ದಾವಣಗೆರೆ: ಹರಿಹರ ತಾಲ್ಲೂಕಿನ ಕೊಂಡಜ್ಜಿ ಕೆರೆ ಸೇರಿದಂತೆ ತಾಲೂಕಿಗೆ ಸಮಗ್ರ ನೀರಾವರಿ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಭರವಸೆ ನೀಡಿದರು.
ಕೊಂಡಜ್ಜಿ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದ ಅವರು, ಕೊಂಡಜ್ಜಿ ಕೆರೆ ಸುತ್ತಮುತ್ತಲಿನ ಗ್ರಾಮಗಳ ಜೀವನಾಡಿಯಾಗಿದ್ದು, ಜಿಲ್ಲೆಯಲ್ಲಿ ಸುರಿದ ಮಳೆಗೆ ಕೆರೆ ಭರ್ತಿಯಾಗಿದ್ದು ಖುಷಿ ವಿಚಾರ. ಕೆರೆಗಳ ಭರ್ತಿಯಿಂದ ರೈತರ ಬದುಕು ಹಸನಾಗಲಿ ಎಂದರು.
ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಕೆರೆಗಳು ಭರ್ತಿಯಾಗಿವೆ. ಭದ್ರಾ ಜಲಾಶಯವು ತುಂಬಿದ್ದು, ರೈತರಲ್ಲಿ ಸಂತಸ ಮೂಡಿದೆ. ಕೆರೆಗಳನ್ನು ಸಂರಕ್ಷಿಸುವುದು ಮಾತ್ರವಲ್ಲ, ಮುಂದಿನ ಪೀಳಿಗೆಗೂ ಕೆರೆ ಉಳಿಸಬೇಕಾದ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ಪ್ರಯತ್ನಿಸೋಣ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹರಿಹರ ಶಾಸಕ ಬಿ. ಪಿ. ಹರೀಶ್, ಮಾಜಿ ಶಾಸಕ ರಾಮಪ್ಪ, ನಿಖಿಲ್ ಕೊಂಡಜ್ಜಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಸಾರ್ವಜನಿಕರು, ಗ್ರಾಮದ ಮುಖಂಡರು ಹಾಜರಿದ್ದರು.



