ದಾವಣಗೆರೆ; ಜಿಲ್ಲೆಯಲ್ಲಿ 1.10 ಲಕ್ಷ ಜನ ಸಂಚಾರ ನಿಯಮ ಉಲ್ಲಂಘನೆ ದಂಡ ಬಾಕಿ ಉಳಿಸಿಕೊಂಡಿದ್ದಾರೆ. ದಂಡ ಕಟ್ಟದ ವ್ಯಕ್ತಿಗಳನ್ನು ಗುರುತಿಸಿ ಅವರ ಮನೆಗೆ ತೆರಳಿ ಹಬ್ಬದಂತೆ ದಂಡ ವಸೂಲಿ ಮಾಡುವಂತೆ ಪೊಲೀಸ್ ಸಿಬ್ಬಂದಿಗೆ ಪೊಲೀಸ್ ತರಬೇತಿ ಕೇಂದ್ರದ ಎಡಿಜಿಪಿ ಅಲೋಕ್ ಕುಮಾರ್ ಸೂಚನೆ ನೀಡಿದರು.
ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ನಂತರ ಮಾತನಾಡಿದ ಅವರು, ಕಳೆದ ವರ್ಷ ರಸ್ತೆ ದುರಂತದಲ್ಲಿ ಹನ್ನೊಂದು ಸಾವಿರದ ನಾಲ್ಕು ಜನ ಸಾವನ್ನಪ್ಪಿದ್ದಾರೆ. ಇದರಲ್ಲಿ ಶೇ. 60ಕ್ಕೂ ಹೆಚ್ಚು ಜನ ದ್ವಿಚಕ್ರ ವಾಹನ ಸವಾರರಾಗಿದ್ದಾರೆ. ಇದೇ ಕಾರಣಕ್ಕೆ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು. ಬೆಂಗಳೂರಿಗಿಂತ ಚೆನ್ನೈನಲ್ಲಿ ಬಿಸಿಲು ಜಾಸ್ತಿ. ಆದರೆ ಚೆನ್ನೈನಲ್ಲಿ ಜಾಸ್ತಿ ಹೆಲ್ಮೆಟ್ ಧರಿಸುತ್ತಾರೆ. ಇಲ್ಲಿ ಯಾಕೆ ಹೆಲ್ಮೆಟ್ ಧರಿಸಲ್ಲ ಎಂದರು.
ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಪೂರೈಕೆ ಜಾಗತಿಮಟ್ಟದಲ್ಲಿ ಹೆಚ್ಚಾಗುತ್ತಿದೆ. ಅಫಘಾನಿಸ್ತಾನದಂತಹ ಇಂತಹ ಮಾದಕ ವಸ್ತುಗಳ ಉತ್ಪಾದನೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಜೊತೆಗೆ ಗಾಂಜಾ ಪೂರೈಕೆ ಆಗುತ್ತಿರುವ ಖಚಿತ ಮಾಹಿತಿ ಇದ್ದರೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು. ಶಾಲಾ ಆವರಣದಲ್ಲಿ ಇಂತಹ ಘಟನೆ ನಡೆಯುತ್ತಿದ್ದರೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.



