ದಾವಣಗೆರೆ: ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಪರ ನಟ ಕಿಚ್ಚ ಸುದೀಪ್ ಅಬ್ಬರದ ಪ್ರಚಾರ ನಡೆಸಿದರು. ಜಗಳೂರು ಅಭ್ಯರ್ಥಿ ಎಸ್. ವಿ. ರಾಮಚಂದ್ರಪ್ಪ, ಮಾಯಕೊಂಡ ಅಭ್ಯರ್ಥಿ ಬಸವರಾಜ ನಾಯ್ಕ್, ದಾವಣಗೆರೆ ದಕ್ಷಿಣ ಅಭ್ಯರ್ಥಿ ಅಜಯಕುಮಾರ್, ಉತ್ತರ ಅಭ್ಯರ್ಥಿ ಲೋಕಿಕೆರೆ ನಾಗರಾಜ ಪರ ಪ್ರಚಾರ ನಡೆಸಿದರು. ಈ ವೇಳೆ ಸುದೀಪ್ ನೋಡಲು ಅಭಿಮಾನಿಗಳು ಮುಗಿಬಿದ್ದರು.
ಜಗಳೂರು ಪಟ್ಟಣಕ್ಕೆ ಸುದೀಪ್ ಆಗಮಿಸುತ್ತಿದ್ದಂತೆ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜನರ ಸುದೀಪ್ ಪರ ಘೋಷಣೆ ಕೂಗಿದರು. ಸುದೀಪ್ ನೀಡಲು ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಈ ವೇಳೆ ಮಾತನಾಡಿದ ಸುದೀಪ್, ಎಸ್. ವಿ. ರಾಮಚಂದ್ರ ಶಾಸಕರಾಗಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕ್ಷೇತ್ರದಲ್ಲಿ ಮಾಡಿದ್ದಾರೆ. ಜನಪರವಾಗಿ ಕೆಲಸ ಮಾಡಿದ್ದಾರೆ. ಜನಸಾಮಾನ್ಯರ ಕೈಗೆ ಸುಲಭವಾಗಿ ಸಿಗುವ ನಾಯಕ. ಈ ಬಾರಿಯ ಚುನಾವಣೆಯಲ್ಲಿ ಗೆಲ್ಲಿಸಿ ಎಂದು ಮನವಿ ಮಾಡಿದರು.
ನಂತರ ದಾವಣಗೆರೆ ತಾಲೂಕಿನ ಮಾಯಕೊಂಡ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ್ ನಾಯ್ಕ್ ಪರ ಸುದೀಪ್ ಮತಯಾಚಿಸಿದರು. ತ್ಯಾವಣಿಗೆಯಲ್ಲಿ ಚುನಾವಣಾ ಪ್ರಚಾರ ನಡೆಸಿದರು. ನಂತರ ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರದಲ್ಲಿ ಸುದೀಪ್ ಪ್ರಚಾರ ನಡೆಸಿದರು. ವಾಲ್ಮೀಕಿ ಸಮುದಾಯದವರು ಹೆಚ್ಚಿರುವ ನಿಟ್ಟುವಳ್ಳಿಯ ದುರ್ಗಾಂಬಿಕಾ ದೇವಸ್ಥಾನದಿಂದ ರೋಡ್ ಶೋ ಆಯೋಜಿಸಲಾಗಿತ್ತು. ಬಿಜೆಪಿ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಲೋಕಿಕೆರೆ ನಾಗರಾಜ್ ಹಾಗೂ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿ. ಜಿ. ಅಜಯ್ ಕುಮಾರ್ ಪರ ಸುದೀಪ್ ಪ್ರಚಾರ ಕೈಗೊಂಡರು.
ಜಗಳೂರು, ಮಾಯಕೊಂಡ, ದಾವಣಗೆರೆ, ಉತ್ತರ ಹಾಗೂ ದಕ್ಷಿಣದಲ್ಲಿ ವಾಲ್ಮೀಕಿ ಸಮುದಾಯದ ಹೆಚ್ಚು ಮತಗಳಿವೆ. ಈ ಕಾರಣಕ್ಕೆ ಸುದೀಪ್ ಅವರನ್ನು ಕರೆಯಿಸಿ ಪ್ರಚಾರ ನಡೆಸಲಾಗಿದೆ. ಸುದೀಪ್ ಅವರಿಗೆ ದಾವಣಗೆರೆ ಜಿಲ್ಲೆಯಲ್ಲಿ ಲಕ್ಷಾಂತರ ಅಭಿಮಾನಿಗಳಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.



