ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿದ್ದು, ಕಾಂಗ್ರೆಸ್ ನಲ್ಲಿ ಮುಸುಕಿನ ಗುದ್ದಾಟ ಜೋರಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಬೂದಿ ಮುಚ್ಚಿದ ಕೆಂಡದಂತಿದ್ದು, ಇದಕ್ಕೆ ಪುಷ್ಠಿ ನೀಡುವಂತೆ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ತೀವ್ರ ಅಸಮಾಧಾನ ಹೊರ ಹಾಕಿದ್ದು ಕಾಂಗ್ರೆಸ್ ಅಭ್ಯರ್ಥಿ, ಜಿಲ್ಲಾ ಉಸ್ತುವಾರಿ ಸಚಿವರು, ದಾವಣಗೆರೆ ಸಂಸದರು ಸೌಜನ್ಯಕ್ಕಾದರೂ ನನ್ನ ಪ್ರಚಾರಕ್ಕೆ ಕರೆದಿಲ್ಲ ಎಂದು ಬೇಸರ ಹೊರ ಹಾಕಿದ್ದಾರೆ.
ಸುದ್ದಿಗೊಷ್ಠಿಯಲ್ಲಿ ಮಾತನಾಡಿ, ಪಕ್ಷದಲ್ಲಿ ನನ್ನ ವಿರುದ್ಧ ಕೆಲವರು ಅಪಪ್ರಚಾರ ಮಾಡಿ, ಹೈಕಮಾಂಡ್ ದಾರಿ ತಪ್ಪಿಸುತ್ತಿದ್ದಾರೆ. ಈ ಬಾರಿಯ ಉಪಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ, ಜಿಲ್ಲಾ ಉಸ್ತುವಾರಿ ಸಚಿವರು, ದಾವಣಗೆರೆ ಸಂಸದರು ಸೌಜನ್ಯಕ್ಕಾದರೂ ನನ್ನ ಪ್ರಚಾರಕ್ಕೆ ಕರೆದಿಲ್ಲ.ಆದರೆ, ನಾವೇ ವೈಯಕ್ತಿಕವಾಗಿ ಕ್ಷೇತ್ರದಾದ್ಯಂತ ಸಂಚರಿಸಿ ಮತದಾರರಿಗೆ ಕಾಂಗ್ರೆಸ್ ಗೆ ಮತ ನೀಡುವಂತೆ ಮನವಿ ಮಾಡುತ್ತಿದ್ದೇವೆ ಎಂದರು.
ಆರೋಗ್ಯ ಸರಿ ಇಲ್ಲದ ಕಾರಣ ಬಹಿರಂಗ ಪ್ರಚಾರಕ್ಕೆ ಹೋಗುತ್ತಿಲ್ಲ. ಕೆಪಿಸಿಸಿ ಅಧ್ಯಕ್ಷರು ಶುಕ್ರವಾರ ಕರೆ ಮಾಡಿ ಸುದ್ದಿಗೋಷ್ಠಿ ನಡೆಸುವಂತೆ ಸೂಚಿಸಿದ್ದು, ಇದಕ್ಕಾಗಿ ಈ ಸ್ಪಷ್ಟನೆ ನೀಡುತ್ತಿದ್ದೇವೆ. ಕಾಂಗ್ರೆಸ್ ಪಕ್ಷ ಸಂಘಟನೆಗೆ ನಿರಂತರ ಪ್ರಯತ್ನ ಮುಂದುವರೆಸಿದ್ದೇವೆ. ನಮ್ಮ ಕಡೆಯಿಂದ ಯಾವುದೇ ಲೋಪವಾಗಿಲ್ಲ, ಮುಂದೆಯೂ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿರು.
ಕಾಂಗ್ರೆಸ್ ಮುಖಂಡ ಎನ್.ಟಿ.ಸುಭಾಷ್ಚಂದ್ರ ಮಾತನಾಡಿ,ನಾವು ಪಕ್ಷದ ವಿರುದ್ಧವಾಗಿ ಮಾಡುತ್ತಿಲ್ಲ. ಬದಲಾಗಿ ಪಕ್ಷದ ಬಲವರ್ಧನೆಗೆ ಹಕ್ಕೊತ್ತಾಯ ಮಾಡಿದ್ದೆವು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಭಿಪ್ರಾಯ ಮುಕ್ತವಾಗಿ ಹಂಚಿಕೊಳ್ಳುವ ಹಕ್ಕು ಎಲ್ಲರಿಗೂ ಇದೆ. ನಾವು ಯಾರಿಗೂ ಹೆದರುವ ಅವಶ್ಯಕತೆ ಇಲ್ಲ ಎಂದರು. ಈ ವೇಳೆ ಸಿರಾಜ್ ಅಹ್ಮದ್, ಘನಿ ತಾಹೀರ್ ಇದ್ದರು.



