ಡಿವಿಜಿ ಸುದ್ದಿ, ಬೆಂಗಳೂರು: ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರೆ ಯಾವುದೇ ರೀತಿ ತನಿಖೆ ನಡೆಸಿದರೂ ಎದುರಿಸಲು ಸಿದ್ಧವಾಗಿರಬೇಕು. ಸತ್ಯಕ್ಕೆ ಜಯ ಸಿಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮೇಲಿನ ಸಿಬಿಐ ದಾಳಿಯ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನಾನು ಈ ವಿಚಾರಕ್ಕೆ ಸಂಬಂಧಿಸಿದಂತೆ ತಕ್ಷಣ ಯಾವುದೇ ರೀತಿ ಪ್ರತಿಕ್ರಿಯೆ ಕೊಡಲು ತಯಾರಿಲ್ಲ. ಯಾಕೆಂದರೆ ಇಂಹತ ಸನ್ನಿವೇಶದಲ್ಲಿ ಪ್ರತಿಯೊಂದು ರಾಜಕೀಯ ಪಕ್ಷಗಳು ಸಹ ಇದು ರಾಜಕೀಯ ಪಿತೂರಿ ಎಂದು ಹೇಳುವುದು ಸಹಜ. ಆದರೆ ಯಾವುದೇ ಜನಪ್ರತಿನಿಧಿಯೊಬ್ಬ ಪ್ರಯಾಣಿಕವಾಗಿ ಅಧಿಕಾರದಲ್ಲಿದ್ದಾಗ ಕೆಲಸ ಮಾಡಿದ್ದರೆ ಯಾವುದಕ್ಕೂ ಭಯಪಡುವ ಅಗತ್ಯವಿಲ್ಲ ಎಂದರು.
ಈ ದೇಶದ ಕಾನೂನಿನ ವ್ಯವಸ್ಥೆಯಲ್ಲಿ ತಡವಾದರೂ ಸರಿ ಸತ್ಯ ಬಯಲಾಗುತ್ತೆ ಅನ್ನೋ ನಂಬಿಕೆ ಇದೆ. ದಾಳಿ ಮಾಡಿದ ಸಿಬಿಐ ಅಧಿಕಾರಿಗಳು ಯಾವ ಕಾರಣಕ್ಕೆ ದಾಳಿ ಮಾಡಿದ್ದೇವೆ ಎಂದು ಹೇಳಬೇಕು. ಇಲ್ಲಾ ಕಾಂಗ್ರೆಸ್ ನಾಯಕರು ಈ ಬಗ್ಗೆ ಹೇಳಬೇಕು, ಇದರ ಬಗ್ಗೆ ನಮಗೇನೂ ಗೊತ್ತಿಲ್ಲ. ಹೀಗಾಗಿ ನಾನು ಚರ್ಚೆ ಮಾಡುವುದರಿಂದ ಪ್ರಯೋಜನ ಇಲ್ಲ ಎಂಬುದು ನನ್ನ ಅಭಿಪ್ರಾಯ ಎಂದಿದ್ದಾರೆ.



