ಬೆಂಗಳೂರು : ಸಾರಿಗೆ ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಸರ್ಕಾರ ಒಪ್ಪಿಗೆ ನೀಡಿದ್ದು, ಸಾರಿಗೆ ಸಂಸ್ಥೆಯ ನೌಕರರ ಬೇಡಿಕೆಗಳನ್ನು ಜಾರಿಗೊಳಿಸುವಂತೆ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಪತ್ರ ಬರೆದಿದೆ. ಸಾರಿಗೆ ನೌಕರರ ಬೇಡಿಕೆಗಳ ಕುರಿತ ಪ್ರಸ್ತಾವನೆಯನ್ನು ಪರಿಶೀಲಿಸಿದ್ದು, ನಾಲ್ಕೂ ಸಂಸ್ಥೆಗಳ ಹಂತದಲ್ಲಿ ಬೇಡಿಕೆಗಳನ್ನು ಜಾರಿಗೊಳಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯವ್ಯ ಸಾರಿಗೆ ಹಾಗೂ ಈಶಾನ್ಯ ಸಾರಿಗೆ ಸಂಸ್ಥೆಗಳಿಗೆ ಸೂಚನೆ ನೀಡಿದೆ.
ಈ ಬೇಡಿಕೆಗಳನ್ನು ಜಾರಿಗೊಳಿಸಿದ ಕುರಿತು ಸರ್ಕಾರಕ್ಕೆ ಮರು ವರದಿ ಸಲ್ಲಿಸುವಂತೆ ಸೂಚಿಸಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಸಾರಿಗೆ ನೌಕರರಿಗೆ ನಾಲ್ಕು ಪಾಳಿಯಲ್ಲಿ ಬಸ್ ಕಾರ್ಯಾಚರಿಸುವುದು, ಪೂರ್ಣ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ಕೈಗೊಂಡಿದ್ದರು.
ಸದ್ಯಕ್ಕೆ ನಾಲ್ಕು ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ ನೀಡಿದೆ. ಆರೋಗ್ಯ ಭಾಗ್ಯ ವಿಮಾ ಯೋಜನೆಯಡಿಯಲ್ಲಿ ಸರ್ಕಾರಿ ಆಸ್ಪತ್ರೆಗಳು ಮತ್ತು ಸರ್ಕಾರದ ಸ್ವಾಯತ್ತ ಅನುದಾನಿತ ಆಸ್ಪತ್ರೆಗಳು ನಗದುರಹಿತ ಚಿಕಿತ್ಸೆ ನೀಡುವ ಸಂಬಂಧ ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಂಡು ನಗದುರಹಿತ ಪದ್ಧತಿಯನ್ನು ಜಾರಿಗೆ ತರಲು ಸೂಚಿಸಿದೆ. ಸರ್ಕಾರಿ ನೌಕರರಿಗೆ ವೈದ್ಯಕೀಯ ವೆಚ್ಚವನ್ನು ಮರುಪಾವತಿಸುತ್ತಿರುವ ಮಾದರಿಯಲ್ಲಿ CGHS ದರದನ್ವಯ ಚಿಕಿತ್ಸಾ ವೆಚ್ಚವನ್ನು ಮರುಪಾವತಿ ಮಾಡುವಂತೆ ತಿಳಿಸಿದೆ.
ಎರಡನೆಯದಾಗಿ, ಕೊರೊನಾ ಸೋಂಕು ತಗುಲಿದ ನಿಗಮದ ನೌಕರರು ಮರಣ ಹೊಂದಿದ ಸಂದರ್ಭ ಅವರ ಕುಟುಂಬಗಳಿಗೆ ಸರ್ಕಾರಿ ನೌಕರರಿಗೆ ನೀಡಿದಂತೆ ಸಂಸ್ಥೆಯ ಆಂತರಿಕ ಸಂಪನ್ಮೂಲಗಳಿಂದ 30 ಲಕ್ಷ ಪರಿಹಾರ ನೀಡಬೇಕು ಎಂಬ ಬೇಡಿಕೆಗೆ ಒಪ್ಪಿಗೆ ದೊರೆತಿದೆ. ಸಾರಿಗೆ ಸಂಸ್ಥೆಗಳಲ್ಲಿ HRMS ವ್ಯವಸ್ಥೆ ಜಾರಿಗೊಳಿಸಲು ಅನುಮೋದನೆ ದೊರೆತಿದ್ದು, ಕೊನೆಯದಾಗಿ ಘಟಕದ ವ್ಯಾಪ್ತಿಯಲ್ಲಿ ನೌಕರರಿಗೆ ಕಿರುಕುಳ ತಪ್ಪಿಸಲು ಸೂಚಿಸಿದೆ.



