ದಾವಣಗೆರೆ: ಕಳೆದ ವರ್ಷದ ಬರಗಾಲದಿಂದ ಅಡಿಕೆ ಬೆಳೆಯಲ್ಲಿ ಹೆಚ್ಚು ರೋಗ ಮತ್ತು ಕೀಟಗಳ ಹಾವಳಿ ಕಾಣಿಸಿಕೊಳ್ಳುತ್ತಿದೆ. ಹಾಗೆಯೇ ಅಡಿಕೆ ಬೆಳೆ ವಿಸ್ತೀರ್ಣ ಹೆಚ್ಚುತ್ತಿರುವುದರಿಂದ ಅಧಿಕಾರಿಗಳು ಸೂಕ್ತ ಅಂತರ ಬೆಳೆಗಳ ಬಗ್ಗೆ ಮತ್ತು ನಿರ್ವಹಣಾ ಕ್ರಮಗಳ ಬಗ್ಗೆ ರೈತರಿಗೆ ಹೆಚ್ಚು ಜಾಗೃತಿ ಮೂಡಿಸಬೇಕೆಂದು ತೋಟಗಾರಿಕೆ ಉಪ ನಿರ್ದೇಶಕ ರಾಘವೇಂದ್ರ ಪ್ರಸಾದ್ ಕರೆ ನೀಡಿದರು.
ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದಲ್ಲಿ ಭಾರತೀಯ ಕೃಷಿ ಅನುಸಂಧಾನ ಪರಿಷತ್ನ 96 ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕೃಷಿ ವಿಜ್ಞಾನ ಕೇಂದ್ರಗಳ ಸುವರ್ಣ ಮಹೋತ್ಸ ಸಮಾರಂಭದ ಅಂಗವಾಗಿ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ವಿಸ್ತರಣಾ ತರಬೇತಿ ಉದ್ಘಾಟಿಸಿ ಮಾತನಾಡಿದರು.
ಭಾರತದ ಆಹಾರ ಸ್ವಾವಲಂಬನೆಯಲ್ಲಿ ಭಾರತೀಯ ಕೃಷಿ ಅನುಸಂಧಾನ ಪರಿಷತ್ನ ಸಂಶೋಧನಾ ಪಾತ್ರ ಬಹು ಮುಖ್ಯವಾಗಿದೆ ಎಂದು ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಬಸವನಗೌಡ ಎಂ.ಜಿ. ಪ್ರಾಸ್ತಾವಿಕವಾಗಿ ಮಾತನಾಡಿದರು.
ಇಂದು ದೇಶದಲ್ಲಿ 731 ಕೃಷಿ ವಿಜ್ಞಾನ ಕೇಂದ್ರಗಳು ರೈತರಿಗೆ ಕೃಷಿಯಲ್ಲಿ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸುವಲ್ಲಿ ಯಶಸ್ಸಿಯಾಗಿವೆ. ರೈತಪರ ವಿಸ್ತರಣಾ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ರೈತರಿಗೆ ಆದಾಯದ ಮತ್ತು ಆರ್ಥಿಕತೆಯ ಸ್ವಾವಲಂಬನೆಯನ್ನು ನೀಡಲು ಯಶಸ್ಸಿಯಾಗಿವೆ ಎಂದರು. ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳ ವಿಸ್ತೀರ್ಣ ಹೆಚ್ಚಾಗುತ್ತಿದ್ದು ರೈತರಿಗೆ ಅಗತ್ಯವಾಗಿ ಬೇಕಾಗಿರುವ ತಂತ್ರಜ್ಞಾನಗಳು ಮತ್ತು ಇಲಾಖಾ ಯೋಜನೆಗಳ ಬಗ್ಗೆ ಮಾಹಿತಿ ನೀಡುವಲ್ಲಿ ತೋಟಗಾರಿಕೆ ಇಲಾಖೆ ಯಶಸ್ವಿಯಾಗಿದೆ ಎಂದು ತಿಳಿಸಿದರು.
ಕೇಂದ್ರದ ಮುಖ್ಯಸ್ಥ ಡಾ. ದೇವರಾಜ ಟಿ.ಎನ್. ಮಾತನಾಡಿ, ತೋಟಗಾರಿಕೆ ಬೆಳೆಗಳಲ್ಲಿನ ಆರ್ಥಿಕ ಸ್ವಾವಲಂಬನೆಯಿಂದ ಇಂದು ಮಧ್ಯಮ ವರ್ಗದ ರೈತರಲ್ಲಿ ಸಂತಸ ಮೂಡಿದೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕೃಷಿ ತಂತ್ರಜ್ಞಾನಗಳನ್ನು ಪ್ರಾತ್ಯಕ್ಷಿಕೆ, ಕ್ಷೇತ್ರ ಪ್ರಯೋಗ ಹಾಗೂ ವೈಜ್ಞಾನಿಕ ಕ್ಷೇತ್ರ ಭೇಟಿಗಳ ಮೂಲಕ ರೈತರಿಗೆ ತಲುಪಸುವಲ್ಲಿ ನಮ್ಮ ಕೃಷಿ ವಿಜ್ಞಾನ ಕೇಂದ್ರ ಮುಂಚೂಣ ಯಲ್ಲಿದೆ ಎಂದು ತಿಳಿಸಿದರು.
ತೋಟಗಾರಿಕೆ ಬೆಳೆಗಳಲ್ಲಿ ಬರುವ ರೋಗ ಮತ್ತು ಕೀಟಗಳ ನಿರ್ವಹಣೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಡಾ. ಅವಿನಾಶ್ ಟಿ.ಜಿ. ಹಾಗೂ ಹವಾಮಾನ ವೈಪರೀತ್ಯದಲ್ಲಿ ಚೇತರಿಕೆಯುಳ್ಳ ತಂತ್ರಜ್ಞಾನಗಳ ಬಗ್ಗೆ ಮಾಹಿತಿಯನ್ನು ಕೇಂದ್ರದ ಬೇಸಾಯ ತಜ್ಞ ಮಲ್ಲಿಕಾರ್ಜುನ ಬಿ.ಓ. ಹಂಚಿಕೊಂಡರು.
ತರಬೇತಿಯಲ್ಲಿ ಎಲ್ಲಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಸಹಾಯಕ ತೋಟಗಾರಿಕೆ ನಿರ್ದೇಶಕರು, ಸಹಾಯಕ ತೋಟಗಾರಿಕೆ ಅಧಿಕಾರಿಗಳು ಭಾಗವಹಿಸಿ ಮಾಹಿತಿ ಪಡೆದರು.



