ದಾವಣಗೆರೆ: ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ ನಗರ, ಪಟ್ಟಣ, ಗ್ರಾಮಾಂತರ ಪ್ರದೇಶದಲ್ಲಿ ಮನೆ ನಿರ್ಮಾಣಕ್ಕೆ ಫಲಾನುಭವಿ ಆಯ್ಕೆ ಮಾಡಿ ಮಂಜೂರಾತಿ ಪತ್ರ ನೀಡಬೇಕು. ಇದರ ಜೊತೆಗೆ ನಿವೇಶನ ರಹಿತರಿಗೆ ಹಕ್ಕುಪತ್ರ ನೀಡಿ, ಮನೆ ನಿರ್ಮಾಣಕ್ಕೆ ಅನುವು ಮಾಡಿಕೊಡಿ ಎಂದು ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಿಎಂ ಆವಾಸ್ನಡಿ ಪಾಲಿಕೆ ವ್ಯಾಪ್ತಿ ಯಲ್ಲಿ 966 ವಸತಿ ರಹಿತರಿಗೆ ಶೀಘ್ರವೇ
ನಿವೇಶನ ಹಂಚಿಕೆ ಮಾಡಿ ಹಕ್ಕು ಪತ್ರ ನೀಡಬೇಕು ಎಂದು ಸೂಚಿಸಿದರು. ನಿವೇಶನ ಹಂಚಿಕೆ ಬಗ್ಗೆ ಕೆಲವರು ಲೋಕಾಯುಕ್ತಕ್ಕೆ ದೂರು ನೀಡಿದ್ದು ಪಾಲಿಕೆ ಆಯುಕ್ತರು ಈ ಬಗ್ಗೆ ಸಂಪೂರ್ಣ ವರದಿ ಲೋಕಾಯುಕ್ತಕ್ಕೆ ಸಲ್ಲಿಸಿ ಅರ್ಹ ಫಲಾನುಭವಿಗಳಿಗೆ ವಾರದೊಳಗೆ ನಿವೇಶನ ಹಂಚಬೇಕು ಎಂದರು.
ಜಿಪಂ ಸಿಇಒ ಸುರೇಶ ಬಿ.ಇಟ್ನಾಳ್
ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ 2021-22ನೇ ಸಾಲಿನಲ್ಲಿ ನೀಡಲಾದ 2884 ಗುರಿಯಲ್ಲಿ ಎಲ್ಲಾ ಗ್ರಾಪಂಗಳಿಂದ ಫಲಾನುಭವಿಗಳನ್ನು ಆಯ್ಕೆ ಮಾಡಿ, ಮೊದಲ ಕಂತಿನ ಹಣ ಬಿಡುಗಡೆ ಮಾಡಲಾಗಿದೆ ಎಂದರು.
ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ, ಜಿಲ್ಲಾಧಿಕಾರಿ ಡಾ. ವೆಂಕಟೇಶ, ಜಿಪಂ ಸಿಇಓ ಸುರೇಶ ಬಿ.ಇಟ್ನಾಳ್, ದಿಶಾ ಸಮಿತಿ ಸದಸ್ಯರು ಸೇರಿ ಜಿಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.



