ಬೆಂಗಳೂರು: ಅಪಾರ್ಟ್ ಮೆಂಟ್ ಸೇರಿದಂತೆ ದೊಡ್ಡ ದೊಡ್ಡ ಕಟ್ಟಡಗಳಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಚಾರ್ಜ್ ಮಾಡಿಕೊಳ್ಳುವ ವ್ಯವಸ್ಥೆ ಕಡ್ಡಾಯವಾಗಿ ಹೊಂದಿರಬೇಕು. ಅದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಎಲೆಕ್ಟ್ರಿಕ್ ವಾಹನಗಳ ಬಳಕೆಯ ಬಗ್ಗೆ ಹಾರ್ವರ್ಡ್ ಇಂಡಿಯಾ ಕಾನ್ಫರೆನ್ಸ್ ನಲ್ಲಿ ಮಾತನಾಡಿ, ಎಲೆಕ್ಟ್ರಿಕ್ ವಾಹನಗಳನ್ನು ಒದಗಿಸಿದರಷ್ಟೇ ಸಾಲದು. ಎಲ್ಲೆಡೆಯೂ ಸುಲಭವಾಗಿ ಚಾರ್ಜ್ ವ್ಯವಸ್ಥೆ ಇರಬೇಕು. ಮುಂದಿನ ದಿನಗಳಲ್ಲಿ ಬ್ಯಾಟರಿ ವಾಹನಗಳು ಮಾರುಕಟ್ಟೆಗೆ ಬರಲಿವೆ. ಗ್ರಾಹಕರು ಬ್ಯಾಟರಿಗಳನ್ನು ಬಾಡಿಗೆಗೆ ಪಡೆದು ಆ ವಾಹನಗಳನ್ನು ಚಲಾಯಿಸಿಕೊಂಡು ಹೋಗಬಹುದು. ಎಲ್ಲೆಡೆ ಪೆಟ್ರೋಲ್ ಬಂಕ್ಗಳಂತೆ ಬ್ಯಾಟರಿ ಬಂಕ್ಗಳೂ ತಲೆಎತ್ತಲಿವೆ. ಆಗ ಗ್ರಾಹಕನಿಗೆ ಕಡಿಮೆ ದರದಲ್ಲಿ ವಾಹನವೂ ದೊರೆಯಲಿದೆ. ತನ್ನ ಅನುಕೂಲಕ್ಕೆ ತಕ್ಕಂತೆ ಗ್ರಾಹಕನು ಬ್ಯಾಟರಿಯನ್ನು ಬಳಕೆ ಮಾಡಿಕೊಳ್ಳಬಹುದು ಎಂದು ಅವರು ನುಡಿದರು.
ವಾಹನ ಮಾಲಿನ್ಯವನ್ನು ಸಂಪೂರ್ಣ ತೊಡೆದುಹಾಕಲು ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಲೇಬೇಕು. ಅದಕ್ಕೆ ಬೇಕಾದ ಸಬ್ಸಿಡಿ, ರಿಯಾಯಿತಿ ವಿದ್ಯುತ್ ಸೇರಿದಂತೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ದೇಶದಲ್ಲೇ ಮೊತ್ತ ಮೊದಲಿಗೆ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅನುಷ್ಠಾನಕ್ಕೆ ತಂದಿರುವ ಕರ್ನಾಟಕವು ಹೊಗೆರಹಿತ ವಾಹನಗಳ ಬಳಕೆಗೆ ಹೆಚ್ಚು ಒತ್ತು ನೀಡುತ್ತಿದೆ ಎಂದರು.
ಎಲೆಕ್ಟ್ರಿಕ್ ವಾಹನ ತಯಾರಿಕೆ ಹಾಗೂ ಅದಕ್ಕೆ ಪೂರಕವಾದ ಕೈಗಾರಿಕೆಗಳನ್ನು ಸ್ಥಾಪನೆಗೆ ಸರಕಾರ ಹೆಚ್ಚು ಬೆಂಬಲ ನೀಡುತ್ತಿದೆ. ರಾಜ್ಯದಲ್ಲಿ ಈ ಕ್ಷೇತ್ರಕ್ಕೆ ಸಂಬಂಧಿಸಿ ಕೈಗಾರಿಕೆಗಳು ಸ್ಥಾಪನೆಯಾಗುತ್ತಿವೆ ಎಂದ ಅವರು, ಜಾಗತಿಕ ತಾಪಮಾನ ನಿಯಂತ್ರಣಕ್ಕೆ ಕರ್ನಾಟಕವು ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದರು.



