ದಾವಣಗೆರೆ: ಎಸ್.ಐ.ಆರ್.ಪ್ರಕ್ರಿಯೆ ಸುಗಮ; ಮತದಾರರ ಸಹಾಯಕ್ಕಾಗಿ ಸೌಲಭ್ಯ ಕೇಂದ್ರಗಳ ಸ್ಥಾಪನೆ; ಜಿಲ್ಲಾ ಚುನಾವಣಾಧಿಕಾರಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆೆ (ಎಸ್.ಐ.ಆರ್) ಪ್ರಕ್ರಿಯೆ ಸುಗಮವಾಗಿ ನಡೆಯುತ್ತಿದ್ದು, ಮತದಾರರ ಸಹಾಯಕ್ಕಾಗಿ ಸೌಲಭ್ಯ ಕೇಂದ್ರಗಳನ್ನು ಒದಗಿಸಲಾಗಿದ್ದು ಸಂಶಯ ಹಾಗೂ ಹೆಚ್ಚಿನ ಮಾಹಿತಿ ಇಲ್ಲಿಂದ ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಸಂಬಂಧ ತೆರೆಯಲಾಗಿರುವ ಮತದಾರರ ನೋಂದಣಿ ಸೌಲಭ್ಯ (ಸಹಾಯ) ಕೇಂದ್ರಗಳಾದ ಎಂ.ಸಿ.ಸಿ ಎ. ಬ್ಲಾಕ್‌ನ ಮಹಾನಗರ ಪಾಲಿಕೆ ಕಚೇರಿ, ವಿನಾಯಕ ಬಡಾವಣೆ ಸರ್ಕಾರಿ ಪ್ರಾಥಮಿಕ ಶಾಲೆ, ದುಡಾ ಕಚೇರಿ ಮತ್ತು ದೇವರಾಜು ಅರಸು ಬಡಾವಣೆ ಬಿ. ಬ್ಲಾಕ್ ವಿಕಲಚೇತರ ಶಾಲೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಎಸ್.ಬಿ.ಎಸ್ ನಗರ ಸರ್ಕಾರಿ ಪ್ರಾಥಮಿಕ ಶಾಲಾ ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರು ಮತ್ತು ಬಿ.ಎಲ್.ಓ ಗಳನ್ನು ಉದ್ದೇಶಿಸಿ ಮಾತನಾಡಿದರು.

ಪ್ರತಿ ಮತದಾರರ ಮನೆಗೆ ಕಡ್ಡಾಯವಾಗಿ 3 ಭಾರಿ ಮತಗಟ್ಟೆ ಅಧಿಕಾರಿ ಬಿ.ಎಲ್.ಓ ಭೇಟಿ ನೀಡುವರು. ಮತದಾರರು ಸ್ಥಳದಲ್ಲಿ ಲಭ್ಯವಿಲ್ಲದಿದ್ದರೆ, ಅವರ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ ಮಾಹಿತಿ ನೀಡಿ, ಮನೆಯಲ್ಲಿ ಇಲ್ಲದಿರುವ ಸಂದರ್ಭದಲ್ಲಿ ಮನೆಯ ಬಾಗಿಲಿನ ಮೇಲೆ ಕಡ್ಡಾಯವಾಗಿ ಸ್ಟಿಕ್ಕರ್ ಅಂಟಿಸಿ, ಮತಗಟ್ಟೆ ಅಧಿಕಾರಿ ಯಾವ ಕಚೇರಿಯಲ್ಲಿ ಲಭ್ಯವಿರುವ ಮಾಹಿತಿಯನ್ನು ಮತದಾರರಿಗೆ ಕಡ್ಡಾಯವಾಗಿ ನೀಡಬೇಕು. ಮತದಾರರು ಅವರು ನಿಯೋಜಿತ ಸ್ಥಳದಲ್ಲಿ ವಾಸಿಸುತ್ತಿಲ್ಲ ಎಂಬುದು ದೃಢಪಟ್ಟರೆ, ಅಂತಹವರನ್ನು ‘ಅಲಭ್ಯ’ ಎಂದು ಗುರುತಿಸಿ ವರದಿಯಲ್ಲಿ ದಾಖಲಿಸಿ ಎಂದು ಮತಗಟ್ಟೆ ಅಧಿಕಾರಿಗಳಿಗೆ ತಿಳಿಸಿದರು.

ಒಂದೇ ಕ್ಷೇತ್ರದ ವ್ಯಾಪ್ತಿಯಲ್ಲಿ ಮನೆ ಬದಲಾಯಿಸಿರುವ ಮತದಾರರು ತಮ್ಮ ಹೆಸರು ಕೈಬಿಟ್ಟು ಹೋಗುವ ಆತಂಕ ಪಡಬೇಕಾಗಿಲ್ಲ, ಅಂತಹ ಮತದಾರರು ನಮೂನೆ-8′ ಸಲ್ಲಿಸುವ ಮೂಲಕ ಸುಲಭವಾಗಿ ತಮ್ಮ ಹೊಸ ವಿಳಾಸವನ್ನು ನವೀಕರಿಸಿಕೊಳ್ಳಬಹುದು ಎಂದು ಸಾರ್ವಜನಿಕರಿಗೆ ತಿಳಿಸಿದರು.

ನಗರದಲ್ಲಿ ಯಾರಾದರೂ ಅನುಮಾನಾಸ್ಪದ ವ್ಯಕ್ತಿಗಳು ನಕಲಿ ಮತದಾರರ ಗುರುತಿನ ಚೀಟಿಗಳನ್ನು ಹೊಂದಿರುವುದು ಕಂಡುಬಂದಲ್ಲಿ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಬೇಕು. ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆಗೆ ಧಕ್ಕೆ ತರುವಂತಹ ಯಾವುದೇ ಅಕ್ರಮ ಚಟುವಟಿಕೆಗಳನ್ನು ಜಿಲ್ಲಾಡಳಿತ ಸಹಿಸುವುದಿಲ್ಲ ಎಂದು ಅವರು ಎಚ್ಚರಿಸಿದರು.

ಗ್ರಾಮೀಣ ಪ್ರದೇಶಗಳಿಗೆ ಹೋಲಿಸಿದರೆ ನಗರ ಪ್ರದೇಶಗಳಲ್ಲಿ ಫಲಾನುಭವಿಗಳ ನಿಖರವಾದ ವಿಳಾಸ ಪತ್ತೆ ಹಚ್ಚುವುದು ಸವಾಲಿನ ಕೆಲಸವಾಗಿದೆ. ಆದಾಗ್ಯೂ, ಬಿ.ಎಲ್.ಓಗಳು ಈ ಸವಾಲನ್ನು ಸಮರ್ಥವಾಗಿ ಎದುರಿಸಿ, ಅರ್ಹರೆಲ್ಲರಿಗೂ ಶೇ 100 ರಷ್ಟು ಗಣತಿ ನಮೂನೆಗಳನ್ನು ತಲುಪಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

ಈ ವೇಳೆ ಮಹಾನಗರ ಪಾಲಿಕೆ ಆಯುಕ್ತ ಮಹಾಂತೇಶ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಮತ ಹೊಸಗೌಡರ್ ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *