ಹಾಸನ : ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್ ಕಡ್ಡಿ ಸ್ಫೋಟ ಸಂಭವಿಸಿದೆ. ಸ್ಪೋಟಕ್ಕೆ ಒಬ್ಬ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಶಿವಮೊಗ್ಗ ಹಾಗೂ ಚಿಕ್ಕಬಳ್ಳಾಪುರ ಘಟನೆ ಬಳಿಕ ರಾಜ್ಯದಲ್ಲಿ ಮತ್ತೊಂದು ಸ್ಪೋಟ ನಡೆದಿದೆ. ಹಾಸನ ಜಿಲ್ಲೆಯ ಚಾಕೇನಹಳ್ಳಿಯಲ್ಲಿ ಜಿಲೆಟಿನ್ ಸ್ಪೋಟಗೊಂಡಿದೆ. ಈ. ಸ್ಫೋಟಕ್ಕೆ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಂಪತ್ (27) ಮೃತಪಟ್ಟ ಯುವಕನಾಗಿದ್ದು, ಗಾಯಾಳುಗಳಿಗೆ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಲ್ಲು ಗಣಿಗಾರಿಕೆಗಾಗಿ ಸ್ಪೋಟಕ ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಸ್ಪೋಟ ಸಂಭವಿಸಿದೆ. ಸ್ಪೋಟಕ ವಿತರಣೆ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಶಾಂತಿ ಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.



