ದಾವಣಗೆರೆ: ಇತ್ತೀಚೆಗೆ ಬಿಜೆಪಿ ಅಭ್ಯರ್ಥಿ ವಿರುದ್ಧ ಕಾಂಗ್ರೆಸ್ ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನೀಡಿದ್ದ ಅಡುಗೆ ಮಾಡುವುದಕ್ಕೆ ಲಾಯಕ್ಕು ಹೇಳಿಕೆಗೆ ಸೊಸೆ ಪ್ರಭಾ ಮಲ್ಲಿಕಾರ್ಜುನ ಸ್ಪಷ್ಟನೆ ನೀಡಿದ್ದಾರೆ. ನಮ್ಮ ಮಾವನವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದಿದ್ದಾರೆ.
ಹರಿಹರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಬಳಿಕ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಕಮಲವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅರ್ಪಿಸುವೆ ಎಂದಿದ್ದರು. ಆ ಹೇಳಿಕೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ಗೆ ಮಾತ್ರ ಸೀಮಿತ. ಆದರೆ, ಇಡೀ ಮಹಿಳೆಯರ ವಿರುದ್ಧ ಹೇಳಿಕೆ ನೀಡಲಾಗಿದೆ ಎಂಬುದು ತಪ್ಪು. ನಮ್ಮ ಮಾವನವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ . ಈಗಾಗಲೇ ಈ ವಿಚಾರದ ಬಗ್ಗೆ ಪಕ್ಷದ ಮುಖಂಡರು ಸ್ಪಷ್ಟನೆ ನೀಡಿದ್ದಾರೆ ಎಂದರು.
ನಾಯಕರ ಸ್ಥಾನದಲ್ಲಿದ್ದವರು ಒಂದೊಂದು ಹೇಳಿಕೆ ಕೊಡಬೇಕಾದರೂ ಎಚ್ಚರಿಕೆ ವಹಿಸಬೇಕು. ಇಲ್ಲವಾದರೆ ಸಾಕಷ್ಟು ಅವಾಂತರಗಳಿಗೆ ಕಾರಣವಾಗುತ್ತೆ. ಶಾಮನೂರು ಶಿವಶಂಕರಪ್ಪ ಹೇಳಿಕೆ ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಹೇಳಿಕೆಯನ್ನು ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಖಂಡಿಸಿ ಟ್ವಿಟ್ ಮಾಡಿದ್ದರು.



