ದಾವಣಗೆರೆ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಪ್ರದೇಶದಲ್ಲಿ ಮೃತಪಟ್ಟ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತದೇಹ ಸೋಮವಾರ ಬೆಳಗಿನ ಜಾವ 3 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ನಂತರ ಸ್ವಗ್ರಾಮ ಹಾವೇರಿ ಜಿಲ್ಲೆಯ ಚಳಗೇರಿಗೆ ತೆಗೆದುಕೊಂಡು ಹೋಗಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
"ಇತ್ತೀಚೆಗೆ ಉಕ್ರೇನ್ ನಲ್ಲಿ ರಷ್ಯಾ ದಾಳಿ ಸಂದರ್ಭದಲ್ಲಿ ಮೃತ ಪಟ್ಟ ಹಾವೇರಿ ಜಿಲ್ಲೆಯ ಯುವಕ ನವೀನ್ ಗ್ಯಾನಗೌಡರ್ ಅವರ ಪಾರ್ಥಿವ ಶರೀರ ದಿ. 21-3-2022, ಸೋಮವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದೆ" : ಮುಖ್ಯಮಂತ್ರಿ @BSBommai
— CM of Karnataka (@CMofKarnataka) March 18, 2022
ನವೀನ್ ಮೃತದೇಹವನ್ನು ವೈದ್ಯಕೀಯ ವಿದ್ಯಾರ್ಥಿಗಳ ಉಪಯೋಗಕ್ಕಾಗಿ ದಾವಣಗೆರೆಯ ಎಸ್.ಎಸ್. ಮೆಡಿಕಲ್ ಕಾಲೇಜಿಗೆ ನೀಡಲು ಕುಟುಂಬದವರು ನಿರ್ಧರಿಸಿದ್ದಾರೆ. ಡಾಕ್ಟರ್ ಆಗಬೇಕೆಂಬ ಕನಸು ಕಂಡಿದ್ದ ನವೀನ್ ಆಸೆ ಈಡೇರಲಿಲ್ಲ. ಕೊನೇ ಪಕ್ಷ ಆತನ ದೇಹ ಮೆಡಿಕಲ್ ಓದುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ನವೀನ್ ತಂದೆ ಶೇಖರಪ್ಪ ಗ್ಯಾನಗೌಡರ ತಿಳಿಸಿದ್ಧಾರೆ



