Connect with us

Dvgsuddi Kannada | online news portal | Kannada news online

ದಾವಣಗೆರೆ: ಆ. 6 ರಂದು ಎಲ್ಲಾ ಶಾಲೆಗಳಲ್ಲಿ ಸಾಮೂಹಿಕ ಕೈ ಸ್ವಚ್ಚತಾ ಅಭಿಯಾನ

ದಾವಣಗೆರೆ

ದಾವಣಗೆರೆ: ಆ. 6 ರಂದು ಎಲ್ಲಾ ಶಾಲೆಗಳಲ್ಲಿ ಸಾಮೂಹಿಕ ಕೈ ಸ್ವಚ್ಚತಾ ಅಭಿಯಾನ

ದಾವಣಗೆರೆ: ಶುದ್ಧ ಕುಡಿಯುವ ನೀರು, ಶುದ್ಧ ಆಹಾರ, ಶುದ್ಧ ಪರಿಸರ ಹಾಗೂ ಶುದ್ಧ ಕೈಗಳಿಂದ ಆರೋಗ್ಯವಂತರಾಗಿರಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ಶುದ್ಧ ಕೈಗಳಿಂದ ಆರೋಗ್ಯ ವೃದ್ಧಿ ಅಭಿಯಾನದಡಿ ಆಗಸ್ಟ್ 6 ರಂದು ಎಲ್ಲಾ ಶಾಲೆಗಳಲ್ಲಿ ಮಕ್ಕಳಿಂದ ಕೈ ಸ್ವಚ್ಚಗೊಳಿಸಿಕೊಳ್ಳುವ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಲಾದ ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಐದು ವರ್ಷದೊಳಗಿನ ಮಕ್ಕಳು ಯಾವುದೇ ಕಾರಣಕ್ಕೂ ತೀವ್ರ ಅತಿಸಾರ ಭೇದಿಯಿಂದ ಮರಣ ಹೊಂದಬಾರದೆಂದು ಆಗಸ್ಟ್ 1 ರಿಂದ 15 ರ ವರೆಗೆ ಪಾಕ್ಷಿಕವನ್ನಾಗಿ ಆಚರಣೆ ಮಾಡಲಾಗುತ್ತದೆ. ಈ ವೇಳೆ ಅತಿಸಾರ ಭೇದಿಯಾಗದಂತೆ ಹಾಗೂ ಭೇದಿಯಾದಾಗ ಯಾವ ರೀತಿ ನಿಯಂತ್ರಣ ಮಾಡಬೇಕೆಂದು ಪಾಕ್ಷಿಕದ ವೇಳೆ ಸಾರ್ವಜನಿಕರು ಸೇರಿದಂತೆ ತಾಯಂದಿರುಗಳಿಗೆ ಜಾಗೃತಿ ಮೂಡಿಸಲಾಗುತ್ತದೆ.

ಪಾಕ್ಷಿಕದ ಅಂಗವಾಗಿ ಆಗಸ್ಟ್ 6 ರಂದು ಕೈಯನ್ನು ಯಾವ ರೀತಿ ತೊಳೆದುಕೊಳ್ಳಬೇಕೆಂಬ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಲು ಸರ್ಕಾರಿ ಸೇರಿದಂತೆ ಎಲ್ಲಾ ಖಾಸಗಿ ಶಾಲೆಗಳಲ್ಲಿಯು ಈ ಅಭಿಯಾನವನ್ನು ಕೈಗೊಳ್ಳಲಾಗುತ್ತಿದ್ದು ಎಲ್ಲಾ ಶಾಲೆಗಳಲ್ಲಿ ಪ್ರಾತ್ಯಕ್ಷತೆಯನ್ನು ಏರ್ಪಡಿಸಲು ಸೂಚನೆ ನೀಡಿದರು.
ಅದೇ ರೀತಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನವನ್ನು ಆಗಸ್ಟ್ 10 ರಂದು ಆಚರಿಸಲಾಗುತ್ತಿದ್ದು ಇದರ ಅಂಗವಾಗಿ ಎಲ್ಲಾ ಮಕ್ಕಳಿಗೂ ಜಂತುಹುಳು ನಿವಾರಣೆ ಮಾಡಲು ಸಾಮೂಹಿಕವಾಗಿ ಅಲ್ಬೆಂಡಝೋಲ್ ಮಾತ್ರೆಗಳನ್ನು 19 ವರ್ಷದೊಳಗಿನ ಎಲ್ಲರಿಗೂ ನುಂಗಿಸಲಾಗುತ್ತದೆ. ಈ ಕಾರ್ಯಕ್ರಮವನ್ನು ಎಲ್ಲಾ ಶಾಲಾ, ಕಾಲೇಜುಗಳು ಹಾಗೂ ಹಾಸ್ಟೆಲ್‌ಗಳಲ್ಲಿ ಹಮ್ಮಿಕೊಳ್ಳಲು ಸೂಚನೆ ನೀಡಿದರು.

ಅತಿಸಾರ ಭೇದಿ ನಿಯಂತ್ರಣ ಹಾಗೂ ಜಂತುಹುಳು ನಿವಾರಣಾ ಕಾರ್ಯಕ್ರಮಗಳಿಂದ ಅಲೆಮಾರಿ, ಕಾರ್ಮಿಕರಾಗಿ ವಲಸೆ ಬಂದವರ ಮಕ್ಕಳು ಸಹ ಇದರಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಿದರು.
ತಾಯಿ ಹಾಲು ಅಮೃತದಂತೆ ಇದ್ದು ಇದನ್ನು ತಾಯಂದಿರು ತಮ್ಮ ಮಕ್ಕಳಿಗೆ ಕನಿಷ್ಠ 6 ತಿಂಗಳವರೆಗೆ ಕಡ್ಡಾಯವಾಗಿ ಸ್ತನ್ಯಪಾನವನ್ನು ಮಾಡಿಸಬೇಕೆಂದು ಜಾಗೃತಿ ಮೂಡಿಸುವ ಉದ್ದೇಶದಿಂದ ಆಗಸ್ಟ್ 1 ರಿಂದ 7 ರ ವರಗೆ ಸ್ತನ್ಯಪಾನ ಸಪ್ತಾಹವನ್ನು ಆಚರಣೆ ಮಾಡಲಾಗುತ್ತಿದೆ ಎಂದ ಅವರು ಈ ವೇಳೆ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ವೈದ್ಯರು ತಾಯಂದಿರುಗಳಿಗೆ ಮನವರಿಕೆ ಮಾಡಿಕೊಡಬೇಕೆಂದು ತಿಳಿಸಿದರು.

ಅತಿಸಾರ ಭೇದಿಯನ್ನು ನಿಯಂತ್ರಿಸುವ ಸಲುವಾಗಿ ಎಲ್ಲರಿಗೂ ಒಆರ್‌ಎಸ್ ದೊರೆಯುವಂತೆ ನೋಡಿಕೊಳ್ಳಬೇಕೆಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಲಹೆ ನೀಡಿದ ಜಿಲ್ಲಾಧಿಕಾರಿಗಳು ಎಲ್ಲಾ ಕಾರ್ಯಕ್ರಮ ಅಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಜನರಿಗೆ ಆರೋಗ್ಯ ಸೌಲಭ್ಯ, ಸೇವೆಗಳು ದೊರೆಯುವಂತೆ ನೋಡಿಕೊಳ್ಳಲು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ ; ಎ.ಚನ್ನಪ್ಪ ಮಾತನಾಡಿ ಜಗಳೂರು ತಾಲ್ಲೂಕಿನಲ್ಲಿ ಏಕೆ ಪದೇ ಪದೇ ಜ್ವರ, ಕಾಲುನೋವಿನ ಪ್ರಕರಣಗಳು ವರದಿಯಾಗುತ್ತಿವೆ ಎಂದ ಅವರು ತಾಲ್ಲೂಕು ಆರೋಗ್ಯಾಧಿಕಾರಿಗಳು ಹೆಚ್ಚು ಗಮನಿಸಿ ಸಾಂಕ್ರಾಮಿಕ ರೋಗಗಳು ಬಾರದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ, ಆರ್‌ಸಿಹೆಚ್ ಅಧಿಕಾರಿ ಡಾ. ಮೀನಾಕ್ಷಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಗಂಗಾಧರ್, ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ. ಮುರಳೀಧರ್, ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತç ಚಿಕಿತ್ಸಕ ಡಾ. ಷಣ್ಮುಖಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ರೇಷ್ಮಾ ಕೌಸರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್, ಜಿಲ್ಲಾ ವಿಬಿಡಿಸಿ ಅಧಿಕಾರಿ ಡಾ. ನಟರಾಜ್, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಇದೇ ವೇಳೆ ಜಿಲ್ಲಾಧಿಕಾರಿ ಶಿವಾನಂದ್ ಕಾಪಶಿ ರವರು ಆರೋಗ್ಯ ಜಾಗೃತಿ ಕರಪತ್ರಗಳನ್ನು ಬಿಡುಗಡೆ ಮಾಡಿದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top