ದಾವಣಗೆರೆ: ರಾಜ್ಯ ಸರ್ಕಾರಿ ನೌಕರರ ಸಂಘದ ಸುಧೀರ್ಘ ಕಾಲದ ಬೇಡಿಕೆಗೆ ಸ್ಪಂದಿಸಿ, ಕೇಂದ್ರ ಸರ್ಕಾರಕ್ಕೆ ಸರಿಸಮಾನವಾದ ವೇತನ ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ಪರಿಷ್ಕರಣೆ ಮಾಡಲು ಅಧಿಕಾರಿಗಳ ವೇತನ ಸಮಿತಿ/ವೇತನ ಆಯೋಗ ರಚಿಸುವ ನಿರ್ಧಾರ ಕೈಗೊಂಡಿರುವುದು ಅತ್ಯಂತ ಸ್ವಾಗತಾರ್ಹ. ಈ ನಿರ್ಧಾರದಿಂದ ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಸಂಭ್ರಮಿಸುತ್ತಿದ್ದಾರೆ. ಸರ್ಕಾರದ ಈ ನಿರ್ಧಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಇತಿಹಾಸದಲ್ಲಿ ಪ್ರಥಮ ಹಾಗೂ ಐತಿಹಾಸಿಕವಾಗಿದ್ದು, ಮುಖ್ಯಮಂತ್ರಿಗಳಿಗೆ ಸಮಸ್ತ ರಾಜ್ಯ ಸರ್ಕಾರಿ ನೌಕರರು ಹಾಗೂ 30, ಲಕ್ಷ ಕುಟುಂಬ ಸದಸ್ಯರ ಪರವಾಗಿ ಸಂಘವು ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತದೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರು ತಿಳಿಸಿದ್ದಾರೆ.
ರಾಜ್ಯ ಸರ್ಕಾರದಲ್ಲಿ ಖಾಲಿಯಿರುವ ಹುದ್ದೆಗಳ ಕಾರ್ಯಭಾರದ ಒತ್ತಡದ ನಡುವೆಯೂ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿ ಸರ್ಕಾರಕ್ಕೆ ಉತ್ತಮ ಕೀರ್ತಿ ತರುತ್ತಿರುವ ರಾಜ್ಯ ಸರ್ಕಾರಿ ನೌಕರರ ಸೇವೆಯನ್ನು ಪ್ರಶಂಸಿಸಿದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿರವರು ವಿಧಾನಸಭಾ ಅಧಿವೇಶನದಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುವ ಸಂದರ್ಭದಲ್ಲಿ, ನಾನು 2022-2023ನೇ ಸಾಲಿನ ಆಯ-ವ್ಯಯದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಭತ್ಯೆಗಳನ್ನು ಪರಿಷ್ಕರಣೆ ಬಗ್ಗೆ ಪ್ರಸ್ತಾಪಿಸಿರಲಿಲ್ಲ. ಆದಾಗ್ಯೂ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ನೀಡಿದ ವಾಗ್ದಾನ ಹಾಗೂ ಖಾಲಿ ಹುದ್ದೆಗಳಿದ್ದಾಗ್ಯೂ ಕರ್ತವ್ಯನಿರತ ನೌಕರರ ಪರಿಶ್ರಮವನ್ನು ಪರಿಗಣಿಸಿ ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಭತ್ಯೆಗಳನ್ನು ಪರಿಷ್ಕರಣೆ ಮಾಡಲು ಅಧಿಕಾರಿಗಳ ವೇತನ ಸಮಿತಿ/ ವೇತನ ಆಯೋಗ ರಚನೆ ಮಾಡುವುದಾಗಿ ಘೋಷಣೆ ಮಾಡಿರುತ್ತಾರೆ.
ಪ್ರಸಕ್ತ ಸಾಲಿನ ಬಜೆಟ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ನೀಡುವಂತೆ ಒತ್ತಾಯಿಸಿ ಪ್ರಸ್ತಾವನೆಯನ್ನು ಮಂಡಿಸಿದ ರಾಜ್ಯದ ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪರವರಿಗೆ ಹಾಗೂ ಸಚಿವ ಸಂಪುಟದ ಎಲ್ಲಾ ಸಚಿವರಿಗೆ, ರಾಜ್ಯದ ಎಲ್ಲಾ ಶಾಸಕರುಗಳಿಗೆ ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳಿಗೂ ಸಹ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಅಭಿನಂದನೆಗಳನ್ನು ಸಲ್ಲಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಪಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



