ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಪರಿಷ್ಕರಿಸಲು ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಯೋಜಿಸಿದ್ದ ಸರ್ಕಾರಿ ನೌಕರರ ದಿನಾಚರಣೆಯ ಸುಸಂದರ್ಭದಲ್ಲಿ ಆರೋಗ್ಯ ಸಂಜೀವಿನಿ ನಗದು ರಹಿತ ವೈದ್ಯಕೀಯ ಸೇವಾ ಯೋಜನೆಗೆ ಚಾಲನೆ ನೀಡಿ, 30 ನೌಕರರಿಗೆ ತಲಾ ಐವತ್ತು ಸಾವಿರ ರೂಪಾಯಿ ನಗದು ಒಳಗೊಂಡ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡುತ್ತಿದ್ದರು.
ಸರ್ಕಾರಿ ನೌಕರರು, ವಿಶೇಷವಾಗಿ ಪತ್ರಾಂಕಿತ ಎ ಮತ್ತು ಬಿ ಗುಂಪಿನ ನೌಕರರು, ಪುಣ್ಯ ಕೋಟಿ ಯೋಜನೆಯಡಿ 11,000 ರೂಪಾಯಿ ನೀಡಿ, ಗೋವುಗಳನ್ನು ದತ್ತು ಪಡೆದು, ಗೋ ಸಂರಕ್ಷಣೆ ಮಾಡುವಂತೆ ಮನವಿ ಮಾಡಿದರು. ಸರ್ಕಾರದ ಪ್ರಮುಖವಾದ ಒಂದು ಭಾಗ ಮತ್ತು ಅಂಗ. ಬೆಳಗ್ಗೆಯಿಂದ ಸಂಜೆಯವರೆಗೆ ಮಾಡುವ ಕೆಲಸ ಕರ್ತವ್ಯ ಎನಿಸುತ್ತದೆ. ಬದುಕಿನಲ್ಲಿ ಸೇವೆ ಮಾಡಿ ಸಂತೃಪ್ತಿ ಪಡೆಯುವುದು ಕಾಯಕ. ಸರ್ಕಾರಕ್ಕೆ ತೆರಿಗೆ ಪಾವತಿಸುವ ಪ್ರಜೆಗಳೇ ನಮ್ಮ ಮಾಲೀಕರು. ಆದಕಾರಣ, ಕಾಲಕ್ಕೆ ತಕ್ಕಂತೆ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಪ್ರಜೆಗಳ ನೋವು ನಲಿವುಗಳಿಗೆ ಸ್ಪಂದಿಸಿ ಎಂದರು.
ಇದೇ ಸಂದರ್ಭದಲ್ಲಿ ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ಮಾತನಾಡಿ, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ರಾಜ್ಯ ಸರ್ಕಾರಿ ನೌಕರರಿಗೆ ಅನುಕೂಲವಾಗುವ 19 ಆದೇಶಗಳನ್ನು ಹೊರಡಿಸಿದ್ದಾರೆ. ಕೇಂದ್ರ ಸರ್ಕಾರದ ನಾಗರೀಕ ಸೇವಾ ದಿನಾಚರಣೆ ಹೊರತುಪಡಿಸಿದರೆ ಬೇರಾವುದೇ ರಾಜ್ಯ ಸರ್ಕಾರ ತನ್ನ ನೌಕರರ ದಿನಾಚರಣೆ ಆಚರಿಸುತ್ತಿರುವುದು ನಮ್ಮ ಕರ್ನಾಟಕದಲ್ಲಿ ಮಾತ್ರ ಎಂಬ ಅಂಶವನ್ನು ಸಭೆಯ ಗಮನಕ್ಕೆ ತಂದರು.
ಅಲ್ಲದೆ, ಕೂಡಲೇ ಏಳನೇ ವೇತನ ಆಯೋಗವನ್ನು ಘೋಷಿಸಿ ರಾಜ್ಯ ಸರ್ಕಾರಿ ನೌಕರರಿಗೆ ಮತ್ತು ಅವರ ಕುಟುಂಬದ ಎಲ್ಲಾ ಸದಸ್ಯರಿಗೆ ನೆರವಾಗುವಂತೆ ಹಾಗೂ ಕೊಡುಗೆ ಆಧಾರಿತ ನೂತನ ಪಿಂಚಣಿ ಯೋಜನೆ ರದ್ದು ಪಡಿಸಿ ಹಳೆಯ ಪಿಂಚಣಿ ಯೋಜನೆಯನ್ನು ಅನುಷ್ಠಾನಗೊಳಿಸಿ ಹೊಸ ಪೀಳಿಗೆಯ ಎರಡೂವರೆ ಲಕ್ಷ ನೌಕರರ ಬಾಳಲ್ಲಿ ಬೆಳಕು ಮೂಡಿಸುವಂತೆ ಸಿ ಎಸ್ ಷಡಾಕ್ಷರಿ ಅವರು ಮುಖ್ಯಮಂತ್ರಿಯವರಲ್ಲಿ ಬೇಡಿಕೆ ಇಟ್ಟರು.
ಕಂದಾಯ ಸಚಿವ ಆರ್ ಅಶೋಕ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಅವರೂ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.



