ಬೆಳಗಾವಿ: ಪಡಿತರದಲ್ಲಿ ಅಕ್ಕಿಯೊಂದಿಗೆ ರಾಗಿ ಮತ್ತು ಜೋಳ ವಿತರಣೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಉಮೇಶ ಕತ್ತಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಡಿತರದಲ್ಲಿ ಅಕ್ಕಿ ಮತ್ತು ಗೋಧಿ ವಿತರಣೆಯ ಪ್ರಮಾಣ ಕಡಿತಗೊಳಿಸಲಾಗುವುದು. ಅದೇ ಪ್ರಮಾಣದಲ್ಲಿ ರಾಗಿ, ಜೋಳ ವಿತರಲುಸಲು ಅವಕಾಶ ಕೊಡುವಂತೆ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ರಾಜ್ಯ ಸಚಿವ ರಾವ್ ಸಾಹೇಬ್ ದಾನ್ವೆ ಅವರನ್ನು ದೆಹಲಿಯಲ್ಲಿ ಈಚೆಗೆ ಭೇಟಿಯಾಗಿ ಮನವಿ ಸಲ್ಲಿಸಿದ್ದೆ. ಈಗ ರಾಗಿ, ಜೋಳ ವಿತರಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ 3 ಕೆ.ಜಿ. ಜೋಳ ಮತ್ತು 2 ಕೆ.ಜಿ. ಅಕ್ಕಿ ಹಾಗೂ ದಕ್ಷಿಣದ ಜಿಲ್ಲೆಗಳಲ್ಲಿ 3 ಕೆ.ಜಿ. ರಾಗಿ ಹಾಗೂ 2 ಕೆ.ಜಿ. ಅಕ್ಕಿ ಕೊಡಲಾಗುವುದು. ಭೌಗೋಳಿಕವಾಗಿ ಸ್ಥಳೀಯರ ಆಹಾರ ಪದ್ಧತಿಗೆ ಅನುಗುಣವಾಗಿ ಪಡಿತರ ವಿತರಿಸಬೇಕಾಗುತ್ತದೆ ಎಂದರು. ರಾಜ್ಯದಲ್ಲಿ ಬೆಳೆಯುವ ಜೋಳ, ಭತ್ತ ಹಾಗೂ ರಾಗಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಿ ಏ.1ರಿಂದ ಪಡಿತರ ವ್ಯವಸ್ಥೆಯಲ್ಲಿ ನೀಡಲಾಗುವುದು ಎಂದು ಪ್ರತಿಕ್ರಿಯಿಸಿದರು.



