ದಾವಣಗೆರೆ: ಯಡಿಯೂರಪ್ಪ ಅವರಂತೆ ಕಾಲಿಗೆ ಚಕ್ರ ಕಟ್ಟಿಕೊಂಡು ಇಡೀ ರಾಜ್ಯ ಸುತ್ತಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಿಸಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಬಿ. ವೈ. ವಿಜಯೇಂದ್ರ ಹೇಳಿದರು.
ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ದಾವಣಗೆರೆಗೆ ಆಗಮಿಸಿದ ವಿಜಯೇಂದ್ರ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಬಾಪೂಜಿ ಸಮುದಾಯ ಭವನದ ಎದುರು ಪಟಾಕಿ ಸಿಡಿಸಿ ಬೃಹತ್ ಹೂವಿನ ಹಾರವನ್ನು ಕ್ರೇನ್ ಮೂಲಕ ಹಾಕಿ ಸ್ವಾಗತಿಸಿದರು. ನಂತರ ಮಾತನಾಡಿ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್, ರೈತ, ಬಡವರ ವಿರೋಧಿ ಪಕ್ಷವಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದು. ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಪ್ರಧಾನಿ ನರೇಂದ್ರ ಮೋದಿ ಕೈ ಬಲಪಡಿಸುವುದು ಎಂದರು.
ಬಿಜೆಪಿ ಕಾರ್ಯಕರ್ತರು ಮನೆ ಸೇರಿಕೊಳ್ಳದೇ ದೇಶದ ಗಡಿ ಕಾಯುವ ಸೈನಿಕನಂತೆ ಕೆಲಸ ಮಾಡಬೇಕು. ಬಿಜೆಪಿ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು. ಅಲ್ಲಿಯವರೆಗೂ ಮನೆಯಲ್ಲಿ ಕೂರುವುದಿಲ್ಲ ಎಂದರು.



