ಬೆಂಗಳೂರು: ಜಿಲ್ಲಾಧಿಕಾರಿ, ಜಿ.ಪಂ ಸಿಇಒ, ತಹಶೀಲ್ದಾರ್ , ಕಂದಾಯ ಅಧಿಕಾರಿಗಳು ಸೇರಿದಂತೆ ಅಧಿಕಾರಿ ವರ್ಗವನ್ನೇ ಕಳಿಸುವ ವಿನೂತನ ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಯೋಜನೆಗೆ ಕಂದಾಯ ಸಚಿವ ಆರ್.ಅಶೋಕ್ ಇಂದು ಚಾಲನೆ ನೀಡಲಿದ್ದಾರೆ.
ಆರ್.ಅಶೋಕ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಇಂದು ರಾಜ್ಯ ಸರ್ಕಾರದ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಅಲ್ಲಿಯೇ ಅವರು 24 ಗಂಟೆಗಳ ಕಾಲ ತಂಗಲಿದ್ದು, ಖುದ್ದು ಸಮಸ್ಯೆಯನ್ನು ಆಲಿಸಲಿದ್ದಾರೆ.
ಗ್ರಾಮವಾಸ್ತವ್ಯದಲ್ಲಿನ ಕಾರ್ಯಗಳು: ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರು ಭೇಟಿ ನೀಡಿದ ಗ್ರಾಮದಲ್ಲಿನ ಎಲ್ಲಾ ಪಹಣಿಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳುವುದು.
ಗ್ರಾಮದಲ್ಲಿ ಪೌತಿ ಹೊಂದಿದ ಖಾತೆದಾರರ ಹೆಸರನ್ನು ಪಹಣಿಯ ಕಾಲಂ 9 ರಿಂದ ತೆಗೆದು ನೈಜ ವಾರಸುದಾರರ ಹೆಸರಿಗೆ ಖಾತೆ ಮಾಡಲು ಕ್ರಮವಹಿಸುವುದು. ಗ್ರಾಮದ ಎಲ್ಲಾ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಪರಿಶೀಲಿಸುವುದು ಮತ್ತು ಬಿಟ್ಟು ಹೋದಂತಹ ಅರ್ಹ ಪ್ರಕರಣಗಳಿಗೆ ಸ್ಥಳದಲ್ಲಿಯೇ ಆದೇಶ ನೀಡುವುದು. ಗ್ರಾಮದಲ್ಲಿ ಸ್ಮಶಾನ ಲಭ್ಯತೆಯ ಬಗ್ಗೆ ಪರಿಶೀಲಿಸುವುದು ಹಾಗೂ ಸ್ಮಶಾನವಿಲ್ಲದಿದ್ದಲ್ಲಿ ಸರ್ಕಾರದ ಆದೇಶದಂತೆ ಕ್ರಮವಹಿಸುವುದು. ಗ್ರಾಮದಲ್ಲಿ ಆಶ್ರಯ ಯೋಜನೆಗೆ ಅವಶ್ಯಕತೆ ಇದ್ದಲ್ಲಿ ಲಭ್ಯ ಜಮೀನನ್ನು ಕಾಯ್ದಿರಿಸಲು ಕ್ರಮ ವಹಿಸುವುದು. ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವುಗೊಳಿಸುವುದು.
ಆಧಾರ ಕಾರ್ಡಿನ ಅನೂಕೂಲತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು. ಸರ್ಕಾರದಿಂದ ಸಾರ್ವಜನಿಕರಿಗೆ ದೊರೆಯಬಹುದಾದ ಸವಲತ್ತುಗಳ ಬಗ್ಗೆ ಅರಿವು ಮೂಡಿಸುವುದು. ಮತದಾರರ ಪಟ್ಟಿ ಪರಿಷ್ಕರಣೆ, ಬರ, ಪ್ರವಾಹ ಇದ್ದಲ್ಲಿ ಪರಿಹಾರ ಒದಗಿಸಲು ಕ್ರಮ ವಹಿಸುವುದು, ಪ್ರವಾಹದ ಹಾನಿ ತಡೆಗಟ್ಟಲು ಸಲಹೆ ನೀಡುವುದು, ಅತಿವೃಷ್ಠಿ, ಅನಾವೃಷ್ಠಿ ಎದುರಿಸಲು ಮುಂಜಾಗೃತೆ ಕ್ರಮವಹಿಸುವುದು.
ಹದ್ದು ಬಸ್ತು, ಪೋಡಿ ಮುಕ್ತಗ್ರಾಮ, ದರಕಾಸ್ತು ಪೋಡಿ, ಕಂದಾಯ ಗ್ರಾಮಗಳ ರಚನೆ, ಗ್ರಾಮದಲ್ಲಿ ಎಸ್.ಸಿ., ಎಸ್.ಟಿ., ಬಿ.ಸಿ.ಎಂ. ವಸತಿ ನಿಲಯಗಳಿದ್ದಲ್ಲಿ ಭೇಟಿ ನೀಡಿ ಸುಸ್ಥಿಯಲ್ಲಿರುವ ಬಗ್ಗೆ ಕ್ರಮ ವಹಿಸುವುದು. ಶಾಲೆ ಹಾಗೂ ಅಂಗನವಾಡಿಗಳಿಗೆ ಭೇಟಿ ನೀಡಿ ಆಹಾರ, ಕಲಿಕಾ ಕ್ರಮ ಇತ್ಯಾದಿ ಬಗ್ಗೆ ಪರಿಶೀಲಿಸುವುದು.
ಎಲ್ಲಾ ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ದೊರೆತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳುವುದು ಹಾಗೂ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಲ್ಲಿ ಅವರ ಮೇಲೆ ನಿಯಮಾನುಸಾರ ಕ್ರಮ ಕೈಗೊಳ್ಳಲು ಆದೇಶಿಸುವುದು, ಗುಡಿಸಲು ರಹಿತ ವಾಸದ ನಿರ್ಮಾಣ ಗ್ರಾಮಗಳಿಗೆ ಭೇಟಿ ನೀಡಿದ ಸಮಯದಲ್ಲಿ ಗುಡಿಸಲುಗಳು ಇರುವ ವಾಸದ ಮನೆಗಳನ್ನು ಪತ್ತೆಹಚ್ಚಿ ಲಭ್ಯವಿರುವ ಸರ್ಕಾರದ ವಿವಿಧ ಯೋಜನೆಗಳಡಿ ಮನೆ ಕಟ್ಟಲು ಅನುದಾನ ನೀಡುವಂತೆ ಸಂಬಂಧಪಟ್ಟ ಜಿಲ್ಲಾ ಮಟ್ಟದ ಅಧಿಕಾರಿಗೆ ನಿರ್ದೇಶನ ನೀಡುವುದು.
ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಉನ್ನತ ಅಧಿಕಾರಿಗಳು ಖುದ್ದಾಗಿ ಸ್ಪಂಧಿಸಲು ಹಾಗೂ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಅವರ ಸಮಸ್ಯೆಗಳನ್ನು ಪರಿಹರಿಸಲು ಅನುಕೂಲವಾಗುವಂತೆ ರಾಜ್ಯಸರ್ಕಾರವು ಈ ನೂತನ ಗ್ರಾಮವಾಸ್ತವ್ಯದಲ್ಲಿ ಅನುಸರಿಸಬೇಕಾದ ನಿಯಮಗಳ ಕುರಿತು ಮಾರ್ಗಸೂಚಿಗಳನ್ನು ನೀಡಿದೆ.