ಬೆಂಗಳೂರು: ಶುಭ ಮುಹೂರ್ತದಲ್ಲಿ ಇಂದು ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಯಡಿಯೂರಪ್ಪ ಮಠ, ಮಂದಿರಗಳಿಗೆ ಭರಪೂರ ಕೊಡುಗೆ ನೀಡಿದ್ದಾರೆ
ಬಜೆಟ್ ಮಂಡನೆಗೂ ಮೊದಲು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿಯೇ ವಿಧಾನಸೌಧಕ್ಕೆ ಬಂದ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ವರ್ಷವೂ ಮಠಗಳು, ಧಾರ್ಮಿಕ ಸಂಸ್ಥೆಗಳು ಮತ್ತು ಸಾಂಸ್ಕೃತಿಕ ಸಂಸ್ಥೆಗಳಿಗೆ ಅನುದಾನ ಘೋಷಿಸಿದ್ದಾರೆ.
ಬಜೆಟ್ ಆರಂಭವಾಗುತ್ತಿದ್ದಂತೆ ವಿಪಕ್ಷ ಕಾಂಗ್ರೆಸ್, ಅನೈತಿಕ ಸರ್ಕಾರದ ಬಜೆಟ್ ಮಂಡನೆಗೆ ಸಹಕಾರ ನೀಡಲ್ಲ ಎಂದು ಘೋಷಣೆ ಕೂಗಿ ಸಭಾ ತ್ಯಾಗ ಮಾಡಿತು.
ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ₹ 50 ಕೋಟಿ, ವಿಜಯಪುರ ಜಿಲ್ಲೆ ಬಸನವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿರುವ ಜಗಜ್ಯೋತಿ ಬಸವಣ್ಣ ಜನ್ಮಸ್ಥಳ ಅಭಿವೃದ್ಧಿಗೆ ₹ 5 ಕೋಟಿ, ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರಕ್ಕೆ ₹ 10 ಕೋಟಿ ಅನುದಾನ ಘೋಷಿಸಲಾಗಿದೆ. ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರ್ನಾಟಕದ ಯಾತ್ರಿ ನಿವಾಸ ನಿರ್ಮಾಣ ಕಾಮಗಾರಿಗೂ ಕರ್ನಾಟಕ ಸರ್ಕಾರ ₹ 10 ಕೋಟಿ ಅನುದಾನ ಘೋಷಿಸಿದ್ದಾರೆ.
ಸರಸ್ವತಿ ಸಮ್ಮಾನ್ ಪುರಸ್ಕೃತ ಎಸ್.ಎಲ್.ಬೈರಪ್ಪ ಅವರ ಪರ್ವ ನಾಟಕ ಪ್ರದರ್ಶನಕ್ಕೆ ₹ 1 ಕೋಟಿ ಅನುದಾನ ಘೋಷಿಸಲಾಗಿದೆ. ರಾಜ್ಯಾದ್ಯಂತ ರಂಗಾಯಣಗಳ ಮೂಲಕ ಪರ್ವ ನಾಟಕವನ್ನು ಪ್ರದರ್ಶಿಸಲಾಗುವುದು.
ಅಲ್ಪಸಂಖ್ಯಾತರಿಗೆ ಅನುದಾನ
ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೂ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನುದಾನ ಘೋಷಿಸಿದ್ದಾರೆ. ಕ್ರಿಶ್ಚಿಯನ್ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ₹200 ಕೋಟಿ, ಅಲ್ಪಸಂಖ್ಯಾತ ಸಮುದಾಯಗಳಿಗಾಗಿ ವಿವಿಧ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲು ₹ 1,500 ಕೋಟಿ ಮೊತ್ತವನ್ನು ಈ ಬಾರಿಯ ಬಜೆಟ್ನಲ್ಲಿ ಮೀಸಲಿಡಲಾಗಿದೆ.



