ದಾವಣಗೆರೆ: ಈ ಬಾರಿಯ ಬಜೆಟ್ ನಲ್ಲಿಯೂ ದಾವಣಗೆರೆ ಜಿಲ್ಲೆಗೆ ಅನ್ಯಾಯವಾಗಿದೆ. ಪ್ರತಿ ಸಲದಂತೆ ಈ ಬಾರಿಯೂ ಜಿಲ್ಲೆಗೆ ಯಾವುದೇ ಮಹತ್ವದ ಯೋಜನೆ ಘೋಷಣೆಯಾಗಿಲ್ಲ. ಅಭಿವೃದ್ಧಿಗೆ ಯಾವುದೇ ವಿಶೇಷ ಅನುದಾನ ಮೀಸಲಿಟ್ಟಿಲ್ಲ. ಬೆಣ್ಣೆ ನಗರಿ ಖ್ಯಾತಿಯ ದಾವಣಗೆರೆ ಕೇವಲ ರಾಜಕೀಯ ಸಮಾವೇಶ ಮೂಲಕ ಜನರಿಗೆ ‘ಬೆಣ್ಣೆ’ ಹಚ್ಚುವುದಕ್ಕೆ ಮಾತ್ರ ಸೀಮಿತನಾ…? ಎನ್ನುವ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದೆ.
ರಾಜಕೀಯ ಪಕ್ಷಗಳಿಗೆ ಚುನಾವಣಾ ಸಮಾವೇಶಕ್ಕೆ ದಾವಣಗೆರೆ ಅದೃಷ್ಟದ ನಗರ. ಆದರೆ, ಗೆದ್ದ ನಂತರ ಜಿಲ್ಲೆಗೆ ಯಾವುದೇ ಮಹತ್ವದ ಅನುದಾನ ಘೋಷಣೆ ಮಾಡಿಲ್ಲ. ಇದು ಕೇವಲ ಈ ವರ್ಷದ ಸಮಸ್ಯೆಯಲ್ಲ, ಪ್ರತಿ ಬಾರಿಯ ಬಜೆಟ್ ಮಂಡನೆಯಲ್ಲಿಯೂ ದಾವಣಗೆರೆ ಜಿಲ್ಲೆಗೆ ಅನ್ಯಾಯವಾಗುತ್ತಿದೆ. ಈ ಬಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭರ್ಜರಿ ಬಹುಮತ ನೀಡಿದ್ದು, 7 ವಿಧಾನಸಭಾ ಕ್ಷೇತ್ರಗಳಲ್ಲಿ 6 ಕ್ಷೇತ್ರ ಗೆಲ್ಲಿಸಿದ್ದಾರೆ. ಸ್ವತಃ ಜಿಲ್ಲೆಯವರೇ ಆದ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್. ಮಲ್ಲಿಕಾರ್ಜುನ್ ಅವರು ಇದ್ದರೂ, ಜಿಲ್ಲೆಗೆ ಈ ಬಾರಿಯ ಬಜೆಟ್ ನಲ್ಲಿ ಅನ್ಯಾಯವಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ನಲ್ಲಿ ದಾವಣಗೆರೆ ಜಿಲ್ಲೆಗೆ ಸಾಕಷ್ಟು ನಿರೀಕ್ಷೆಗಳಿದ್ದರೂ, ನಿರೀಕ್ಷೆ ತಲುಪಲು ಸಾಧ್ಯವಾಗಿಲ್ಲ. ವಿಮಾನ ನಿಲ್ದಾಣ ಸ್ಥಾಪನೆ, ಕೈಗಾರಿಕೆ ಸ್ಥಾಪನೆ, ಉದ್ಯೋಗ ಸೃಷ್ಠಿ, ಹೆದ್ದಾರಿ ಅಭಿವೃದ್ಧಿ, ನೀರಾವರಿಗೆ ಸೇರಿ ವಿವಿಧ ಯೋಜನೆಯ ನಿರೀಕ್ಷೆ ಹುಸಿಯಾಗಿದೆ. ನೆರೆಯ ಜಿಲ್ಲೆಗಳಾದ ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗೆ ಭರಪೂರ ಕೊಡುಗೆ ನೀಡಿದ್ದರೂ, ದಾವಣಗೆರೆ ಜಿಲ್ಲೆಗೆ ಹೆಚ್ಚಿನ ಅನುದಾನ ತರುವಲ್ಲಿ ಜಿಲ್ಲಾ ಜನಪ್ರತಿನಿಧಿಗಳು ವಿಫಲವಾಗಿರುವುದು ಸ್ಪಷ್ಟ.
ಜಿಲ್ಲೆಗೆ ಸಿಕ್ಕಿದ್ದೇನು…?; ರಾಜ್ಯದಲ್ಲಿ ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಪ್ರಾಣ ಉಳಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್ಗಳನ್ನುಸ್ಥಾಪಿಸಲಾಗುವುದು. ಈಗಾಗಲೇ 15 ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಉಡುಪಿ, ದಾವಣಗೆರೆ, ವಿಜಯಪುರ, ಮೈಸೂರು, ಮಂಡ್ಯ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 187 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು.
ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ 2.0 ಅಡಿ ರಾಜ್ಯದ 10 ಮಹಾನಗರ ಪಾಲಿಕೆಗಳಲ್ಲಿ (ದಾವಣಗೆರೆ ಮಹಾನಗರ ಪಾಲಿಕೆ ಸೇರಿ) ಮೂಲಭೂತ ಸೌಕರ್ಯಗಳಅಭಿವೃದ್ಧಿಗಾಗಿ 2,000 ಕೋಟಿ ರೂ. ಒದಗಿಸಲಾಗಿದೆ.



