ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಗುಡ್ ನ್ಯೂಸ್ ನೀಡಿದ್ದು ಮಣ್ಣು, ಕೀಟ ರೋಗ, ನೀರು ಪರೀಕ್ಷೆ ಸೇರಿದಂತೆ ಇನ್ನಿತರ ತಾಂತ್ರಿಕ ನೆರವನ್ನು ಮನೆ ಬಾಗಿಲಿಗೇ ತಲುಪಿಸುವ ಕೃಷಿ ಸಂಜೀವಿನಿ ಸಂಚಾರಿ ಕೃಷಿ ವಾಹನಗಳಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದ್ದಾರೆ.
ವಿಧಾನಸೌಧದ ಮುಂಭಾಗದಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಾಹನಗಳಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಅಧಿಕೃತವಾಗಿ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಈ ವಾಹನ ರೈತರ ಹೊಲಗಳಿಗೆ ಹೋಗಿ ಮಣ್ಣು, ನೀರು, ರೋಗ ಪರೀಕ್ಷೆ ಮಾಡಲಿದೆ. ಸದ್ಯಕ್ಕೆ 40 ವಾಹನಗಳಿಗೆ ಚಾಲನೆ ನೀಡಲಾಗಿದೆ. ಈ ವಾಹನಗಳು ಯಾವ ರೀತಿಯಲ್ಲಿ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ನೋಡಿಕೊಂಡು ವಾಹನಗಳ ಸಂಖ್ಯೆ ಹೆಚ್ಚಿಸಲಾಗುವುದು ಎಂದು ಮಾಹಿತಿ ನೀಡಿದರು.



