ಭಾಲ್ಕಿ: ಮಧ್ಯಾಹ್ನದ ಬಿಸಿಯೂಟದ ಜತೆ ಮಕ್ಕಳಿಗೆ ಮೊಟ್ಟೆ ಕೊಡುತ್ತಿರುವ ಕ್ರಮ ಸರಿಯಲ್ಲ. ಕೂಡಲೇ ಇದನ್ನು ನಿಲ್ಲಿಸುವಂತೆ ಹಿರೇಮಠ ಸಂಸ್ಥಾನದ ಡಾ| ಬಸವಲಿಂಗ ಪಟ್ಟದೇವರು ಸ್ವಾಮೀಜಿ ಸಿಎಂ ಗೆ ಮನವಿ ಸಲ್ಲಿಸಿದ್ದಾರೆ.
ಪಟ್ಟಣದ ಚನ್ನಬಸವಾಶ್ರಮದಲ್ಲಿ ಸೋಮವಾರ ನಡೆದ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಪ್ರವಚನ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸನ್ಮಾನಿಸಿ, ಕಲ್ಯಾಣ ಕರ್ನಾಟಕದ ಭಾಗದ ಮಕ್ಕಳಿಗೆ ಮೊಟ್ಟೆ ಕೊಡುವ ಯೋಜನೆ ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಚಿಕ್ಕಮಕ್ಕಳಿಗೆ ಜ್ಞಾನ ಇರುವುದಿಲ್ಲ. ಕೆಲ ಮಕ್ಕಳು ಮೊಟ್ಟೆ ಕೊಡುವುದರಿಂದ ತಾರತಮ್ಯ ಮಾಡಿದಂತಾಗುತ್ತಿದೆ. ಮಕ್ಕಳಿಗೆ ಇಂತಹ ಭೇದಭಾವ ಮಾಡದೇ ಎಲ್ಲರಿಗು ಇಷ್ಟವಾಗುವ, ಕಾಳು, ಬಾಳೆಹಣ್ಣುಗಳನ್ನು ಕೊಡುವ ಕಾರ್ಯವಾಗಬೇಕು ಎಂದು ಹೇಳಿದರು. ಸಭೆ ನಂತರ ಮೊಟ್ಟೆ ನಿಲ್ಲಿಸುವ ಬೇಡಿಕೆಯ ಮನವಿ ಪತ್ರವನ್ನು ಮುಖ್ಯ ಮಂತ್ರಿಗಳಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ, ಕೇಂದ್ರ ಮಂತ್ರಿ ಭಗವಂತ ಖೂಬಾ, ಪುರಸಭೆ ಅಧ್ಯಕ್ಷ ಬಸವರಾಜ ವಂಕೆ ಭಾಗಿಯಾಗಿದ್ದರು.



