ಬೆಳಗಾವಿ: ತೀವ್ರ ಬರಗಾಲದಿಂದ ತತ್ತರಿಸಿದ ಪ್ರತಿ ರೈತರಿಗೆ ಈ ವಾರದ ಅಂತ್ಯದಲ್ಲಿ ಸರ್ಕಾರ ಡಿಬಿಟಿ ಮೂಲಕ ನೇರವಾಗಿ ರೈತರ ಖಾತೆಗೆ 2,000 ರೂ. ಬರ ಪರಿಹಾರವನ್ನು ನೀಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಗೆ ತಿಳಿಸಿದರು.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಯೋಜನೆಗೆ ಚಾಲನೆ ದೊರೆಯಲಿದೆ. ಬೆಳೆ ಪರಿಹಾರ ಹಣವನ್ನು ಡಿಬಿಟಿ ಮೂಲಕ ನೇರವಾಗಿ ಜಮೆ ಮಾಡಲಾಗುವುದು. ರೈತ ನೋಂದಣಿ ಮತ್ತು ಫಲಾನುಭವಿ ಮಾಹಿತಿ ವ್ಯವಸ್ಥೆಯಲ್ಲಿ (FRUITS) ನೋಂದಾಯಿಸಿಕೊಳ್ಳಬೇಕು. ಇದು ಮೊದಲ ಬಾರಿಗೆ ಅಪ್ಲಿಕೇಶನ್ ಆಧಾರಿತ ವ್ಯವಸ್ಥೆಯನ್ನು ಪರಿಚಯಿಸಲಾಗಿರುವುದರಿಂದ ಪರಿಹಾರ ನೀಡುವುದು ಸ್ವಲ್ಪ ವಿಳಂಬವಾಗಿದೆ ಎಂದರು.
ಇನ್ನೂ ಕುಡಿಯುವ ನೀರು, ಮೇವು ಪೂರೈಕೆ ಸೇರಿದಂತೆ ಬರಗಾಲದ ಸಮಸ್ಯೆಗಳ ನಿವಾರಣೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಪಡೆಗಳನ್ನು ಸರ್ಕಾರ ರಚಿಸಿದ್ದು, ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್ಗಳ ಪಿಡಿ ಖಾತೆಗಳಲ್ಲಿ 850 ಕೋಟಿ ರೂ.ಗಳು ಲಭ್ಯವಿದೆ. ಕೇಂದ್ರದ ಬರ ಅಧ್ಯಯನ ತಂಡವು ಅಕ್ಟೋಬರ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಬರ ಅಧ್ಯಯನ ನಡೆಸಿದೆ. ಅಕ್ಟೋಬರ್ 13 ರಂದು ತನ್ನ ವರದಿಯನ್ನು ಸಲ್ಲಿಸಿದೆ, ಆದರೆ ಇನ್ನೂ ಯಾವುದೇ ಹಣವನ್ನು ಬಿಡುಗಡೆ ಮಾಡಿಲ್ಲ ಎಂದರು.



