ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ನಾಳೆ (05) ಕರ್ನಾಟಕ ಬಂದ್ಗೆ ಕರೆ ನೀಡಿವೆ. ಈ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕರೆ ನೀಡಲಾಗಿದೆ. ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ , ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳು ಬಂದ್ ನಲ್ಲಿ ಭಾಗಿಯಾಗಲಿವೆ.
ಬಸವ ಕಲ್ಯಾಣ ಉಪಚುನಾವಣೆಗಾಗಿ ರಾಜ್ಯಸರ್ಕಾರ ಮರಾಠ ನಿಗಮ ರಚನೆಗೆ ಮುಂದಾಗಿದ್ದು, ಕನ್ನಡ ವಿರೋಧಿ ಧೋರಣೆ ಅನುಸರಿಸುತ್ತಿದೆ. ಕೋವಿಡ್ ಬಿಕ್ಕಟ್ಟಿನ ಈ ಸಂದರ್ಭದಲ್ಲಿ ಪದೇ ಪದೇ ಬಂದ್ ನಡೆಸುವುದು ಎಷ್ಟು ಸರಿ ಎಂದು ಕೆಲವರು ಪ್ರಶ್ನಿಸುತ್ತಿದ್ದಾರೆ. ಸರ್ಕಾರ ಕೂಡ ಬಂದ್ ಬೆಂಬಲಸದಂತೆ ಸಾರ್ವಜನಿಕರಿಗೆ ಕರೆ ನೀಡಿದೆ. ಇನ್ನೊಂದೆಡೆ ಜೆಡಿಎಸ್, ಕಾಂಗ್ರೆಸ್ ಬಂದ್ಗೆ ಪರೋಕ್ಷ ಬೆಂಬಲ ನೀಡಿವೆ. ನಾಳೆಯ ಬಂದ್ ನಿಂದ ಸಾರ್ವಜನಿಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ.
ನಾಳೆಯ ಬಂದ್ ಗೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ನಿಲ್ದಾಣ, ಮೆಟ್ರೊ ರೈಲು ನಿಲ್ದಾಣಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗುತ್ತಿದೆ.
ಏನು ಇರುತ್ತೆ..?
ಬಿಎಂಟಿಸಿ, ಮೆಟ್ರೊ ರೈಲು ಸಂಚಾರ ಎಂದಿನಂತಿರುತ್ತದೆ. ಪರಿಸ್ಥಿತಿ ನೋಡಿಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಸಾರಿಗೆ ಸಂಸ್ಥೆಗಳ ಅಧಿಕಾರಿಗಳು ಹೇಳಿದ್ದಾರೆ. ಸರ್ಕಾರಿ ಸಂಸ್ಥೆಗಳೂ ಎಂದಿನಂತೆ ಕಾರ್ಯನಿರ್ವಹಿಸಲಿವೆ. ಹೋಟೆಲ್ ಮಾಲೀಕ ಸಂಘ ನೈತಿಕ ಬೆಂಬಲ ವ್ಯಕ್ತಪಡಿಸಿವೆ. ಆರೋಗ್ಯ ಸೇವೆ, ಔಷಧ ಅಂಗಡಿ, ಹಾಲು, ಪತ್ರಿಕೆಗಳು ಲಭ್ಯ ಇರಲಿವೆ.
ಏನು ಇರಲ್ಲ..?
ಆಟೊ ಚಾಲಕರು–ಮಾಲೀಕರ ಸಂಘ, ಓಲಾ–ಉಬರ್ ಚಾಲಕರ ಸಂಘ ಬಂದ್ಗೆ ಬೆಂಬಲ ನೀಡುವೆ. ಬೀದಿ–ಬದಿ ವ್ಯಾಪಾರಸ್ಥರ ಸಂಘವೂ ಬಂದ್ಗೆ ಬೆಂಬಲ ನೀಡಿರುವುದರಿಂದ ತರಕಾರಿ ಮತ್ತಿತರ ಅಗತ್ಯ ವಸ್ತುಗಳು ಸೇವೆ ಸಿಗುವ ಸಾಧ್ಯತೆ ಇಲ್ಲ .



