ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದಾವಣಗೆರೆ ಹಾಲಿ ಸಂಸದ ಜಿ.ಎಂ. ಸಿದ್ದೇಶ್ವರ ಅಥವಾ ಅವರ ಕುಟುಂಬಕ್ಕೆ ಟಿಕೆಟ್ ನೀಡಬಾರದು. ಒಂದು ವೇಳೆ ಟಿಕೆಟ್ ನೀಡಿದ್ರೆ ಬಂಡಾಯದ ಎಚ್ಚರಿಕೆಯನ್ನು ಮಾಜಿ ಸಚಿವ ರೇಣುಕಾಚಾರ್ಯ ನೀಡಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದೇಶ್ವರ ಅವರಿಗೆ ಬಿಜೆಪಿ ಟಿಕೆಟ್ ನೀಡಲು ಕ್ಷೇತ್ರದ ಕಾರ್ಯಕರ್ತರು, ಮುಖಂಡರ ವಿರೋಧವಿದೆ. ಅವರಿಗೆ ಟಿಕೆಟ್ ನೀಡಿದರೆ ಬಂಡಾಯ ಎದುರಿಸಬೇಕಾಗುತ್ತದೆ. ನನಗೆ ಟಿಕೆಟ್ ನೀಡಬೇಕು ಎನ್ನುವುದು ಇಡೀ ಜಿಲ್ಲೆಯ ಪಕ್ಷದ ಮುಖಂಡರು, ಕಾರ್ಯಕರ್ತರ ಒತ್ತಾಯ. ನನಗೆ ಜಾತಿ ಇಲ್ಲದೆ ಇರಬಹುದು, ಅವರಿಗಿಂತ ಹೆಚ್ಚಿನ ನೀತಿ,ಪ್ರೀತಿ ಇದೆ. ಜಾತ್ಯತೀತಬೆಂಬಲವಿದೆ. ನನಗೆ ಕೊಡದಿದ್ರೆ ಜಗಳೂರು ಮಾಜಿ ಶಾಸಕ ಗುರುಸಿದ್ದನಗೌಡ ಅವರ ಪುತ್ರ ಡಾ.ರವಿಕುಮಾರ್ ಅವರಿಗೆ ಟಿಕೆಟ್ ನೀಡಬೇಕು ಒತ್ತಾಯಿಸುತ್ತಿದ್ದಾರೆ. ಇದನ್ನು ಲೆಕ್ಕಿಸದೇ ಸಿದ್ದೇಶ್ವರ ಅಥವಾ ಅವರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಿದ್ರೆ ಬಂಡಾಯ ಎದುರಿಸಬೇಕಾಗುತ್ತದೆ ಎಂದು ತಿಳಿಸಿದರು.
ಸಿದ್ದೇಶ್ವರ ಅವರ ತಂದೆ ಮಲ್ಲಿಕಾರ್ಜುನಪ್ಪ ಸಜ್ಜನ ರಾಜಕಾರಣಿ, ಅಜಾತಶತ್ರು. ಎರಡು ಬಾರಿ ಸಂಸದರಾಗಿದ್ದರು. ನಾಲ್ಕು ಬಾರಿ ಆಯ್ಕೆಯಾಗಿರುವ ಈಗಿನ ಸಂಸದರಿಗೆ ಅಹಂಕಾರ ಹೆಚ್ಚಾಗಿದೆ. ಕಾಂಗ್ರೆಸ್ನ ಶಾಮನೂರು ಕುಟುಂಬದ ಮುಂದೆ ಸ್ಪರ್ಧಿಸುವ ಗಂಡಸರು ಬಿಜೆಪಿಯಲ್ಲಿ ಯಾರಿದ್ದಾರೆ ಎನ್ನುವ ಮೂಲಕ ಪಕ್ಷ ಕಡೆಗಣಿಸಿದ್ದಾರೆ ಎಂದು ಕಿಡಿಕಾರಿದರು.
ನನಗೆ ಟಿಕೆಟ್ ನೀಡಿ. ಇಲ್ಲವೇ, ನನ್ನ ಪತ್ನಿ, ಸಹೋದರ ಅಥವಾ ಪುತ್ರನಿಗೆ ಟಿಕೆಟ್ ನೀಡಲು ಸಿದ್ದೇಶ್ವರ ಪಟ್ಟು ಹಿಡಿದಿದ್ದಾರೆ. ಅವರ ಕುಟುಂಬದವರು ಪಕ್ಷದ ಬಾವುಟ ಹಿಡಿದಿಲ್ಲ. ಇಂಥರಿಗೆ ಟಿಕೆಟ್ ನೀಡಲು ಹೇಗೆ ಸಾಧ್ಯ? ಅಪ್ಪನ ಅರ್ಹತೆ ಸಾಕೇ ? ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿ ದೇಶದ ಪ್ರಧಾನಿಯಾಗಬೇಕು ಎನ್ನುವುದು ಎಲ್ಲರ ಇಚ್ಛೆ. ಮೋದಿ ಅವರ ಅಪೇಕ್ಷೆಯಂತೆ ಕುಟುಂಬ ರಾಜಕಾರಣ ನಿಲ್ಲಿಸಿ ಎಂದು ಒತ್ತಾಯಿಸಿದರು.



