Connect with us

Dvgsuddi Kannada | online news portal | Kannada news online

ಭತ್ತಕ್ಕೆ ಒಂದು ಸಾವಿರ ಬೋನಸ್ ನೀಡುವಂತೆ ಸಿಎಂ ಭೇಟಿಗೆ ನಿರ್ಧಾರ: ಶಾಸಕ ಬಸವಂತಪ್ಪ

paddy rate meeting

ದಾವಣಗೆರೆ

ಭತ್ತಕ್ಕೆ ಒಂದು ಸಾವಿರ ಬೋನಸ್ ನೀಡುವಂತೆ ಸಿಎಂ ಭೇಟಿಗೆ ನಿರ್ಧಾರ: ಶಾಸಕ ಬಸವಂತಪ್ಪ

ದಾವಣಗೆರೆ: ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ಕಾಯಿದೆ ಜಾರಿ, ಪ್ರತಿ ಕ್ವಿಂಟಲ್‌ ಭತ್ತಕ್ಕೆ ರಾಜ್ಯ ಸರ್ಕಾರದ 1 ಸಾವಿರ ಬೋನಸ್ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿ ಚರ್ಚಿಸಲಾಗುವುದು ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅಧ್ಯಕ್ಷತೆಯಲ್ಲಿ ರೈತ ಸಂಘ ಮತ್ತು ಹಸಿರು ಸೇನೆ ಮುಖಂಡರ ಜೊತೆ ಸಭೆ ನಡೆಸಿದರು.

ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಮಾತನಾಡಿ, ಬೆಂಬಲ ಬೆಲೆಯಡಿ ಖರೀದಿ ಕೇಂದ್ರ ತೆರೆಯುವ ಸಂಬಂಧ ಸರ್ಕಾರದ ಮಟ್ಟದಲ್ಲಿ ಎಲ್ಲ ಹಂತದ ತಯಾರಿಯಾಗಿತ್ತು. ಆದರೆ, ಹಿಂಗಾರು ಹಾಗೂ ಪೂರ್ವ ಮುಂಗಾರು ಮಧ್ಯೆ ಭತ್ತದ ಬೆಳೆ ಬೆಳೆದಿರುವುದರಿಂದ ಬೆಂಬಲ ಬೆಲೆಯಡಿ ಖರೀದಿ ಕೇಂದ್ರಗಳನ್ನು ತೆರೆಯಲು ತಾಂತ್ರಿಕ ಅಡಚಣೆ ಉಂಟಾಗಿತ್ತು. ಇದನ್ನು ಈಗ ಸರಿಪಡಿಸಲಾಗುತ್ತಿದೆ ಎಂದರು.

ದಾವಣಗೆರೆ ಎಪಿಎಂಸಿ ಮಾರುಕಟ್ಟೆ ಆವರಣಗಳಲ್ಲಿ ತಲಾ 1 ಸಾವಿರ ಕ್ವಿಂಟಲ್ ಭತ್ತ ಮತ್ತು ಮೆಕ್ಕೇಜೋಳ ಡ್ರೈಯರ್ ಯಂತ್ರಗಳನ್ನು ಅಳವಡಿಸಿ ಉಚಿತವಾಗಿ ಧಾನ್ಯ ಒಣಗಿಸುವ ವ್ಯವಸ್ಥೆ ಮಾಡುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ವಿಸ್ತೃತ ವರದಿ ಸಿದ್ಧಪಡಿಸಲು ಎಪಿಎಂಸಿ ಕಾರ್ಯದರ್ಶಿಗೆ ಸೂಚಿಸಿದರು. ಇದೇ ವಿಚಾರವಾಗಿ ರಾಜ್ಯ ಎಪಿಎಂಸಿ ನಿರ್ದೇಶಕ ಶಿವಾನಂದ ಕಪಾಶಿ ಅವರಿಗೆ ದೂರವಾಣಿಯಲ್ಲಿ ಸಂಪರ್ಕಿಸಿದಾಗ, ಎಪಿಎಂಸಿಯಲ್ಲಿ ಅನುದಾನ ಲಭ್ಯವಿದ್ದು, ಪ್ರಸ್ತಾವನೆ ಸಲ್ಲಿಸಿದರೆ ಈ ಕಾರ್ಯ ಮಾಡುವುದಾಗಿ ಭರವಸೆ ನೀಡಿದರು.

ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಮಾತನಾಡಿ, ಕನಿಷ್ಠ ಬೆಂಬಲ ಬೆಲೆಗೆ ಸುಗ್ರೀವಾಜ್ಞೆ ಜಾರಿ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಮಲ್ಲಿಕಾರ್ಜುನರ ನೇತೃತ್ವದಲ್ಲಿ ಮೇ 23ರಂದು ಸಿಎಂ ಕಚೇರಿಯಲ್ಲಿ ಮುಂದಿನ ಸಭೆಗೆ ದಿನಾಂಕ ನಿಗದಿಯಾಗಲಿದೆ. ಸಭೆಯಲ್ಲಿ ಈ ಎಲ್ಲ ವಿಚಾರಗಳನ್ನು ಸಮಗ್ರವಾಗಿ ಚರ್ಚಿಸೋಣ. ಸಹಾಯಧನ ಕೊಡಿಸುವ ವಿಚಾರ ಚರ್ಚೆ ಮಾಡಲಾಗುವುದು ಎಂದು ಹೇಳಿದರು.

ಮಾರುಕಟ್ಟೆಯಲ್ಲಿ ಭತ್ತದ ಬೆಲೆ ಕುಸಿದಿದ್ದು, ಕೂಡಲೇ ಅಧಿಕಾರಿಗಳು ಮಧ್ಯ ಪ್ರವೇಶ ಮಾಡಿ, ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ದರದಲ್ಲಿ ಖರೀದಿಸದಂತೆ ಎಪಿಎಂಸಿ ಮಾರುಕಟ್ಟೆ ಅಧಿಕಾರಿಗಳು ನೋಡಿಕೊಳ್ಳಬೇಕು. ಸಿಎಂ ಸಭೆಯಲ್ಲಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯುವ ಪ್ರಯತ್ನ ಮಾಡುತ್ತೇವೆ. ಕನಿಷ್ಠ ರಾಜ್ಯ ಮಟ್ಟಕ್ಕಾದರೂ ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸುವ ಸಂಬಂಧ ಸಿಎಂ ಮೇಲೆ ಒತ್ತಡ ಹೇರುತ್ತೇವೆ ಎಂದು ತಿಳಿಸಿದರು.

ಸಂಘದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ಮಾತನಾಡಿ, ಶಾಸಕರು ಮತ್ತು ಜಿಲ್ಲಾಧಿಕಾರಿ ಭರವಸೆ ಮೇರೆಗೆ ಮೇ 25ರಂದು ಉದ್ದೇಶಿತ ದಾವಣಗೆರೆ ಬಂದ್ ಕರೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಆದಷ್ಟು ಬೇಗನೆ ಸಚಿವರು, ಶಾಸಕರು ಹಾಗೂ ಜಿಲ್ಲಾಧಿಕಾರಿ ರೈತರ ಬೇಡಿಕೆಗಳಿಗೆ ಪ್ರಥಮಾದ್ಯತೆ ಮೇಲೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ರೈತ ಸಂಘದ ಮುಖಂಡರಾದ ಆಲೂರು ಪರಶುರಾಮ, ಚಿನ್ನಸಮುದ್ರ ಭೀಮಾನಾಯ್ಕ, ಕುಮಾರಹಳ್ಳಿ ಪ್ರಭು, ರಾಜನಹಟ್ಟಿ ರಾಜು ಚಿಕ್ಕಮಲ್ಲನಹೊಳೆ ಚಿರಂಜೀವಿ, ಹುಚ್ಚವ್ವನಹಳ್ಳಿ ಪ್ರಕಾಶ, ಗಂಡುಗಲಿ, ಕಬ್ಬೂರು ತಿಪ್ಪಣ್ಣ, ಕೊಡಗನೂರು ತಿಮ್ಮಣ್ಣ, ದೇವ್ಲಾನಾಯ್ಕ, ಕುಕ್ಕವಾಡ ಬಸವರಾಜ, ರಾಮಣ್ಣ, ಆನಗೋಡು ಭೀಮಣ್ಣ, ಸುರೇಶ ನಾಯ್ಕ, ಯರವನಾಗತಿಹಳ್ಳಿ ರುದ್ರಣ್ಣ, ಕೋಲ್ಕುಂಟೆ ಬಸವರಾಜ ಇತರರು ಇದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top