ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಕಳೆದ 15 ದಿನದಿಂದ ನಡೆಸುತ್ತಿದ್ದ ಮುಷ್ಕರ ಅಂತ್ಯಗೊಂಡಿದೆ ಎಂದು ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಘೋಷಿಸಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಸಾರಿಗೆ ಸಿಬ್ಬಂದಿಗಳು ಅನಿರ್ಧಿಷ್ಟಾವಧಿ ಮುಷ್ಕರ ಮುಂದೂಡಿದ್ದೇವೆ. ನಾಳೆಯಿಂದ ಸಾರಿಗೆ ಸಿಬ್ಬಂದಿಗಳು ಕೆಲಸಕ್ಕೆ ಹಾಜರಾಗಲಿದ್ದೇವೆ. ಈಗಾಗಲೇ ಅಮಾನತು, ವರ್ಗಾವಣೆಯನ್ನು ವಾಪಸ್ ತೆಗೆದುಕೊಳ್ಳಬೇಕು ಎಂದರು.
ಕೊರೊನಾ ಸಂದರ್ಭದಲ್ಲಿ ಮುಷ್ಕರ ಸರಿಯಲ್ಲ, ಕರ್ತವ್ಯಕ್ಕೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿದೆ. ನ್ಯಾಯಾಲಯಕ್ಕೆ ತೀರ್ಪಿಗೆ ಗೌರವ ಕೊಟ್ಟು ಮುಷ್ಕರ ವಾಪಸ್ ಪಡೆಯುತ್ತಿದ್ದೇವೆ. ಆದರೆ ನಮ್ಮ ಬೇಡಿಕೆ ಆಗ್ರಹದಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ. ಇನ್ನು ಸತ್ಯಾಗ್ರಹದಲ್ಲಿ ಭಾಗಿಯಾಗಿದ್ದ ನೌಕರರ ವಿರುದ್ಧ ಸರ್ಕಾರ ಕೈಗೊಂಡಿದ್ದ ಅಮಾನತು ಆದೇಶ, ವರ್ಗಾವಣೆ ಆದೇಶ, ಶೋಕಾಸ್ ನೋಟೀಸ್ ಮೊದಲಾದ ದಮನಕಾರಿ ನೀತಿಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.



