ದಾವಣಗೆರೆ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಲೀಡ್ ಕೊಡಿಸದ ಸಚಿವರು ರಾಜೀನಾಮೆ ನೀಡಲಿ ಎಂದು ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ತಮ್ಮದೇ ಪಕ್ಷದ ಸಚಿವರನ್ನ ಒತ್ತಾಯಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಹೆಚ್ಚಿನ ಸೀಟ್ ಬಾರದ ಹಿನ್ನೆಲೆ ವಪ್ರತಿಕ್ರಿಯೆ ನೀಡಿ, ಲೋಕಸಭಾ ಚುನಾವಣೆಯಲ್ಲಿ ಯಾವ ಸಚಿವರು ತಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಲೀಡ್ ಕಡಿಮೆ ಕೊಡಿಸಿದ್ದಾರೋ ಅಂತವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ. ಸಚಿವ ಸ್ಥಾನವನ್ನು ವಜಾಗೊಳಿಸಿ ಹೊಸಬರಿಗೆ ಅವಕಾಶ ಮಾಡಿಕೊಡುವಂತೆ ಆಗ್ರಹಿಸಿದ್ದಾರೆ.
ನಮಗೆ ಪಕ್ಷ ಮುಖ್ಯ ಹೊರತು ವ್ಯಕ್ತಿ ಮುಖ್ಯವಲ್ಲ. ಅದ್ದರಿಂದ ರಾಹುಲ್ ಗಾಂಧಿಯವರು ಹಾಗೂ ಹಿರಿಯ ನಾಯಕರು ಸಚಿವರ ವಿರುದ್ದ ಕ್ರಮಕೈಗೊಳ್ಳಬೇಕು. ಇಷ್ಟೊಂದು ಗ್ಯಾರಂಟಿ ನೀಡಿದರೂ ಕೂಡ ಹೆಚ್ಚು ಸೀಟ್ ಬಂದಿಲ್ಲ. ಯಾರು ಲೀಡ್ ಕೊಡಿಸಲು ಸಾಧ್ಯವಾಗಲಿಲ್ಲವೋ ಅಂತ ಸಚಿವರನ್ನು ತೆಗೆದು ಹೊಸಬರಿಗೆ ಟಿಕೆಟ್ ಕೊಡಬೇಕು.
ಶಾಸಕರು, ಕಾರ್ಯಕರ್ತರು ಹಗಲು ಇರುಳು ಕೆಲಸ ಮಾಡಿ ಆಯಾ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿದ್ದೇವೆ. ಆದರೆ, ಸಚಿವರುಗಳು ಅಭ್ಯರ್ಥಿಗಳನ್ನು ಗೆಲ್ಲಿಸೋದು ಇರಲಿ ಅವರ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿಲ್ಲ ಎಂದು ಸ್ವಪಕ್ಷದ ಸಚಿವರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.