ಬೆಂಗಳೂರು: ಸರ್ಕಾರಿ ಕಾಲೇಜುಗಳಲ್ಲಿ ಓದುವ ಬಡ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ನೂತನ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ. ಅಜಿಂ ಪ್ರೇಮ್ ಜಿ ಫೌಂಡೇಶನ್ (azim premji foundation) ಸಹಯೋಗದೊಂದಿಗೆ ಈ ಯೋಜನೆ ಮೂಲಕ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ 30 ಸಾವಿರ ವೇತನ ಸಿಗಲಿದೆ.
ದೀಪಿಕಾ ವಿದ್ಯಾರ್ಥಿ ವೇತನಕ್ಕೆ ಚಾಲನೆ
ಉನ್ನತ ಶಿಕ್ಷಣ ಇಲಾಖೆ ಮತ್ತು ಅಜಿಂ ಪ್ರೇಮ್ ಜಿ ಫೌಂಡೇಶನ್ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯದ ವಿದ್ಯಾರ್ಥಿನಿಯರಿಗಾಗಿ (ದೀಪಿಕಾ) ಉನ್ನತ ಶಿಕ್ಷಣ ವಿದ್ಯಾರ್ಥಿ ವೇತನಕ್ಕೆ ಸಿಎಂ ಚಾಲನೆ ನೀಡಿದರು. ದೀಪಿಕಾ ವಿದ್ಯಾರ್ಥಿ ವೇತನ ಮೂಲಕ ವಿದ್ಯಾರ್ಥಿನಿಯರಿಗೆ ವಾರ್ಷಿಕ 30,000 ರೂ.ಗಳಂತೆ ಒಟ್ಟು 37,000 ವಿದ್ಯಾರ್ಥಿನಿಯರಿಗೆ ಲಾಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟನೆ ನಂತರ ತಿಳಿಸಿದರು.
ಬಡ ವಿದ್ಯಾರ್ಥಿನಿಯರಿಗೆ ಅನುಕೂಲ
ರಾಜ್ಯದ ಪ್ರತಿಷ್ಠಿತ ಉದ್ಯಮಿ ಅಜೀಂ ಪ್ರೇಂಜಿ ಅವರು, ತಮ್ಮ ಅಜೀಂ ಪ್ರೇಂಜಿ ಫೌಂಡೇಶನ್ ನ ಮೂಲಕ ಜನಪರ ಕಾರ್ಯಗಳನ್ನು ಕೈಗೊಂಡಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ ಪೂರೈಸುತ್ತಿದ್ದಾರೆ. ಅಲ್ಲದೇ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಉನ್ನತಶಿಕ್ಷಣದಲ್ಲಿ ತೊಡಗುವಂತಾಗುವ ದೃಷ್ಠಿಯಿಂದ ದೀಪಿಕಾ ವಿದ್ಯಾರ್ಥಿ ವೇತನ ಬಡ ವಿದ್ಯಾರ್ಥಿಗಳಿಗೆ ಇನ್ನಷ್ಟು ಅನುಕೂಲವಾಗಲಿದೆ.
ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲೇ ಓದಿರಬೇಕು
ಈ ಯೋಜನೆಯಡಿ ಪದವಿ ಕೋರ್ಸ್ ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿನಿಯರಿಗೆ ಪ್ರತಿವರ್ಷ ರೂ.30,000/- ಗಳನ್ನು ವಿದ್ಯಾರ್ಥಿ ವೇತನವಾಗಿ ನೀಡಲಾಗುತ್ತದೆ. ಈ ವರ್ಷ ಅಜೀಂ ಪ್ರೇಂಜಿ ಫೌಂಡೇಶನ್ ನಿಂದ ಒಟ್ಟು 37,000 ವಿದ್ಯಾರ್ಥಿನಿಯರಿಗೆ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳುವುದಕ್ಕೆ ವಿದ್ಯಾರ್ಥಿನಿಯರು ಹತ್ತನೇ ತರಗತಿಯನ್ನು ಮತ್ತು 12ನೇ ತರಗತಿಯನ್ನು ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಪೂರ್ಣಗೊಳಿಸಿರಬೇಕು.
ಈ ಯೋಜನೆಯ ಲಾಭ ಪಡೆಯಬೇಕಾದರೆ, ವಿದ್ಯಾರ್ಥಿನಿಯರು ಪ್ರತಿ ವರ್ಷ ತಪ್ಪದೇ ಉತೀರ್ಣರಾಗಬೇಕು. ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ಗ್ರಾಮೀಣ ಭಾಗದ ಮಕ್ಕಳಾಗಿದ್ದು, ಇಂತಹ ವಿದ್ಯಾರ್ಥಿನಿಯರಿಗೆ ಅನುಕೂಲವಾಗಲೆಂಬ ಸದುದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಿದ್ದಾರೆ ಎಂದರು.
ಮಹಾತ್ಮಾ ಗಾಂಧೀಜಿಯವರು ಗಳಿಸಿದ ಸಂಪತ್ತು ಸಮಾಜಕ್ಕೆ ಒಳಿತಿಗೆ ಬಳಕೆಯಾಗಬೇಕು ಎಂದಂತೆ ಅಜೀಂಪ್ರೇಜಿ, ತಾವು ಗಳಿಸಿದ ಸಂಪತ್ತನ್ನು ಸಾಮಾಜಿಕ ಕಾರ್ಯಗಳಿಗೆ ವಿನಿಯೋಗಿಸುತ್ತಿರುವುದು ಸ್ವಾಗತಾರ್ಹ. ಕರ್ನಾಟಕದಲ್ಲಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಮೊಟ್ಟೆ ಕೊಡುವ 1,500 ಕೋಟಿ ರೂಪಾಯಿಗಳ ಯೋಜನೆಗೆ ಕಳೆದ ವರ್ಷ ಒಡಂಬಡಿಕೆ ಮಾಡಿಕೊಂಡಿದ್ದೆವು. ಈ ವರ್ಷ ಉನ್ನತ ಶಿಕ್ಷಣಕ್ಕೆ ಬರುವ ಹೆಣ್ಣುಮಕ್ಕಳಿಗೆ ವಿದ್ಯಾರ್ಥಿ ವೇತನದ ರೂಪದಲ್ಲಿ ನೆರವು ನೀಡಲು ಮುಂದೆ ಬಂದಿದ್ದು, ಸಂತಸತಂದಿದೆ ಎಂದರು.