ಚಿಕ್ಕಮಗಳೂರು: ವಿಧಾನ ಪರಿಷತ್ತಿನ ಉಪ ಸಭಾಪತಿ ಹಾಗೂ ಜೆಡಿಎಸ್ ನಾಯಕ ಎಸ್ ಎಲ್ ಧರ್ಮೇಗೌಡರ ಮೃತದೇಹ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದು, ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದೆ.
ಎಸ್ ಎಲ್ ಧರ್ಮೇಗೌಡ ಅವರ ಆತ್ಮಹತ್ಯೆ ಸುದ್ದಿ ಕೇಳಿದ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆಘಾತ ವ್ಯಕ್ತಪಡಿಸಿದ್ದಾರೆ. ಧರ್ಮೇಗೌಡರು ತಾಳ್ಮೆಯ ಸಭ್ಯ ವ್ಯಕ್ತಿಯಾಗಿದ್ದರು. ಅವರ ನಿಧನ ಪಕ್ಷಕ್ಕೆ ಮತ್ತು ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ನನ್ನ ಸಹೋದರರಂತಿದ್ದ ಎಸ್.ಎಲ್. ಧರ್ಮೇಗೌಡರ ಆತ್ಮಹತ್ಯೆ ಸುದ್ದಿ ತೀವ್ರ ಆಘಾತವನ್ನುಂಟುಮಾಡಿದೆ. ನಿಷ್ಕಲ್ಮಶ ವ್ಯಕ್ತಿತ್ವದ ಸಜ್ಜನ ರಾಜಕಾರಣಿಯೊಬ್ಬರನ್ನು ನಾವು ಕಳೆದುಕೊಂಡಿದ್ದೇವೆ. ಧರ್ಮೇಗೌಡರ ಕುಟುಂಬ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಟ್ವೀಟ್ ಮಾಡಿದ್ದಾರೆ.



