ಬೆಂಗಳೂರು: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಮತ್ತೆ ಲಾಕ್ ಡೌನ್ ಜಾರಿಗೊಳಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನಿರ್ದೇಶನಕ್ಕೆ ಕಾಯುತ್ತಿದ್ದೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ ಜನತಾ ಕರ್ಫ್ಯೂ ಜಾರಿಯಲ್ಲಿದೆ. ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿ ಕುರಿತು ಪ್ರಧಾನಿ ಮೋದಿ ಏನು ಸೂಚನೆ ನೀಡುತ್ತಾರೆ ಅದರಂತೆ ಪಾಲಿಸುವುದು ನಮ್ಮ ಜವಾಬ್ದಾರಿ. ಲಾಕ್ ಡೌನ್ ಕುರಿತು ಸುಪ್ರೀಂ ಕೋರ್ಟ್ ಸಲಹೆ ಬಗ್ಗೆ ಸಂಜೆ ನಡೆಯುವ ಸಂಪುಟ ಸಭೆಯಲ್ಲಿ ಪ್ರಧಾನಿ ಅವರು ಸೂಕ್ರ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಪ್ರಧಾನಿ ನಿರ್ದೇಶನಕ್ಕೆ ನಾವೆಲ್ಲರೂ ಕಾಯುತ್ತಿದ್ದೇವೆ. ಒಂದು ವೇಳೆ ಪ್ರಧಾನಿ ಮೋದಿ ಲಾಕ್ ಡೌನ್ ಜಾರಿ ಮಾಡುವಂತೆ ಸಲಹೆ ನೀಡಿದರೆ ರಾಜ್ಯದಲ್ಲಿಯೂ ಮತ್ತೆ ಲಾಕ್ ಡೌನ್ ಜಾರಿಗೆ ಬರಲಿದೆ. ಈಗಾಗಲೇ ಆಯಾ ಜಿಲ್ಲಾ ಉಸ್ತುವಾರಿ ಸಚಿವರುಗಳು ತಮ್ಮ ತಮ್ಮ ಜಿಲ್ಲೆಗಳಿಗೆ ತೆರಳಿ ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.



