ದಾವಣಗೆರೆ: ದಾವಣಗೆರೆಯ ವಿರಕ್ತ ಮಠ ನೀಡುವ ಜಯದೇವ ಶ್ರೀ ಪ್ರಶಸ್ತಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ, ಜು.12 ರಿಂದ 14 ರ ವರೆಗೆ ಶಿವಯೋಗಿ ಮಂದಿರ ಆವರಣದಲ್ಲಿ ನಡೆಯವ ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 65ನೇ ಸ್ಮರಣೋತ್ಸವ ಮತ್ತು ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಜಯದೇವಶ್ರೀ ಪ್ರಶಸ್ತಿ, ಶೂನ್ಯಪೀಠ ಅಲ್ಲಮ ಪ್ರಶಸ್ತಿ,ಶೂನ್ಯಪೀಠ ಚನ್ನಬಸವ ಪ್ರಶಸ್ತಿ,ಶೂನ್ಯಪೀಠ ಅಕ್ಕನಾಗಮ್ಮ ಪ್ರಶಸ್ತಿ ನೀಡಲಾಗುತ್ತಿದೆ. ಶಿವಯೋಗಿ ಮಂದಿರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಜಯದೇವ ಸಾಂಸ್ಕೃತಿಕ ಭವನದಲ್ಲಿ ಸ್ಮರಣೋತ್ಸವ, ಶರಣ ಸಂಸ್ಕೃತಿ ಕಾರ್ಯಕ್ರಮ ನಡೆಯಲಿವೆ ಎಂದು ತಿಳಿಸಿದರು.
ಜು. 12 ರಂದು ಸಂಜೆ 6.30 ಕ್ಕೆ ನಡೆಯುವ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿ 50 ಸಾವಿರ ನಗದು, ಸ್ಮರಣಿಕೆ ಒಳಗೊಂಡಿದೆ. ಡಾ. ಶಿವಮೂರ್ತಿ ಮುರುಘಾ ಶರಣರು ಸಮಾರಂಭದ ಅಧ್ಯಕ್ಷತೆ ವಹಿಸುವರು.ಇನ್ನೂ ವಿಧಾನ ಪರಿಷತ್ ನ ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ ಅವರಿಗೆ ಶೂನ್ಯಪೀಠ ಅಲ್ಲಮ ಪ್ರಶಸ್ತಿ, ಹರಿಹರದ ಸಾಹಿತಿ ಪ್ರೊ. ಎಚ್.ಎಂ. ಭಿಕ್ಷಾವರ್ತಿಮಠ್ ಅವರಿಗೆ ಶೂನ್ಯಪೀಠ ಚನ್ನಬಸವ ಪ್ರಶಸ್ತಿ, ಹಾವೇರಿ ಜಿಲ್ಲೆ ಹೊಸರಿತ್ತಿಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರ್ತಿ ಚೆನ್ನಮ್ಮ ಹಳ್ಳಿಕೇರಿ ಅವರಿಗೆ ಶೂನ್ಯಪೀಠ ಅಕ್ಕನಾಗಮ್ಮ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಶೂನ್ಯಪೀಠ ಅಲ್ಲಮ ಪ್ರಶಸ್ತಿ 50 ಸಾವಿರ ನಗದು ಹೊಂದಿದೆ. ಶೂನ್ಯಪೀಠ ಚನ್ನಬಸವ ಮತ್ತು ಶೂನ್ಯಪೀಠ ಅಕ್ಕನಾಗಮ್ಮ ಪ್ರಶಸ್ತಿ 25 ಸಾವಿರ ನಗದು ಬಹುಮಾನ ಹೊಂದಿದೆ.



