ಬೆಂಗಳೂರು: ಕೃಷಿ ಮಸೂದೆ ವಿರೋಧಿಸಿ ವಿವಿಧ ರೈತ ಸಂಘಟನೆಗಳು ಡಿಸೆಂಬರ್ 8ರಂದು ಭಾರತ ಬಂದ್ ಕರೆ ನೀಡಲಾಗಿದ್ದು, ಈ ಬಂದ್ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೆಂಬಲ ಸೂಚಿಸಿವೆ.
ಈ ಬಗ್ಗೆ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ , ದೆಹಲಿಯಲ್ಲಿ ರೈತರ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡಿದೆ. ಬೇಜವಾಬ್ದಾರಿಯಿಂದ ವರ್ತಿಸಿದೆ. ಆದ್ದರಿಂದ ಕರ್ನಾಟಕ ಬಂದ್ ಮಾಡುವ ಮೂಲಕ ಎಲ್ಲಾ ಜಿಲ್ಲೆ, ತಾಲೂಕುಗಳಲ್ಲಿ ರೈತರು ಪ್ರತಿಭಟನೆಯಲ್ಲಿ ಭಾಗವಹಿಸುತ್ತಾರೆ ಎಂದು ಅವರು ತಿಳಿಸಿದರು.
ಯಡಿಯೂರಪ್ಪನವರು ನಮ್ಮ ಬಂದ್ ಹತ್ತಿಕ್ಕುವ ಕೆಲಸ ಮಾಡಬಾರದು ಎಂದರು. ಈ ಬಂದ್ಗೆ ಎಲ್ಲ ಸಂಘಟನೆಗಳು ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿಕೊಂಡರು. ಕೇಂದ್ರ ಸರಕಾರ ರೈತರ ಹಾಗೂ ದೇಶ ವಿರೋಧಿ ಮತ್ತು ಕಾರ್ಪೋರೇಟ್ ಕಂಪನಿ ಪರವಾದ ಕೃಷಿ ಕಾಯ್ದೆಗಳು ಮತ್ತು ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ- 2020 ಮತ್ತು ವಿದ್ಯುಚ್ಛಕ್ತಿ ತಿದ್ದುಪಡಿ ಮಸೂದೆ – 2020 ಗಳನ್ನು ಬೇಷರತ್ತಾಗಿ ವಾಪಾಸು ಪಡೆಯುವಂತೆ ಒತ್ತಾಯಿಸಲಾಗುವುದು. ಅಂದು ಎಲ್ಲಾ ಹೆದ್ದಾರಿ, ರಸ್ತೆಗಳನ್ನು ಬಂದ್ ಮಾಡುತ್ತೇವೆ ಎಂದರು.
ಬಂದ್ಗೆ ಎಡಪಕ್ಷದವರು, ಪುಟ್ಟಣ್ಣಯ್ಯನವರ ರೈತ ಸಂಘಟನೆ, ಕುರುಬೂರು ಶಾಂತಕುಮಾರ್ ಸಂಘಟನೆಯವರು ಭಾಗವಹಿಸುತ್ತಾರೆ. ಅನೇಕ ಕನ್ನಡ ಪರ ಸಂಘಟನೆಗಳು, ಮಹಿಳಾ ಸಂಘಟನೆಗಳು ಭಾಗವಹಿಸಲಿವೆ ಎಂದು ಹೇಳಿದರು.



