ಡಿವಿಜಿ ಸುದ್ದಿ, ಬೆಂಗಳೂರು: ಕೃಷಿ ಮಸೂದೆ ತಿದ್ದುಪಡಿಗಳಿಂದ ರೈತರ ಕಲ್ಯಾಣವಾಗುತ್ತದೆ ಎಂಬ ಭರವಸೆ ಇದ್ದರೆ, ಯಡಿಯೂರಪ್ಪ ಅವರು ಮೊದಲು ವಿಧಾನಸಭೆಯನ್ನು ವಿಸರ್ಜಿಸಲಿ. ಇದೇ ವಿಷಯ ಜನರ ಮುಂದಿಟ್ಟು ಚುನಾವಣೆ ಎದುರಿಸಲಿ ಎಂದು ಸವಾಲು ಹಾಕಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಪ್ರಣಾಳಿಕೆಯಲ್ಲಿ ಹೇಳದೇ ಇರುವ ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರಕ್ಕೆ ಯಾವ ನೈತಿಕತೆಯೂ ಇಲ್ಲ.
ಕೊರೊನಾ ಸಂಕಟದಿಂದ ರೈತರು ಬೀದಿಗೆ ಬಿದ್ದಿದ್ದಾರೆ. ಆದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ರೈತ ವಿರೋಧಿ ಮಸೂದೆಗಳನ್ನು ಜಾರಿಗೆ ತರಲು ಹೊರಟಿದೆ. ಇಡೀ ದೇಶದ ರೈತರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಬೀದಿಗೆ ಇಳಿದು ಬಿಜೆಪಿ ಹುನ್ನಾರವನ್ನು ವಿಫಲಗೊಳಿಸಿದ್ದಾರೆ. ಯಡಿಯೂರಪ್ಪ ಅವರು ಮಾತು ಮಾತಿಗೆ ತಾನು ರೈತ ನಾಯಕನೆಂದು ಕರೆದುಕೊಳ್ಳುತ್ತಾರೆ. ಸಂಘ ಪರಿವಾರದ ಕೇಸರಿ ಶಾಲು ಕಿತ್ತುಹಾಕಿ ಹಸಿರು ಶಾಲು ಹೊದ್ದುಕೊಂಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯಮಂತ್ರಿ ಅಗುತ್ತಿದ್ದಂತೆಯೇ ಹಸಿರು ಶಾಲಿನ ಒಳಗಿದ್ದ ರೈತ ವಿರೋಧಿ ಕೇಸರಿ ಶಾಲು ಹೊರಗೆ ಬಂದಿದೆ ಎಂದಿದ್ದಾರೆ.
ಯಡಿಯೂರಪ್ಪನವರು ಮೊದಲ ಬಾರಿ ಮುಖ್ಯಮಂತ್ರಿ ಆದಾಗ ಹಾವೇರಿಯಲ್ಲಿ ರಸಗೊಬ್ಬರ ಕೇಳಿದ ರೈತರನ್ನು ಗುಂಡಿಟ್ಟು ಸಾಯಿಸಿದರು. ಈ ಬಾರಿ ಮುಖ್ಯಮಂತ್ರಿಯಾದಾಗ ಇಡೀ ರೈತ ಸಮುದಾಯವನ್ನೇ ಸಾಯಿಸಲು ಹೊರಟಿದ್ದಾರೆ. ರೈತರ ಕಣ್ಣೀರ ಶಾಪ ಈ ಪಕ್ಷ ಮತ್ತು ಸರ್ಕಾರಕ್ಕೆ ತಟ್ಟದೆ. ಬಿಜೆಪಿ ಹುಟ್ಟಿನಿಂದಲೇ ರೈತ ವಿರೋಧಿ. ಅದು ಬಂಡವಾಳಿಗರು, ಉದ್ಯಮಿಗಳು ಮತ್ತು ವರ್ತಕರ ಪಕ್ಷ ಎಂದರು.
ಈ ಪಕ್ಷದ ಡಿಎನ್ಎನಲ್ಲಿಯೇ ರೈತ ವಿರೋಧಿ ವಿಷ ಇದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಕಾವೇರಿ- ಕೃಷ್ಣಾ ನದಿನೀರು ಹಂಚಿಕೆಯಲ್ಲಿ ದ್ರೋಹ ಎಸಗಿತು, ಮಹದಾಯಿ, ಮೇಕೆದಾಟು ಯೋಜನೆಗಳಲ್ಲಿ ಮೋಸ ಮಾಡಿದೆ. ಬಿಜೆಪಿಗೆ ಯಾಕೆ ರೈತರ ಮೇಲೆ ಇಷ್ಟೊಂದು ದ್ವೇಷ, ಕರ್ನಾಟಕದ ಬಗ್ಗೆ ಯಾಕೆ ಸೇಡು ಎಂದು ಪ್ರಶ್ನಿಸಿದರು.
ದೇಶವನ್ನು ಕಾರ್ಪೋರೇಟ್ ಕುಳಗಳು ಮತ್ತು ರಿಯಲ್ ಎಸ್ಟೇಟ್ ಧಣಿಗಳಿಗೆ ಮಾರಾಟ ಮಾಡಲು ಹೊರಟಿರುವ ಮೋದಿಯವರ ತಾಳಕ್ಕೆ ಕುಣಿಯತೊಡಗಿದರೆ ವರ್ತಮಾನ ಮಾತ್ರವಲ್ಲ ಇತಿಹಾಸ ಕೂಡಾ ಕ್ಷಮಿಸಲಾರದು ಎಂದರು.