ಬೆಂಗಳೂರು: ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡುವ ಸಾಲದ ಮೊತ್ತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗುವುದು. ಶೇ.3ರಷ್ಟು ಬಡ್ಡಿ ದರದಲ್ಲಿ 20 ಲಕ್ಷದವರೆಗೆ ಸಾಲ ನೀಡಲಾಗುವುದು. ಇದು ಈ ಬಾರಿಯ ಮುಂಗಾರು ಹಂಗಾಮಿನಿಂದಲೇ ಜಾರಿಗೆ ತರಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಶೂನ್ಯ ಬಡ್ಡಿ ದರ ಸಾಲವನ್ನು 3ಲಕ್ಷ ದಿಂದ 5 ಲಕ್ಷ ರೂ.ಗೆ ಹೆಚ್ಚಳ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಶೇಕಡ 3ರಬಡ್ಡಿ ದರದಲ್ಲಿ ನೀಡುವ ಮಧ್ಯಮಾವಧಿ ಸಾಲದ ಮೊತ್ತವನ್ನು 10 ಲಕ್ಷ ರೂ.ನಿಂದ 20 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲು ಭರವಸೆ ನೀಡಲಾಗಿದ್ದು, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿಯೇ ಇದನ್ನು ಜಾರಿಗೊಳಿಸಿ ರೈತರಿಗೆ ಸಾಲ ಸೌಲಭ್ಯ ಕಲ್ಪಿಸಲಾಗುವುದು ಎಂದರು.
ರೈತರಿಗೆ ಕಳೆದ ವರ್ಷ 12,000 ಕೋಟಿ ರೂ. ಸಾಲ ನೀಡುವ ಗುರಿ ಹೊಂದಿದ್ದು, ಸುಮಾರು 20 ಸಾವಿರ ಕೋಟಿ ರೂಪಾಯಿ ಸಾಲ ವಿತರಣೆ ಮಾಡಲಾಗಿದೆ. ಅದೇ ರೀತಿ ಈ ವರ್ಷವೂ ರೈತರಿಗೆ ಯಾವುದೇ ತೊಂದರೆಯಾಗದಂತೆ ಸಾಲ ವಿತರಿಸಲಾಗುವುದು. ರೈತರಿಗೆ 50,000 ರೂ. 1 ಲಕ್ಷ ರೂ.ವರೆಗಿನ ಸಾಲ ಮನ್ನಾ ಮಾಡುವ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ. ಈ ಬಗ್ಗೆ ಶೀಘ್ರವೇ ಸಭೆ ನಡೆಸಿ ಸಾಲ ಮನ್ನಾ ಸಮರ್ಪಕ ಜಾರಿಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.



