ದಾವಣಗೆರೆ: ಮಧ್ಯೆ ಕರ್ನಾಟಕ ದಾವಣಗೆರೆ ಜಿಲ್ಲೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸರ್ಕಾರದಲ್ಲಿ ಎರಡು ಮಂತ್ರಿ ಸ್ಥಾನ ಸಿಕ್ಕಿದೆ. ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎಸ್.ಮಲ್ಲಿಕಾರ್ಜುನ್ ಮತ್ತೆ ಸಚಿವ ಸ್ಥಾನ ಸಿಕ್ಕಿದೆ. ಮೊದಲ ಬಾರಿ ಶಾಸಕರಾದ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪಗೆ ಜಾಕ್ ಪಾಟ್ ರೀತಿ ಸಚಿವ ಸ್ಥಾನ ಸಿಕ್ಕಿದೆ. ಈ ಬಾರಿ ಹೊನ್ನಾಳಿ ಹಿರಿಯ ಶಾಸಕಡಿ.ಜಿ. ಶಾಂತನಗೌಡ ಅವರಿಗೆ ಮಂತ್ರಿ ಸ್ಥಾನ ಸಿಗುವ ನಿರೀಕ್ಷೆಯನ್ನು ಕ್ಷೇತ್ರದ ಜನ ಇಟ್ಟುಕೊಂಡಿದ್ದರು. ಆದರೆ, ಕಾಂಗ್ರೆಸ್ ಹೈಕಮಾಂಡ್ ಮತ್ತೆ ಶಾಮನೂರು ಕುಟುಂಬಕ್ಕೆ ಮಣಿ ಹಾಕಿದೆ.
ಮೊದಲು ಕಾಂಗ್ರೆಸ್ ಹೈಕಮಾಂಡ್ ಬಿಡುಗಡೆ ಮಾಡಿದ ಸಚಿವರ ಪಟ್ಟಿಯಲ್ಲಿ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಹೆಸರು ಇರಲಿಲ್ಲ. ಉತ್ತರ ಕನ್ನಡ ಜಿಲ್ಲೆ ಭಟ್ಕಳ- ಹೊನ್ನಾವರ ಕ್ಷೇತ್ರದ ಶಾಸಕ ಮಂಕಾಳ ವೈದ್ಯ ಅವರ ಹೆಸರನ್ನು ಕೈಬಿಟ್ಟು, ವೀರಶೈವ ಲಿಂಗಾಯತ ಸಮುದಾಯದ ಎಸ್.ಎಸ್.ಮಲ್ಲಿಕಾರ್ಜುನ್ ಗೆ ಮಂತ್ರಿ ಪಟ್ಟ ನೀಡಲಾಗಿದೆ.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ದಿ. ಶಾಮನೂರು ಶಿವಶಂಕರಪ್ಪ ಅವರ ಪುತ್ರರಾಗಿರುವ ಎಸ್.ಎಸ್.ಮಲ್ಲಿಕಾರ್ಜುನ್ ಪ್ರಭಾವಿ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದಾರೆ. ಇವರಿಗೆ ಸಚಿವ ಸ್ಥಾನ ತಪ್ಪಿದ್ರೆ ಹಿನ್ನೆಡೆ ಆಗುವ ನಿರೀಕ್ಷೆ ಕಂಡು ಕೊನೆ ಕ್ಷಣದಲ್ಲಿ ಮಂತ್ರಿ ಸ್ಥಾನ ನೀಡಲಾಗಿದೆ.
‘ಮೊದಲ ಪಟ್ಟಿ ಬಿಡುಗಡೆ ಬಳಿಕ ಎಸ್.ಎಸ್.ಮಲ್ಲಿಕಾರ್ಜುನ್ ಅವರು ರಾಜ್ಯಮಟ್ಟದ ನಾಯಕರು ಹಾಗೂ ಹೈಕಮಾಂಡ್ ನಾಯಕರ ಮೇಲೆ ಒತ್ತಡ ಹೇರಿದ್ದಾರೆ ಎಂಬ ಮಾತುಗಳು ಜಿಲ್ಲೆಯಲ್ಲಿ ಕೇಳಿಬರುತ್ತಿವೆ.
1999ರಲ್ಲಿ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಅಂದಿನ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವಧಿಯಲ್ಲಿ ಸಚಿವರಾಗಿ ಕೆಲಸ ಮಾಡಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ಮೊದಲ ಮೊದಲ ಅವಧಿಯ ಸರ್ಕಾರದಲ್ಲಿ ಸಚಿವರಾಗಿದ್ದರು. ನಂತರ 2023ರ ಸರ್ಕಾರದಲ್ಲೂ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ಮತ್ತೆ ಸಚಿವ ಸ್ಥಾನವನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.ಈಗಾಗಲೇ 3 ಬಾರಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಎಸ್.ಎಸ್.ಮಲ್ಲಿಕಾರ್ಜುನ್ ಅವರು 4ನೇ ಬಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿದ್ದಾರೆ. ಇನ್ನು ಮಾಯಕೊಂಡ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕೆ.ಎಸ್.ಬಸವಂತಪ್ಪ ಅವರಿಗೂ ಈ ಬಾರಿ ಸಂಪುಟದಲ್ಲಿ ಅವಕಾಶ ದೊರೆತಿದೆ.


