ದಾವಣಗೆರೆ: 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15 ರಂದು ಆಚರಿಸಲಾಗುತ್ತಿದ್ದು ಸಡಗರ, ಸಂಭ್ರಮದೊಂದಿಗೆ ವಿಜೃಂಭಣೆಯಿಂದ ಆಚರಿಸೋಣ, ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು, ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕುರಿತಂತೆ ಅಗತ್ಯ ಸಿದ್ಧತೆ ಕೈಗೊಳ್ಳಲು ಏರ್ಪಡಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆ. 15 ರಂದು ಬೆಳಿಗ್ಗೆ 7.30 ಕ್ಕೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮತ್ತು ಬೆಳಿಗ್ಗೆ 7.50 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಬೇಕು, ಬೆಳಿಗ್ಗೆ 9 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ನಡೆಯಲಿದೆ. ಸಮಾರಂಭಕ್ಕೆ ಶಿಷ್ಟಾಚಾರದಂತೆ ಎಲ್ಲ ಗಣ್ಯಮಾನ್ಯರು, ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ವೇದಿಕೆ ನಿರ್ಮಾಣ, ಅಲಂಕಾರ ಸಮರ್ಪಕ ಸಿದ್ದತೆ ಕೈಗೊಳ್ಳಬೇಕು ಎಂದರು.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಎಲ್ಲಾ ಸರ್ಕಾರಿ ಕಟ್ಟಡಗಳಿಗೆ ಆಗಸ್ಟ್ 14 ಮತ್ತು 15ರಂದು ಸರ್ಕಾರಿ ಕಟ್ಟಡಗಳ ಮೇಲೆ ವಿದ್ಯುತ್ ದೀಪಾಲಂಕಾರ ಮಾಡಬೇಕು. ಎಲ್ಲಾ ಗ್ರಾಮ ಮಟ್ಟ, ತಾಲ್ಲೂಕು, ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಕಚೇರಿಗಳಲ್ಲೂ ರಾಷ್ಟ್ರ ಧ್ವಜಾರೋಹಣ ನಿಯಮಾನುಸಾರವಾಗಿ ನೆರವೇರಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚಿಸಿದರು.
ಸಮಾರಂಭದ ಪರೇಡ್ನಲ್ಲಿ ಪೊಲೀಸ್ , ಅಗ್ನಿಶಾಮಕ, ಗೃಹರಕ್ಷಕದಳ, ಸೇವಾದಳ, ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಎನ್.ಸಿ.ಸಿ, ಸ್ಕೌಟ್ಸ್ ಮತ್ತು ಗೈಡ್ಸ್ ತಂಡದ ಜೊತೆಗೆ ವಿಶೇಷವಾಗಿ ಪೌರಕಾರ್ಮಿಕರು, ಭಾರತ್ ಜೋಡೋ ತಂಡ ಪಥ ಸಂಚಲನದಲ್ಲಿ ಭಾಗವಹಿಸಲು ತಿಳಿಸಿ ಇದಕ್ಕೆ ಬೇಕಾದ ಸಿದ್ದತೆ ನಡೆಸಲು ಸೂಚನೆ ನೀಡಿದರು.
ಬೆಳಗಿನ ಕಾರ್ಯಕ್ರಮ ಸಂದರ್ಭದಲ್ಲಿ ಏರ್ಪಡಿಸುವ ಸಾಂಸ್ಕøತಿಕ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ಆಯೋಜನೆ ಮಾಡಬೇಕು. ಸಮಾರಂಭದಲ್ಲಿ ಪಾಲ್ಗೊಳ್ಳುವ ಜನಪ್ರತಿನಿಧಿಗಳು, ಗಣ್ಯರು, ಸೇರಿದಂತೆ ಎಲ್ಲರಿಗೂ ಆಸನ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಎಲ್ಲಾ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಪ್ರತಿಯೊಬ್ಬರೂ ಸಮನ್ವಯತೆಯೊಂದಿಗೆ ಸಮರ್ಪಕವಾಗಿ ನಿರ್ವಹಿಸಿ, ಪ್ರತಿಯೊಂದನ್ನು ವ್ಯವಸ್ಥಿತವಾಗಿ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾದ್ಯಂತ ಯಾವುದೇ ಅಂಗಡಿ ಮುಂಗಟ್ಟು, ರಸ್ತೆ ಬದಿಗಳಲ್ಲಿ ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಮಾರಾಟ ಹಾಗೂ ಬೈಕ್, ಆಟೋ ಇನ್ನಿತರೆ ವಾಹನಗಳಿಗೆ ಬಳಕೆ ಸಂಪೂರ್ಣ ನಿಷೇಧಿಸಿದೆ. ರಾಷ್ಟ್ರಧ್ವಜ ಬಳಸುವಾಗ ರಾಷ್ಟ್ರಧ್ವಜದ ಸಂಹಿತೆಯನ್ನು ಕಾಪಾಡುವಂತೆ ಸೂಚನೆ ನೀಡಿ ಕಾರ್ಯಕ್ರಮದ ನಂತರ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದಲ್ಲಿ, ಇಂತಹ ದೃಶ್ಯ ಎಲ್ಲಿಯಾದರೂ ಕಂಡುಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಪಾಲಿಕೆ ಆಯುಕ್ತ ಮಹಾಂತೇಶ್, ಉಪವಿಭಾಗಾಧಿಕಾರಿ ಸಂತೋಷ್ ಪಾಟೀಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


