ಬೆಂಗಳೂರು: ರೈತ ಸಂಘಟನೆಯ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಯುದ್ಧ್ವೀರ್ ಸಿಂಗ್ ಮುಖಕ್ಕೆ ಕಪ್ಪು ಮಸಿ ಬಳಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಗರದ ಗಾಂಧಿ ಭನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಯುದ್ಧ್ವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಲಾಗಿದೆ. ಕರ್ನಾಟಕದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಮಾಡಿರುವ ಆರೋಪದ ಬಗ್ಗೆ ಸ್ಪಷ್ಟನೆ ನೀಡುತ್ತಿರುವಾಗ ಟಿಕಾಯತ್ ಮತ್ತು ಸಿಂಗ್ ಮುಖಕ್ಕೆ ಮಸಿ ಬಳಿಯಲಾಗಿದೆ.
ಸುದ್ದಿಗೋಷ್ಠಿ ನಡೆಯುತ್ತಿದ್ದಂತೆ ಕೆಲವರು ವಾಗ್ವಾದಕ್ಕಿಳಿದು ಮಸಿ ಎರಚಿದ್ದಾರೆ. ನಂತರ ಅಲ್ಲಿದ್ದ ಕುರ್ಚಿಗಳನ್ನು ಎಳೆದು ಬಿಸಾಡಿದ್ದಾರೆ. ರೈತ ನಾಯಕ ಚಂದ್ರಶೇಖರ್ ಅವರ ಬೆಂಬಲಿಗರು ಈ ಕೃತ್ಯವೆಸಗಿದ್ದಾರೆ ಎಂದು ಟಿಕಾಯತ್ ಆರೋಪಿಸಿದ್ದಾರೆ.
ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರ ಮೇಲೆ ಕೇಳಿ ಬಂದಿರುವ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಚರ್ಚೆ ನಡೆಸಲು ನಗರದ ಗಾಂಧಿ ಭವನದಲ್ಲಿ ಕರೆದಿದ್ದ ಸಭೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ವ್ಯಕ್ತಿಯೊಬ್ಬ ರಾಕೇಶ್ ಟಿಕಾಯತ್ ಮೇಲೆ ಮೈಕ್ನಿಂದ ಹಲ್ಲೆ ನಡೆಸಿದ್ದು, ಮಸಿ ಬಳಿದಿದ್ದಾನೆ. ನಂತರ ಸಭೆಯಲ್ಲಿ ನೆರೆದಿದ್ದ ಇತರರು ಆತನನ್ನು ಹಿಡಿದು, ಕುರ್ಚಿಗಳಿಂದಲೇ ಥಳಿಸಿದರು. ಸಭೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆಗಳಲ್ಲಿ ರಾಕೇಶ್ ಟಿಕಾಯತ್ ಮುಂಚೂಣಿಯಲ್ಲಿದ್ದರು. ನಂತರ ಕೋಡಿಹಳ್ಳಿ ಚಂದ್ರಶೇಖರ್ ಮತ್ತು ರಾಕೇಶ್ ಟಿಕಾಯತ್ ಪರಸ್ಪರ ಭ್ರಷ್ಟಾಚಾರದ ಆರೋಪಗಳನ್ನು ಮಾಡಿಕೊಂಡಿದ್ದರು. ಪರಸ್ಪರ ಹೊಡೆದಾಟಕ್ಕೆ ಮುಂದಾದವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.



