ಹಾವೇರಿ: ಭತ್ತದ ಗದ್ದೆಯಲ್ಲಿ ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ಯುವ ರೈತ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಹೊಸಕಟ್ಟಿ ಗ್ರಾಮದಲ್ಲಿ ನಡೆದಿದೆ.
26 ವರ್ಷದ ನಾಗರಾಜ ತೋಟದ ಮೃತಪಟ್ಟ ಯುವ ರೈತನಾಗಿದ್ದಾನೆ. ಜಮೀನಿನಲ್ಲಿ ಭತ್ತ ನಾಟಿ ಮಾಡಲು ಟ್ರ್ಯಾಕ್ಟರ್ನಿಂದ ಉಳುಮೆ ಮಾಡುವಾಗ ಈ ದುರ್ಘಟನೆ ನಡೆದಿದೆ. ಘಟನೆ ನಡೆಯುತ್ತಿದ್ದಂತೆ ಅಕ್ಕ-ಪಕ್ಕ ಜಮೀನಿನಲ್ಲಿದ್ದ ರೈತರು ರಕ್ಷಣೆ ಮಾಡಲು ಧಾವಿಸಿದ್ದರು. ರೈತನ ದೇಹ ಕೆಸರಿನಲ್ಲಿ ಸಿಲುಕಿದ್ದರಿಂದ ಉಸಿರುಗಟ್ಟಿ ಪ್ರಾಣಪಕ್ಷಿ ಹಾರಿಹೋಗಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ನಾಗರಾಜ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿತ್ತು. ರಟ್ಟಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.



