ಬೆಂಗಳೂರು: ರೈತರ ಟ್ರ್ಯಾಕ್ಟರ್ ಗಳಿಗೆ ಡೀಸೆಲ್ ಸಹಾಯಧನ ನೀಡುವ ‘ರೈತ ಶಕ್ತಿ’ ಯೋಜನೆಗೆ ಈ ತಿಂಗಳ ಅಂತ್ಯದಲ್ಲಿ ಚಾಲನೆ ಸಿಗಲಿದ್ದು, ನೇರ ನಗದು ವರ್ಗಾವಣೆ ಮೂಲಕ ಡೀಸೆಲ್ ಖರೀದಿಗೆ ಸಹಾಯಧನ ನೀಡಲಾಗುತ್ತದೆ. ಪ್ರತಿ ಎಕರೆಗೆ ರೂ.250 ಗಳಂತೆ ಗರಿಷ್ಠ 5 ಎಕರೆಗೆ ರೂ.1250 ಗಳನ್ನು ರೈತರ ಖಾತೆಗೆ ಡಿ ಬಿ ಟಿ ಮೂಲಕ ವರ್ಗಾವಣೆ ಮಾಡಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನವರಿ ಅಂತ್ಯದಲ್ಲಿ ಚಾಲನೆ ನೀಡಲಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಮಾಹಿತಿ ನೀಡಿದ್ದಾರೆ.
ಈಗಾಗಲೇ ಕಿಸಾನ್ ಸಮ್ಮಾನ್ ಯೋಜನೆಗೆ ಫ್ರುಟ್ಸ್ ವೆಬ್ ಸೈಟ್ ಮೂಲಕ ರೈತರ ನೋಂದಣಿ ಗುರುತಿನ ಸಂಖ್ಯೆ ಬಳಸಿ ಕ ತಂತ್ರಾಂಶದ ಮೂಲಕ ಇದನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ರೈತರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ. ಕೃಷಿ ಭೂಮಿಯ ವಿಸ್ತೀರ್ಣದ ಆಧಾರದಲ್ಲಿ ರೈತರ ಖಾತೆಗೆ ಸಹಾಯಧನ ವರ್ಗಾವಣೆಯಾಗಲಿದೆ.



