನೋಂದಾಯಿಸಿಕೊಂಡಿದ್ದಾರೆ. ಇಂದು ಅಥ್ಲೆಟಿಕ್ಸ್, ಕಬಡ್ಡಿ, ವಾಲಿಬಾಲ್, ಬಾಲ್ ಬ್ಯಾಡ್ಮಿಂಟನ್, ಥ್ರೋಬಾಲ್ ಮತ್ತು ಟೆನ್ನಿಕಾಯ್ಟ್ ಕ್ರೀಡೆಗಳು ನಡೆಯಲಿವೆ. ಜ.6 ರಂದು ವೇಟ್ ಲಿಫ್ಟಿಂಗ್, ಪವರ್ ಲಿಫ್ಟಿಂಗ್ ಮತ್ತು ಬಾಡಿ ಬಿಲ್ಡಿಂಗ್ ಮತ್ತು ಆಂಜನೇಯ ಬಡಾವಣೆಯ ಕುಸ್ತಿ ಒಳಾಂಗಣ ಕ್ರೀಡಾಂಗಣದಲ್ಲಿ ಕುಸ್ತಿ ಕ್ರೀಡೆಗಳು ನಡೆಯಲಿವೆ. 40 ವರ್ಷದೊಳಗಿನ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆಂದು ಅವರು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಕೆ.ವಿ.ಶಾಂತಕುಮಾರಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಸಾಕಮ್ಮ ಗಂಗಾಧರನಾಯ್ಕ, ತಾಲ್ಲೂಕುಗಳ ಸಂಘಗಳ ಅಧ್ಯಕ್ಷರು, ಗೌರವಾಧ್ಯಕ್ಷರು, ವೃಂದ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ್ ಸ್ವಾಗತಿಸಿದರು.