ಬೆಂಗಳೂರು: ಮಿಚಾಂಗ್ ಚಂಡಮಾರುತದ ಪರಿಣಾಮ ಆಂಧ್ರಪ್ರದೇಶ, ತಮಿಳುನಾಡು ಭಾರೀ ಮಳೆಗೆ ತತ್ತರಿಸಿ ಹೋಗಿವೆ. ರಾಜ್ಯದಲ್ಲೂ ಚಂಡಮಾರುತ ಪರಿಣಾಮ ಬೀರಿದ್ದು, ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೋಡ ಕವಿದು ವಾತಾವರಣ ನಿರ್ಮಾಣವಾಗಿ ಚಳಿ ಗಾಲಿ ಬೀಸುತ್ತಿದೆ. ಎರಡ್ಮೂರು ದಿನ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ. ಒಮ್ಮೆ ಮೋಡಕವಿದ ವಾತಾವರಣ, ಇನ್ನೊಮ್ಮೆ ಬಿಸಿಲು ಇರಲಿದೆ. ಉತ್ತರ ಕರ್ನಾಟಕ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.
ಇಂದು (ಡಿ.04) ಬೆಳಗ್ಗೆಯಿಂದಲೇ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇದ್ದು, ತಾಪಮಾನ ಕಡಿಮೆಯಾಗಿ ತಂಪಾಗಿದೆ. ಕೊಡಗು, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ಉತ್ತಮ ಮಳೆಯಾಗಲಿದ್ದು, ಉಡುಪಿ, ಕುಮಟಾ, ಹೊನ್ನಾವರ, ಕಾರವಾರ, ಬೈಂದೂರು, ಮಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಹಾವೇರಿ, ಬೆಳಗಾವಿ, ಬಳ್ಳಾರಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಇರಲಿದೆ.
ಮಿಚಾಂಗ್ ಚಂಡಮಾರುತದ ಪರಿಣಾಮ ಇನ್ನೂ ಎರಡು ದಿನ ದಕ್ಷಿಣ ಒಳನಾಡು ಕರ್ನಾಟಕದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಚೆನ್ನೈನಲ್ಲಿ ಭಾರಿ ಮಳೆಯಾಗುತ್ತಿದ್ದು ಅದರ ಪರಿಣಾಮ ಬೆಂಗಳೂರಿನಲ್ಲಿ ಕೂಡ ಕಾಣಿಸುತ್ತಿದೆ. ಮೋಡ ಕವಿದ ವಾತಾವರಣ ಜೊತೆ ಚಳಿ ಹೆಚ್ಚಾಗಿದೆ. ಇನ್ನೂ ಎರಡು ದಿನ ನಗರದಲ್ಲಿ ಇದೇ ಪರಿಸ್ಥಿತಿ ಇರಲಿದೆ.



